ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು, ಮಾರ್ಚ್ 1: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್'ನಡಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ತಡೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ವಿದ್ಯಾರ್ಥಿಗಳು ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿವೆ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸುವ ಮೂಲಕ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಮೊದಲನೇ ದಿನ ಅರ್ಥಶಾಸ್ತ್ರ ಹಾಗೂ ಭೌತಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ. ರಾಜ್ಯದ 1,013 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 6,73,606 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಮಾ. 18ರಂದು ಪರೀಕ್ಷೆ ಕೊನೆಗೊಳ್ಳಲಿದೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಶಿಕ್ಷಣ ಖಾತೆಯನ್ನು ಹೊಂದಿರುವುದರಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳ ಮೇಲೆ ತೀವ್ರ ನಿಗಾ ವಹಿಸುವುದರ ಜತೆಗೆ, ಅಗತ್ಯ ಬಿದ್ದರೆ ಪರೀಕ್ಷಾ ವೇಳೆ ವಶಕ್ಕೆ ತೆಗೆದುಕೊಳ್ಳುವಂತೆಯೂ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ಅಕ್ರಮಗಳನ್ನು ತಡೆಯಲು ಪರೀಕ್ಷಾ ಕೇಂದ್ರದ 200 ಮೀಟರ್ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳ ಪ್ರವೇಶ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗಿದೆ. ಪ್ರಶ್ನೆ ಪತ್ರಿಕೆ ಇರುವ ಸ್ಟ್ರಾಂಗ್ ರೂಂಗಳಿಗೆ ಸಶಸ್ತ್ರ ಪೊಲೀಸರು ಭದ್ರತೆ ನೀಡಿದ್ದಾರೆ.











Click it and Unblock the Notifications