ನಾಳೆಯಿಂದ ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ಆರಂಭ
ಬೆಂಗಳೂರು, ಮಾರ್ಚ್ 3: ಮಾರ್ಚ್ 4ರಿಂದ ರಾಜ್ಯದಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಆರಂಭವಾಗಲಿದೆ.
ಈ ಬಾರಿ ಒಟ್ಟು 1,016 ಕೇಂದ್ರಗಳಲ್ಲಿ 6,80,049 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. 2, 16,930 ವಿದ್ಯಾರ್ಥಿಗಳು ವಿಜ್ಞಾನ ವಿಭಾಗ, 2,61,674 ವಾಣಿಜ್ಯ ವಿಭಾಗ ಮತ್ತು 2,01,445 ಕಲಾ ವಿಭಾಗದ ವಿದ್ಯಾರ್ಥಿಗಳಿದ್ದಾರೆ. ಒಟ್ಟಾರೆ ವಿದ್ಯಾರ್ಥಿಗಳಲ್ಲಿ 3,41,618 ಬಾಲಕಿಯರಿದ್ದರೆ, ಬಾಲಕರ ಸಂಖ್ಯೆ 3,38,431 ಎಂದು ಪಿಯು ಇಲಾಖೆ ತಿಳಿಸಿದೆ.
ಸೋರಿಕೆ ತಡೆಗೆ ಕ್ರಮ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಇಂಥ ಘಟನೆ ನಡೆಯದಂತೆ ತಡೆಗಟ್ಟಲು ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಅಕ್ರಮಗಳಲ್ಲಿ ಭಾಗಿಯಾದವರಿಗೆ 5 ಲಕ್ಷ ರೂ. ದಂಡ ಹಾಗೂ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಪರೀಕ್ಷಾ ಕೇಂದ್ರದ ಸುತ್ತಲೂ ಪೊಲೀಸ್ ಬಂದೋಬಸ್ತ್ ಒದಗಿಸಲು ಪೊಲೀಸ್ ಇಲಾಖೆಗೆ ಮನವಿ ಮಾಡಿದೆ.
ಈವರೆಗೆ ಒಟ್ಟು 35,156 ಮೌಲ್ಯಮಾಪಕರು ಹೆಸರು ನೋಂದಣಿ ಮಾಡಿಕೊಂಡಿದ್ದು, ಸಿಇಟಿ ಫಲಿತಾಂಶ ಪ್ರಕಟಗೊಂಡ ಕೂಡಲೇ ಪಿಯುಸಿ ಫಲಿತಾಂಶ ಹೊರಬೀಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಕಪ್ಪುಪಟ್ಟಿ ಧರಿಸಿ ಪರೀಕ್ಷೆ ನಡೆಸಿಕೊಡಲು ನಿರ್ಧರಿಸಿದೆ. ಈ ಕುರಿತು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.












Click it and Unblock the Notifications