ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಗೆ ದಿನಾಂಕ ನಿಗದಿ
ಬೆಂಗಳೂರು, ಅಕ್ಟೋಬರ್ 13; ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ನವೆಂಬರ್ 21ರಂದು ಚುನಾವಣೆ ನಡೆಯಲಿದ್ದು, 3,10,109 ಮತದಾರರು ಹಕ್ಕು ಚಲಾವಣೆ ಮಾಡಲಿದ್ದಾರೆ.
ಕರ್ನಾಟಕ ಸರ್ಕಾರ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ, ಗಡಿನಾಡು ಘಟಕಗಳ ಅಧ್ಯಕ್ಷರ ಚುನಾವಣೆ ನಡೆಸಲು ಒಪ್ಪಿಗೆ ನೀಡಿದೆ. ಬುಧವಾರ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಸರ್ಕಾರಿ ಕಾರ್ಯಕ್ರಮದಲ್ಲೇ ಕನ್ನಡ ಕಡೆಗಣನೆ, ಕರವೇ ಎಚ್ಚರಿಕೆ
ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ ಮೇ 9ರಂದು ನಡೆಯಬೇಕಿತ್ತು. ನಾಮಪತ್ರ ಪರಿಶೀಲನೆ ಸೇರಿದಂತೆ ವಿವಿಧ ಪ್ರಕ್ರಿಯೆ ಸಹ ಪೂರ್ಣಗೊಂಡಿತ್ತು. ಆದರೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಚುನಾವಣೆ ಮುಂದೂಡಲಾಗಿತ್ತು.
ಅಯ್ಯೋ ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!
ರಾಜ್ಯಾಧ್ಯಕ್ಷ ಸ್ಥಾನಕ್ಕೆ 21 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಏಪ್ರಿಲ್ 26ರಂದು ಆದೇಶ ಹೊರಡಿಸಿದ್ದ ಸರ್ಕಾರ ಚುನಾವಣಾ ಪ್ರಕ್ರಿಯೆಯನ್ನು ಮುಂದೂಡಿದ ಹಂತದಿಂದಲೇ ಯಥಾವತ್ತಾಗಿ ಮುಂದುವರೆಸಲಾಗುತ್ತದೆ ಎಂದು ಹೇಳಿತ್ತು.
ಕನ್ನಡ ಮಾಧ್ಯಮದಲ್ಲಿ ಇಂಜಿಯರಿಂಗ್ ಶಿಕ್ಷಣಕ್ಕೆ ಅನುಮತಿ; ಸಿಎಂ ಬೊಮ್ಮಾಯಿ
ಬುಧವಾರ ಚುನಾವಣಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದು, ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ. ಸ್ಥಗಿತಗೊಂಡಿದ್ದ ಚುನಾವಣಾ ಪ್ರಕ್ರಿಯೆ ಯಥಾವತ್ತಾಗಿ ನಡೆಸುವುದಾಗಿ ತಿಳಿಸಲಾಗಿದೆ.
ವೇಳಾಪಟ್ಟಿ; ನವೆಂಬರ್ 21ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ರಾಜ್ಯದ ತಾಲೂಕು ಕೇಂದ್ರಗಳು, ಬೆಂಗಳೂರು ನಗರದಲ್ಲಿ 27 ವಿಧಾನಸಭಾ ಕ್ಷೇತ್ರದ ಆಯ್ದ ಸ್ಥಳಗಳಲ್ಲಿ ಮತದಾನ ಮಾಡಲು ಅವಕಾಶವಿದೆ.
ಜಿಲ್ಲಾ ಘಟಕಗಳ ಅಧ್ಯಕ್ಷರ ಚುನಾವಣೆ ಫಲಿತಾಂಶ ನವೆಂಬರ್ 21ರಂದೇ ಘೋಷಣೆಯಾಗಲಿದೆ. ಆದರೆ ರಾಜ್ಯಾಧ್ಯಕ್ಷರ, ಗಡಿನಾಡ ಘಟಕಗಳ ಅಧ್ಯಕ್ಷರ ಚುನಾವಣೆ ಫಲಿತಾಂಶ ನವೆಂಬರ್ 24ರಂದು ಪ್ರಕಟವಾಗಲಿದೆ.
ರಾಜ್ಯ ಘಟಕದ ಅಭ್ಯರ್ಥಿಗಳು; ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ 21 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಯಾರಿಗೆ ಗೆಲುವು ಸಿಗಲಿದೆ ಎಂಬುದು ನವೆಂಬರ್ 24ರಂದು ತಿಳಿಯಲಿದೆ.
ಮಹೇಶ್ ಜೋಶಿ, ರಾಜಶೇಖರ ಮುಲಾಲಿ, ಮ. ಚಿ. ಕೃಷ್ಣ, ವ. ಚ. ಚನ್ನೇಗೌಡ, ಬಸವರಾಜ ಶಿ. ಹಳ್ಳೂರ, ಬಾಡದ ಭದ್ರಿನಾಥ್, ಶಿವರಾಜ ಪಾಟೀಲ, ವೈ. ರೇಣುಕಾ ಸೇರಿದಂತೆ 21 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಕಣದಲ್ಲಿರುವ ಅಭ್ಯರ್ಥಿಗಳು; ರಾಜ್ಯಾಧ್ಯಕ್ಷ ಸ್ಥಾನಕ್ಕೆ 21 ಅಭ್ಯರ್ಥಿಗಳು, 30 ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ 223 ಅಭ್ಯರ್ಥಿಗಳು. ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಗಳಿಗೆ 16 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಚುನಾವಣೆಯಲ್ಲಿ 3,10,109 ಮತದಾರರು ಹಕ್ಕು ಚಲಾವಣೆ ಮಾಡಲಿದ್ದಾರೆ. ರಾಜ್ಯದ ಎಲ್ಲಾ ತಾಲೂಕುಗಳು ಹಾಗೂ ಕೆಲವು ಹೋಬಳಿ ಕೇಂದ್ರಗಳು ಸೇರಿದಂತೆ ಒಟ್ಟು 420 ಮತಗಟ್ಟೆಗಳನ್ನು ತಾಲೂಕು/ ಹೋಬಳಿ ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತದೆ.
ಆದೇಶದಲ್ಲಿ ಏನಿದೆ?; ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ/ ಜಿಲ್ಲಾ/ ಗಡಿನಾಡು ಅಧ್ಯಕ್ಷರ ಚುನಾವಣೆಯನ್ನು ನಡೆಸಲು ಸರ್ಕಾರದ 30/12/2020ರ ಆದೇಶದಂತೆ ಐಎಎಸ್ ಅಧಿಕಾರಿ ಜಿ. ಎಂ. ಗಂಗಾಧರಸ್ವಾಮಿ ಕೇಂದ್ರ ಚುನಾವಣಾಧಿಕಾರಿಗಳಾಗಿ ನೇಮಕಗೊಂಡಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣಾ ಪ್ರಕ್ರಿಯೆಯನ್ನು ಪ್ರಸ್ತುತ ಯಾವ ಹಂತದಲ್ಲಿ ಇರುತ್ತದೆಯೋ ಅಲ್ಲಿಂದ ಮುಂದಿನ ಆದೇಶದವರೆಗೂ ಮುಂದೂಡಿ, ಮುಂದೆ ಇದೇ ಚುನಾವಣೆ ಪ್ರಕ್ರಿಯೆಯನ್ನು ಮುಂದೂಡಿದ ಹಂತದಿಂದ ಯಥಾವತ್ತಾಗಿ ಮುಂದುವರೆಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿತ್ತು.
12/10/2021ರಂದು ಸರ್ಕಾರ ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಯನ್ನು ನಡೆಸಲು ಅನುಮತಿ ನೀಡಿದೆ. ಸ್ಥಗಿತಗೊಂಡಿದ್ದ ಚುನಾವಣಾ ಪ್ರಕ್ರಿಯೆಯನ್ನು ಯಥಾಸ್ಥಿತಿಯಲ್ಲಿ ಮುಂದಿನಂತೆ ನಿಯಮಾನುಸಾರ ನಡೆಸಲು ಅಗತ್ಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ. ನವೆಂಬರ್ 21ರಂದು ಚುನಾವಣೆ ನಡೆಸಲಾಗುತ್ತದೆ.