ಸಿರಿಗನ್ನಡ ಮಳಿಗೆಯಲ್ಲಿ ಶೇ50ರಂತೆ ಪುಸ್ತಕ ಮಾರಾಟ
ಬೆಂಗಳೂರು, ಜನವರಿ 08 : ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶದಿಂದ ಕನ್ನಡ ಪುಸ್ತಕ ಪ್ರಾಧಿಕಾರವು ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮಾಡುತ್ತಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 360 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.
ಈ ನಿಟ್ಟಿನಲ್ಲಿ 2018ರ ಜನವರಿ ಮಾಹೆಯಲ್ಲಿ ಮಾತ್ರ ತಿಂಗಳು ಪೂರ್ತಿ ಎಲ್ಲ ಪುಸ್ತಕಗಳನ್ನು ಶೇಕಡಾ 50ರ ರಿಯಾಯಿತಿಯಲ್ಲಿ ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಜಿಲ್ಲಾವಾರು ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಿದೆ.
ಇದಲ್ಲದೆ, ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ 50%ರ ರಿಯಾಯಿತಿಯಲ್ಲಿ ಖರೀದಿಸಬಹುದು. ಕನ್ನಡ ಪುಸ್ತಕ ಪ್ರಾಧಿಕಾರ.ಕಾಂಗೆ ಭೇಟಿ, ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್ ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ನೇರವಾಗಿ ಪಡೆಯಬಹುದಾಗಿದೆ.