ಕರಾವಳಿ, ದಕ್ಷಿಣ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಮಳೆ ಸಂಭವ
ಬೆಂಗಳೂರು, ಜೂನ್ 19: ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮೋಡ ಮುಸುಕಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಮಳೆಯಾಗುವ ಸಂಭವವಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ದಕ್ಷಿಣ ಕರ್ನಾಟಕದ ಚಾಮಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಗಾಳಿ ಮತ್ತು ಸಿಡಿಲು-ಗುಡುಗಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಇನ್ನುಳಿದಂತೆ ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಮಾನ್ಯ ವಾತಾವರಣ ಇರಲಿದೆ.ನೈಋತ್ಯ ಮಾನ್ಸೂನ್ ಮಾರುಗತಳು ಮಹಾರಾಷ್ಟ್ರವನ್ನು ದಾಟಿ ಉತ್ತರದೆಡೆಗೆ ತೆರಳುತ್ತಿದ್ದು ಉತ್ತರದ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಇಲಾಖೆ ಎಚ್ಚರಿಸಿದೆ.
ಪಂಜಾಬ್, ಹರಿಯಾಣ, ಚಂಡೀಘಡ, ದೆಹಲಿ ಮತ್ತು ಉತ್ತರ ಪ್ರದೇಶಗಳಲ್ಲಿ ಬಿರುಗಾಳಿ ಕಾಣಿಸಿಕೊಳ್ಳಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ.
ದಕ್ಷಿಣ ಭಾರತದ ಕರ್ನಾಟಕ, ಆಂದ್ರಪ್ರದೇಶ, ತಮಿಳುನಾಡು, ಕೇರಳ, ಪಾಂಡಿಚೆರಿಗಳಲ್ಲಿ ಸಾಧಾರಣ ಮಳೆಯಷ್ಟೆ ಆಗುವು ಸಾಧ್ಯತೆ ಇದೆ ಎಂದಿದೆ ಹವಾಮಾನ ಇಲಾಖೆ.