ಕನ್ನಡ ಶಾಲೆಗಳನ್ನು ಉಳಿಸಲು ಜಗನ್ಗೆ ಸುರೇಶ್ ಕುಮಾರ್ ಪತ್ರ
ಬೆಂಗಳೂರು, ಜನವರಿ 29 : ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರವೊಂದನ್ನು ಬರೆದಿದ್ದಾರೆ. ಇತ್ತೀಚೆಗೆ ಆಂಧ್ರ ಸರ್ಕಾರ ತನ್ನ ರಾಜ್ಯದಲ್ಲಿನ ಎಲ್ಲ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನಾಗಿ ಪರಿವರ್ತಿಸುವ ಹಾಗೆಯೇ ಪ್ರತಿ ವಿದ್ಯಾರ್ಥಿಯನ್ನು ತೆಲುಗು ಇಲ್ಲವೇ ಉರ್ದು ಭಾಷೆ ಕಲಿಯಬೇಕೆಂಬ ನಿರ್ಧಾರ ಕೈಗೊಂಡಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಂಧ್ರಪ್ರದೇಶ ಸರ್ಕಾರದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಬುಧವಾರ ಅವರವು ಜಗನ್ ಮೋಹನ್ ರೆಡ್ಡಿಗೆ ಈ ಕುರಿತು ಪತ್ರವನ್ನು ಬರೆದಿದ್ದಾರೆ. ಗಡಿಯಲ್ಲಿ ವಾಸಿಸುವ ಕನ್ನಡಿಗರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಕೈಬಿಡಬೇಕೆಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಕರ್ನಾಟಕ ಮತ್ತು ಆಂಧ್ರಪದೇಶ ರಾಜ್ಯಗಳ ಸಂಬಂಧ ಐತಿಹಾಸಿಕವಾದುದು. ಕೃಷ್ಣದೇವರಾಯನ ಕಾಲಕ್ಕಿಂತಲೂ ಮೊದಲಿನಿಂದಲೂ ಈ ಎರಡೂ ರಾಜ್ಯಗಳು ಯಾವಾಗಲೂ ಸಹೋದರ ಸಂಬಂಧದಲ್ಲೇ ನಡೆದುಕೊಂಡು ಬರುತ್ತಿವೆ. ಭಾಷೆ ಸೇರಿದಂತೆ ಎಲ್ಲ ವಿಷಯಗಳಲ್ಲೂ ನಮ್ಮೆರಡು ರಾಜ್ಯಗಳು ಪರಸ್ಪರ ಸೌಹಾರ್ದದಿಂದಲೇ ಇವೆ. ಇದು ಎರಡೂ ರಾಜ್ಯಗಳಿಗೂ ಅಭಿಮಾನದ ಸಂಗತಿಯಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಎಲ್ಲಾ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನಾಗಿ ಪರಿವರ್ತಿಸುವ, ಪ್ರತಿ ವಿದ್ಯಾರ್ಥಿಯನ್ನು ತೆಲುಗು ಇಲ್ಲವೇ ಉರ್ದು ಭಾಷೆ ಕಲಿಯಬೇಕೆಂಬ ನಿರ್ಧಾರ ಕೈಗೊಂಡಿರುವುದು ಎರಡು ರಾಜ್ಯಗಳ ನಡುವಿನ ಸೌಹಾರ್ದಕ್ಕೆ ಧಕ್ಕೆಯಾದಂತಾಗಿದೆ.
ಆಂಧ್ರಪ್ರದೇಶದ ಗಡಿ ಪ್ರದೇಶದಲ್ಲಿ ವಾಸಿಸುತ್ತಿರುವ ಕನ್ನಡಿಗರ ಮನೋಸ್ಥೈರ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಸಾಂಸ್ಕೃತಿಕ ಸಂಘರ್ಷ ಇತರೆ ಯಾವುದೇ ಸಾಮಾಜಿಕ ಸಂಘರ್ಷಗಳಿಗಿಂತಲೂ ತೀವ್ರ ನೋವಿನ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
ನಮ್ಮ ರಾಜ್ಯದ ಉದಾರ ಮತ್ತು ಸಮಗ್ರ ಆಡಳಿತ ಕಾರ್ಯವಿಧಾನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹತ್ತಾರು ತೆಲುಗು ಮಾಧ್ಯಮ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ಆಂಧ್ರಪ್ರದೇಶ ಕೈಗೊಂಡ ನಿರ್ಧಾರ ಕನ್ನಡ ಭಾಷಾ ಶಿಕ್ಷಕರ ಜೀವನವನ್ನು ಅಪಾಯಕ್ಕೆ ಸಿಕ್ಕಿಸುವುದು ಮಾತ್ರವೇ ಅಲ್ಲ, ಕರ್ನಾಟಕ ಹೊರಗೆ ವಾಸಿಸುತ್ತಾರೆಂಬ ಒಂದೇ ಕಾರಣಕ್ಕಾಗಿ ಕನ್ನಡಿಗರ ಮಕ್ಕಳು ತಮ್ಮ ಮಾತೃಭಾಷೆಯಿಂದ ವಂಚಿತವಾಗಬೇಕಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕನ್ನಡವನ್ನು ಭಾಷೆಯಾಗಿ ಇಲ್ಲವೇ ಮಾಧ್ಯಮವಾಗಿ ಕಲಿಸುವ ಅಲ್ಪಸಂಖ್ಯಾತ ಭಾಷಾ ಶಾಲೆಗಳನ್ನು ಮುಂದುವರೆಸುವ ಮೂಲಕ ತಮ್ಮ ರಾಜ್ಯದಲ್ಲಿ ವಾಸಿಸುವ ಕನ್ನಡಿಗರ ಹಿತಾಸಕ್ತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಕೋರಿದ್ದಾರೆ.












Click it and Unblock the Notifications