ಕಳಸಾ-ಬಂಡೂರಿ ಯೋಜನೆ : ಸರ್ವಪಕ್ಷಗಳ ಸಭೆ ಕರೆ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 13 : ರಾಜ್ಯಾದ್ಯಂತ ತೀವ್ರ ಚರ್ಚೆಗೆ ಮತ್ತು ರಾಜಕೀಯ ಪಕ್ಷಗಳ ನಡುವಿನ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿರುವ ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಕೆಲವು ದಿನಗಳ ಹಿಂದೆಯೇ ಕಳಸಾ-ಬಂಡೂರಿ ವಿಚಾರದಲ್ಲಿ ಮುಂದಿನ ನಡೆ ಬಗ್ಗೆ ಚರ್ಚಿಸಲು ಸರ್ವಪಕ್ಷಗಳ ಸಭೆ ನಡೆಸಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ಅಕ್ಟೋಬರ್ 17ರ ಶನಿವಾರ ಸರ್ವಪಕ್ಷಗಳ ಸಭೆಯನ್ನು ವಿಧಾನಸೌಧದಲ್ಲಿ ಕರೆಯಲಾಗಿದೆ. ['ಮೋದಿ ಜೊತೆ ಮಾತನಾಡಲು ಬಿಜೆಪಿಯವರಿಗೆ ಧಮ್ ಇಲ್ಲ']
ಕಳಸಾ-ಬಂಡೂರಿ ಯೋಜನೆ ವಿಚಾರದಲ್ಲಿ ನಡೆಯುತ್ತಿರುವ 2ನೇ ಸರ್ವಪಕ್ಷ ಸಭೆ ಇದಾಗಿದೆ. ಒಮ್ಮೆ ಸರ್ವಪಕ್ಷ ಸಭೆ ನಡೆಸಿ ನಿಯೋಗವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ತೆಗೆದುಕೊಂಡು ಹೋಗಲಾಗಿತ್ತು. ಆದರೆ, ಪ್ರಧಾನಿ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿರಲಿಲ್ಲ. ಆದ್ದರಿಂದ, ಉತ್ತರ ಕರ್ನಾಟಕ ಭಾಗದಲ್ಲಿ ಯೋಜನೆ ಜಾರಿಗೆ ಒತ್ತಾಯಿಸಿ ನಿರಂತರ ಪ್ರತಿಭಟನೆಗಳು ನಡೆಯುತ್ತಿವೆ.[ಏನಿದು ಕಳಸಾ-ಬಂಡೂರಿ ಯೋಜನೆ?]
ಸರ್ವಪಕ್ಷ ನಿಯೋಗ ಪ್ರಧಾನಿ ಅವರನ್ನು ಭೇಟಿ ಮಾಡಿ ಬಂದ ನಂತರ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಕಳಸಾ-ಬಂಡೂರಿ ಯೋಜನೆ ಬಗ್ಗೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಆದ್ದರಿಂದ, ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಲು ಈ ಸರ್ವಪಕ್ಷಗಳ ಸಭೆಯನ್ನು ಶನಿವಾರ ಕರೆಯಲಾಗಿದೆ. [ಮಹಾದಾಯಿ ವಿವಾದ: ಚರ್ಚೆಗೆ ಬನ್ನಿ ಎಂದು ಎಚ್ಡಿಕೆಯಿಂದ ಆಹ್ವಾನ]
ನ್ಯಾಯಾಧೀಕರಣಕ್ಕೆ ಅರ್ಜಿ : ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆ ವಿಚಾರದಲ್ಲಿ ಮಧ್ಯಂತರ ತೀರ್ಪು ನೀಡುವಂತೆ ಕೋರಿ ಮಹಾದಾಯಿ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನ್ಯಾಯಮಂಡಳಿ ಮುಂದೆ ಅರ್ಜಿ ಸಲ್ಲಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಮುನ್ನ ಸರ್ವಪಕ್ಷ ಸಭೆ ಕರೆಯಲಾಗಿದೆ.