D.K. Shivakumar Reaction: ವಿಧಾನಸಭೆ ಉಪ ಚುನಾವಣೆ ಫಲಿತಾಂಶ: ಡಿ.ಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್!
ಕರ್ನಾಟಕದ ಮೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸುತ್ತಿದ್ದಂತೆಯೇ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಮೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಎಲ್ಲಾ ಪ್ರಚಾರ ಸಭೆಗಳಲ್ಲೂ ಡಿ.ಕೆ ಶಿವಕುಮಾರ್ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ಬಗ್ಗೆಯೇ ಪ್ರಸ್ತಾಪಿಸಿದ್ದರು. ಹಸ್ತ ಅಧಿಕಾರದಲ್ಲಿ ಇದ್ದರೆ ನಿಮಗೆ ಒಳ್ಳೆಯ ಯೋಜನೆಗಳನ್ನು ಕೊಡುತ್ತದೆ ಎಂದು ಹೇಳಿದ್ದರು. ಇದು ವರ್ಕ್ಔಟ್ ಆಗಿದೆ ಎಂದೇ ಹೇಳಲಾಗುತ್ತಿದೆ.
ಇದೀಗ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆಯ ಮೈಸೂರು ಭಾಗ ಹಾಗೂ ಸಮಗ್ರ ಕರ್ನಾಟಕದ ಅಭಿವೃದ್ಧಿಯ ಗೆಲುವು ಎಂದಷ್ಟೇ ಹೇಳಿದ್ದಾರೆ.

ಕೈಹಿಡಿದ ಗ್ಯಾರಂಟಿ ಯೋಜನೆಗಳು: ಇನ್ನು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಭರ್ಜರಿ ಕೈಹಿಡಿದಿವೆ ಎಂದೇ ಹೇಳಲಾಗುತ್ತಿದೆ. ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಭರತ್ ಬೊಮ್ಮಾಯಿ ಅವರು ನಿಸ್ಸಂಶಯವಾಗಿ ಗೆಲ್ಲಲಿದ್ದಾರೆ ಎಂದೇ ರಾಜಕೀಯ ಪಂಡಿತರು ಭವಿಷ್ಯ ನುಡಿದಿದ್ದರು. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಡಮ್ಮಿ (ಸೋಲುವ) ಅಭ್ಯರ್ಥಿಯನ್ನು ನಿಲ್ಲಿಸಿದೆ. ಇಲ್ಲಿ ಸೋಲುವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗಿದೆ ಹಾಗೂ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಳ್ಳಲಾಗಿದೆ ಎನ್ನುವ ಗಂಭೀರ ಆರೋಪಗಳು ಕೇಳಿ ಬಂದಿದ್ದವು.
ಈ ಎಲ್ಲಾ ಆರೋಪಗಳಿಗೂ ಕಾಂಗ್ರೆಸ್ ತಿರುಗೇಟು ಕೊಟ್ಟಿತ್ತು. ನಾವು ಗೆಲ್ಲುವ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸಿದ್ದೇವೆ. ಯಾಸಿರ್ ಅಹ್ಮದ್ ಖಾನ್ ಅವರು ಈ ಬಾರಿ ಚುನಾವಣೆಯಲ್ಲಿ ಗೆಲ್ಲಲಿದ್ದಾರೆ ಎಂದು ಕಾಂಗ್ರೆಸ್ ಹೇಳಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಇದೇ ಮಾತು ಹೇಳಿದ್ದರು. ಅಲ್ಲದೇ ಸಚಿವರ ದಂಡೇ ಅಲ್ಲಿ ಬೀಡು ಬಿಟ್ಟಿತ್ತು. ಇನ್ನು ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಅವರು ಗೆಲ್ಲಲಿದ್ದಾರೆ ಅವರು ಸೋಲುವ ಪ್ರಶ್ನೆಯೇ ಇಲ್ಲ ಎಂದು ಹೇಳಲಾಗಿತ್ತು. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ ಎನ್ನಲಾಗಿದೆ.

ಇನ್ನು ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಬಿಜೆಪಿ - ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ಭಾರೀ ಹಾಗೂ ಜಿದ್ದಾಜಿದ್ದಿನ ಪೈಪೋಟಿ ಇತ್ತು. ಇಲ್ಲೂ ಕಾಂಗ್ರೆಸ್ನ ಪ್ರಮುಖ ಗ್ಯಾರಂಟಿ ಯೋಜನೆಗಳು ವರ್ಕ್ ಆಗಿವೆ.
ಹೀಗಾಗಿ, ಕರ್ನಾಟಕದ ಎಲ್ಲಾ ಭಾಗದ ಜನರು ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಒಪ್ಪಿಕೊಂಡಿದ್ದಾರೆ ಎನ್ನುವ ಅರ್ಥದಲ್ಲಿ ಡಿ.ಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಗೆಲುವು: ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು ಸಿಕ್ಕಿದೆ. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಅವರು ಮುಖ್ಯಮಂತ್ರಿಯಾಗಿದ್ದಾರೆ. ಇನ್ನು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದ (ಮಹಾ ವಿಕಾಸ್ ಅಘಾಡಿ)ಗೆ ಭಾರೀ ಹಿನ್ನಡೆಯಾಗಿದೆ. ಇನ್ನು ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಕಾಪಾಡಿಕೊಂಡಿದೆ.












Click it and Unblock the Notifications