SSC Job: ಆಯೋಗದ ಕನ್ನಡ ವಿರೋಧಿ ನೀತಿ ವಿರುದ್ಧ ಕಾನೂನು ಹೋರಾಟಕ್ಕೆ ಕಸಾಪ ಚಿಂತನೆ
ಬೆಂಗಳೂರು, ಅಕ್ಟೋಬರ್ 30: ಕೇಂದ್ರ ಭದ್ರತಾ ಪಡೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಸಿಬ್ಬಂದಿ ನೇಮಕಾತಿ ಆಯೋಗವು (ಸ್ಟಾಫ್ ಸೆಲೆಕ್ಷನ್ ಕಮಿಷನ್) ಮತ್ತೆ ಪ್ರಾದೇಶಿಕ ಭಾಷೆಗಳ ವಿರೋಧಿ ನೀತಿ ಅನುಸರಿಸಿದೆ. ಇದರ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ತು ನ್ಯಾಯಾಂಗ ಹೋರಾಟ ನಡೆಸಲು ಚಿಂತಿಸಿದೆ.
ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮಹೇಶ್ ಜೋಶಿ ಈ ಸಂಬಂಧ ಭಾನುವಾರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಸಿಬ್ಬಂದಿ ನೇಮಕಾತಿ ಆಯೋಗ (ಸ್ಟಾಫ್ ಸೆಲೆಕ್ಷನ್ ಕಮಿಷನ್) ನಡೆಸುತ್ತಿರುವ ಪ್ರವೇಶ ಪರೀಕ್ಷೆಯಲ್ಲಿ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಕಾನ್ಸ್ಟೇಬಲ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಪ್ರವೇಶ ಪರೀಕ್ಷೆ ನಡೆಸುತ್ತಿರುವುದಕ್ಕೆ ಹಿಂದೆಯಿಂದಲೂ ವಿರೋಧ ಇದೆ.
ಪ್ರಾದೇಶಿಕ ಭಾಷಾ ವಿರೋಧಿ ನೀತಿ ಮೂಲಕ ಹಿಂದಿ ಭಾಷೆಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ ಎನ್ನುವ ರೀತಿಯಲ್ಲಿ ಆಯೋಗ ನಡೆದುಕೊಳ್ಳುತ್ತಿರುವುದು ಖಂಡನೀಯ ಎಂದು ಅವರು ಉಲ್ಲೇಖಿಸಿದ್ದಾರೆ.

ಆಂಗ್ಲ ಭಾಷೆಯಲ್ಲಿ ಮಾತ್ರ ಪರೀಕ್ಷೆ ಅವಕಾಶ
ಗಡಿ ಭದ್ರತಾ ಪಡೆ (ಬಿಎಸ್ಎಫ್), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಏಫ್) ಸೇರಿದಂತೆ ಕೇಂದ್ರ ಭದ್ರತಾ ಪಡೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇತ್ತೀಚಿಗೆ ಆಯೋಗವು ಅರ್ಜಿ ಆಹ್ವಾನಿಸಿದೆ. ಅದರಲ್ಲಿ ಪ್ರಾದೇಶಿಕ ಭಾಷೆಗಳಿಗೆ ಮನ್ನಣೆ ನೀಡದ ವಿರೋಧಿ ನೀತಿ ಅನುಸರಿಸಿರುವು ಸ್ಪಷ್ಟವಾಗಿದೆ. ಕೇಂದ್ರ ಭದ್ರತಾ ಪಡೆಗಳಲ್ಲಿ ಖಾಲಿ ಇರುವ 24,369 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಆಯೋಗ ಅದನ್ನು ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಿದೆ ಎಂದು ಅವರು ದೂರಿದರು.

ಕನ್ನಡ ಭಾಷೆಗೆ ಅವಕಾಶ ನೀಡದ ಆಯೋಗ
ನೇಮಕಾತಿ ಪ್ರಕ್ರಿಯೆಯು ಕಂಪ್ಯೂಟರ್ ಆಧರಿತ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ, ವೈದ್ಯಕೀಯ ಪರೀಕ್ಷೆ ಒಳಗೊಂಡಿದೆ. ಆದರೆ ಎಲ್ಲಿಯೂ ಕನ್ನಡವನ್ನು ಬಳಸಲು ಅವಕಾಶ ಕಲ್ಪಿಸಲಾಗಿಲ್ಲ. ಆಯೋಗವು ಈ ಧೋರಣೆಯಿಂದ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಹೀಗಾಗಿ ಕೇಂದ್ರ ಪೊಲೀಸ್ ಸಂಸ್ಥೆಗಳಲ್ಲಿ ಕನ್ನಡಿಗರು ಕೆಲಸ ಮಾಡುವ ಅವಕಾಶದಿಂದ ವಂಚಿತರಾಗುತ್ತಾರೆ ಎಂದು ಡಾ. ಮಹೇಶ ಜೋಶಿ ವಿವರಿಸಿದ್ದಾರೆ.

ದ್ವಿಭಾಷೆಯ ಸಮಜಾಯಿಸಿ ನೀಡಿದ ಆಯೋಗ
ಕರ್ನಾಟಕದ ಬೆಳಗಾವಿ, ಬೆಂಗಳೂರು, ಕಲಬುರಗಿ, ಮಂಗಳೂರು, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ಸಿಬ್ಬಂದಿ ನೇಮಕಾತಿ ಆಯೋಗದ (ಸ್ಟಾಫ್ ಸೆಲೆಕ್ಷನ್ ಕಮಿಷನ್) ಪ್ರವೇಶ ಪರೀಕ್ಷೆ ನಡೆಯಲಿದೆ. ಕಂಪ್ಯೂಟರ್ ಆಧರಿತ ಈ ಪರೀಕ್ಷೆಯಲ್ಲಿ ಕೇವಲ ಇಂಗ್ಲಿಷ್, ಹಿಂದಿ ಭಾಷೆ ಮಾತ್ರ ಇರಲಿದೆ. ಜೊತೆಗೆ ಅಭ್ಯರ್ಥಿಗಳ ಇಂಗ್ಲಿಷ್, ಹಿಂದಿ ಭಾಷಾ ಜ್ಞಾನ ಪರೀಕ್ಷಿಸಲು ಪ್ರಸ್ತುತ ದ್ವಿಭಾಷೆಯನ್ನು ಬಳಸಲಾಗುತ್ತಿದೆ ಎಂದು ಆಯೋಗ ಸಮಜಾಯಿಸಿ ನೀಡಿದೆ.
ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಎಂಬ ನಿಯಮವಿದೆ. ಹತ್ತನೇ ತರಗತಿಯವರೆಗೆ ಓದಿದ ಪ್ರಾದೇಶಿಕ ಅಭ್ಯರ್ಥಿಗಳಿಗೆ ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಎಷ್ಟರ ಮಟ್ಟಿಗೆ ಪ್ರಾಬಲ್ಯವಿರುವುದಕ್ಕೆ ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

24,369 ಅಭ್ಯರ್ಥಿಗಳಿಗೆ ಉದ್ಯೋಗವಕಾಶ
ಆಯೋಗವು ಈ ಬಾರಿ ಎಸ್ಎಸ್ಎಲ್ಸಿ ಪಾಸಾದ 24,369 ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗ ಅವಕಾಶ ನೀಡಿದ್ದೇನೋ ಹೌದು. ಆದರೆ ಕನ್ನಡ ಭಾಷೆಯನ್ನೇ ನಂಬಿದವರಿಗೆ ಮೂಗಿಗೆ ತುಪ್ಪ ಸವರುವುದು ಸರಿಯಲ್ಲ. ಈಗಾಗಲೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಕೆಲವು ಪರಿಷತ್ತಿನ ಸದಸ್ಯರು ಸಿಬ್ಬಂದಿ ನೇಮಕಾತಿ ಆಯೋಗದ ಈ ಕನ್ನಡ ವಿರೋಧಿ ನೀತಿಯನ್ನು ಪ್ರಶ್ನಿಸಿ ನ್ಯಾಯಾಲಯದ ಮೇಟ್ಟಿಲೇರಲು ಸೂಚಿಸಿದ್ದಾರೆ ಎಂದರು.
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಮೊಟ್ಟಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ನೀಡಿದ ವಿಶ್ರಾಂತ ನ್ಯಾ. ಅರಳಿ ನಾಗರಾಜ್ ಅವರೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತು ಸಮಾಲೋಚನೆ ನಡೆಸಲಿದೆ. ಅವರಿಂದ ಸಲಹೆ ಪಡೆದ ನಂತರ ನ್ಯಾಯಾಂಗ ಹೋರಾಟ ಬಗ್ಗೆ ನಿರ್ಧರಿಸಲಾಗುವುದು ಎಂದು ಡಾ. ಮಹೇಶ ಜೋಶಿ ತಿಳಿಸಿದ್ದಾರೆ.












Click it and Unblock the Notifications