ನೀವು ಚೊಚ್ಚಲ ಕೃತಿ ಪ್ರಕಟಿಸಬೇಕೆ? ಇಲ್ಲಿದೆ ಅವಕಾಶ
ಬೆಂಗಳೂರು, ಜೂನ್ 11: ಕರ್ನಾಟಕ ಪುಸ್ತಕ ಪ್ರಾಧಿಕಾರವು 2017ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು, ಪ್ರೋತ್ಸಾಹಧನ ನೀಡುತ್ತಿದ್ದು ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
ಆಧ್ಯಾತ್ಮಿಕ ಗುರು ಶ್ರೀ ಎಮ್ ಅವರ ಶೂನ್ಯ- ಎ ನಾವೆಲ್ ಲೋಕಾರ್ಪಣೆ
ಆಯ್ಕೆಗಾಗಿ ಸಲ್ಲಿಸುವ ಹಸ್ತ ಪ್ರತಿಯು ಡಿ.ಟಿ.ಪಿ ಮಾಡಿಸಿದಾಗಿ 1/8 ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.
ಕೃತಿಯು ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು.
ಅಲ್ಲದೆ, ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ/ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ ಕಾರಣ ಹಸ್ತಪ್ರತಿಯ/ಡಿ.ಟಿ.ಪಿ. ಪ್ರತಿಯ ಎರಡನೇ ಪ್ರತಿಯನ್ನು ಸಲ್ಲಿಸಲು ತಿಳಿಸಿದೆ. ಅರ್ಜಿಗಳನ್ನು ಜೂನ್ 30ರೊಳಗೆ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆಗೆ ಕಳುಹಿಸಬೇಕು.