83ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಚಂಪಾ ಆಯ್ಕೆ
Recommended Video
ಬೆಂಗಳೂರು, ಸೆ. 25: ಮೈಸೂರಿನಲ್ಲಿ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ(ಚಂಪಾ) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರು ಸೋಮವಾರ ಘೋಷಿಸಿದರು.
83ನೇ ಕನ್ನಡ ಸಾಹಿತ್ಯ ಸಮ್ಮೇಳನವು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನವೆಂಬರ್ 24,25,26ರಂದು ನಡೆಸಲು ಉದ್ದೇಶಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ಸೋಮವಾರ(ಸೆ. 25) ನಡೆದ ಕನ್ನಡ ಸಾಹಿತ್ಯ ಪರಿಷತ್ ನ 101ನೇ ಕಾರ್ಯಕಾರಿಣಿ ಸಭೆಯಲ್ಲಿ ಚಂಪಾ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಡಾ. ವೀಣಾ ಶಾಂತೇಶ್ವರ, ಎನ್. ಆರ್. ನಾಯಕ್, ಡಾ. ಲತಾ ರಾಜಶೇಖರ್, ಸಾರಾ ಅಬೂಬಕ್ಕರ್ ಹೆಸರು ಆಯ್ಕೆಯ ಪಟ್ಟಿಯಲ್ಲಿತ್ತು.
ಈ ಬಾರಿಯ ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡಿದ ಡಾ. ಮನು ಬಳಿಗಾರ್ ನೇತೃತ್ವದ ಸಮಿತಿಯು 83ನೇ ಸಾಹಿತ್ಯ ಸಮ್ಮೇಳನದ ವಿಚಾರ ಗೋಷ್ಠಿ, ಕಾರ್ಯಕ್ರಮದ ರೂಪು ರೇಷೆಗಳನ್ನು ವಿನ್ಯಾಸಗೊಳಿಸಲಿದೆ.
ಕವಿ ಡಾ. ಮುಡ್ನಾಕೂಡು ಚಿನ್ನಸ್ವಾಮಿ, ಡಾ. ಎಚ್.ಎಸ್.ವೆಂಕಟೇಶಮೂರ್ತಿ, ಕಾ.ತ. ಚಿಕ್ಕಣ್ಣ, ಡಾ. ಕೆ.ವೈ. ನಾರಾಯಣಸ್ವಾಮಿ ಹಾಗೂ ಪ್ರೊ. ಎಂ.ಎಸ್.ಆಶಾದೇವಿ ಅವರು ಸಮಿತಿಯಲ್ಲಿದ್ದಾರೆ ಎಂದು ಎಂದು ಕಸಾಪ ಅಧ್ಯಕ್ಷ ಮನು ಬಳಿಗಾರ್ ಹೇಳಿದರು.
ಚಂಪಾ ಬಗ್ಗೆ : ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ಬಹುಮುಖ ಪ್ರತಿಭೆ ಮೂಲಕ ನಾಡಿನ ಮನೆ ಮಾತಾಗಿರುವ ಚಂದ್ರಶೇಖರ ಪಾಟೀಲ ಅವರು ಹಾವೇರಿಯ ಸವಣೂರು ತಾಲೂಕಿನ ಹತ್ತೀಮತ್ತೂರಿನವರು.
ಕವನಗಳ ಮೂಲಕ ಕನ್ನಡ ಸಾಹಿತ್ಯ ಕೃಷಿ ಆರಂಭಿಸಿದ ಚಂಪಾ ಅವರು, ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ ಮುಂತಾದ ನಾಟಕಗಳನ್ನು ರಚಿಸಿದ್ದಾರೆ.
ಸಮಾನ ಮನಸ್ಕರೊಡನೆಗೂಡಿ ಸಂಕ್ರಮಣ ಹೆಸರಿನಲ್ಲಿ ಪತ್ರಿಕೆಯನ್ನು ನಡೆಸಿದರು. ತುರ್ತು ಪರಿಸ್ಥಿತಿಯಲ್ಲಿ ಜೈಲುವಾಸವನ್ನು ಅನುಭವಿಸಿದರು.
ರಾಜ್ಯ ಸಾಹಿತ್ಯ, ನಾಟಕ ಅಕಾಡೆಮಿ, ಪಂಪ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳನ್ನು ಪಡೆದಿರುವ ಚಂಪಾ ಅವರು ತಮ್ಮನ್ನು ತಾವು ಅಂತ್ಯಕವಿ ಎಂದು ಹಾಸ್ಯ ಮಾಡಿಕೊಂಡಿದ್ದರು.