ಕರ್ನಾಟಕ ಚುನಾವಣೆ: ಬಿಜೆಪಿ ಜೊತೆ ಒಳಒಪ್ಪಂದ ಮಾಡಿಕೊಂಡರೇ ಎಚ್ಡಿಕೆ?
ಬೆಂಗಳೂರು, ಅಕ್ಟೋಬರ್ 20: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಏಳೆಂಟು ತಿಂಗಳು ಬಾಕಿ ಇರುವಾಗಲೇ, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ರಾಜ್ಯದ ಮೂರು ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಯಾತ್ರೆ ಹಾಗೂ ಸರಣಿ ಸಮಾವೇಶಗಳನ್ನು ಹಮ್ಮಿಕೊಂಡಿವೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನ್ಮದಿನೋತ್ಸವ ಆಚರಣೆ ಹಾಗೂ ಭಾರತ್ ಜೋಡೊ ಯಾತ್ರೆಗಳು ಕಾಂಗ್ರೆಸ್ಗೆ ಹೊಸ ಹುರುಪು ನೀಡಿವೆ. ಭಾರತ್ ಜೋಡೊ ಯಾತ್ರೆಗೆ ಪ್ರತಿಯಾಗಿ ಜನಸಂಕಲ್ಪ ಯಾತ್ರೆಯನ್ನು ಬಿಜೆಪಿ ಹಮ್ಮಿಕೊಂಡಿದೆ. ಮೋದಿ ವರ್ಚಸ್ಸು ಹಾಗೂ ಹಿಂದುತ್ವ ರಾಜಕಾರಣವನ್ನು ಬಿಜೆಪಿ ನೆಚ್ಚಿಕೊಂಡಿದೆ. ಈಗಾಗಲೇ ಪಿಎಫ್ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು 5 ವರ್ಷ ನಿಷೇಧಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಇದನ್ನೇ ಚುನಾವಣಾ ಪ್ರಚಾರದ ಪ್ರಮುಖ ವಿಚಾರವನ್ನಾಗಿ ಬಿಜೆಪಿ ಮಾಡಿಕೊಳ್ಳಲಿದೆ ಎಂಬ ಮಾತುಗಳು ಕೇಳಿಬಂದಿದೆ. ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಹೊಂದಿರುವ ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಸಜ್ಜಾಗಿದೆ.
ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ರಾಜಕೀಯ ನಾಯಕರು ಹಲವಾರು ಲೆಕ್ಕಾಚಾರಗಳಲ್ಲಿ ತೊಡಗಿದ್ದಾರೆ. ಒಕ್ಕಲಿಗರ ಪ್ರಾಬಲ್ಯದ ಜಿಲ್ಲೆಗಳಲ್ಲಿ ಜೆಡಿಎಸ್ಗೆ ಅಸ್ತಿತ್ವವಿದೆ. ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದಲ್ಲಿ ಸೆಕ್ಯುಲರ್ ಮತಗಳನ್ನು ಜೆಡಿಎಸ್ ಸೆಳೆಯಬಹುದು. ಆ ಮೂಲಕ ಕಾಂಗ್ರೆಸ್ ಗೆಲುವಿಗೆ ಕಂಟಕವಾಗಬಹುದು.

ಬಿಜೆಪಿ ಜೊತೆಗಿನ ಜೆಡಿಎಸ್ ಒಳಒಪ್ಪಂದದ ಪುಕಾರು ನಿಜವೇ?
ಕರ್ನಾಟಕ ಚುನಾವಣೆಗೂ ಮುನ್ನವೇ ಬಿಜೆಪಿಯೊಂದಿಗೆ ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿದೆ. ಆ ಮೂಲಕ, ಬಿಜೆಪಿಗೆ ಗೆಲುವಿಗೆ ಸಹಕರಿಸಲಿದೆ ಎಂಬ ಪುಕಾರು ಎದ್ದಿದೆ. ಆದರೆ, ಚುನಾವಣಾ ಪೂರ್ವ ಅಥವಾ ಚುನಾವಣೋತ್ತರ ಮೈತ್ರಿಯನ್ನು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅಲ್ಲಗಳೆದಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳೊಂದಿಗೆ ಹೊಂದಿಣಿಕೆ ಮಾಡಿಕೊಳ್ಳುವುದೆಲ್ಲವೆಂದು ಅವರು ಹೇಳಿದ್ದಾರೆ.
ಕುಮಾರಸ್ವಾಮಿ ಅವರ ಹೇಳಿಕೆಗೆ ವ್ಯತಿರಿಕ್ತವೆಂಬಂತೆ ರಾಜಕೀಯ ವಲಯದಲ್ಲಿ ಕೆಲ ವಾದಗಳು ಮುನ್ನೆಲೆಗೆ ಬಂದಿವೆ. ಕುಮಾರಸ್ವಾಮಿ ಅವರು ಬಿಜೆಪಿ ಹೈಕಮಾಂಡ್ ಜೊತೆ ಸಂಪರ್ಕದಲ್ಲಿದ್ದಾರೆ. ಎರಡು ತಿಂಗಳ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಯ ಪ್ರಮುಖ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.
ಬಿಜೆಪಿ ವರಿಷ್ಠರ ಜೊತೆ ಮಾತನಾಡಿರುವ ಕುಮಾರಸ್ವಾಮಿ, ಪರಸ್ಪರ ಸಹಕಾರ ನೀಡುವ ವಿಚಾರವನ್ನು ಮುಂದಿಟ್ಟಿದ್ದಾರೆ. ಬಿಜೆಪಿ ಗೆಲುವಿಗೆ ಸಹಕರಿಸಲು ಜೆಡಿಎಸ್ನಿಂದ 60 ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಒಪ್ಪಂದ ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಕಾಂಗ್ರೆಸ್ ಸೋಲಿಗೆ ಕಾರಣವಾಗಲಿದ್ದಾರೆ ಎಂಬುದು ಕೆಲವರ ವಾದವಾಗಿದೆ.

ಈ ನೆರವಿಗೆ ಪ್ರತಿಯಾಗಿ ಬಿಜೆಪಿಯು ಜೆಡಿಎಸ್ಗೆ ಹಣ ಹಾಗೂ ಸಂಪನ್ಮೂಲಗಳನ್ನು ಒದಗಿಸಬೇಕು. ತಮ್ಮ ಕುಟುಂಬದ ಸದಸ್ಯರ ಮೇಲಿನ ಪ್ರಕರಣಗಳನ್ನು ತೆರವು ಮಾಡಬೇಕು ಎಂಬುದು ಕುಮಾರಸ್ವಾಮಿ ಬೇಡಿಕೆಯಾಗಿದೆ ಎಂಬ ಮಾತುಗಳೂ ಕೇಳಿಬಂದಿವೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬಿಜೆಪಿ ಜೊತೆಗಿನ ಸಖ್ಯವನ್ನು ವಿರೋಧಿಸುತ್ತಾರೆ. ಆ ಕಾರಣ, ಕುಮಾರಸ್ವಾಮಿ ಬಿಜೆಪಿ ಜೊತೆ ಒಳಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಗೆಲುವಿಗೆ ಕಂಟಕವಾಗಲಿದ್ದಾರೆ ಎಂಬ ಪುಕಾರುಗಳು ಜೋರಾಗಿವೆ. ಇದು ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ಕಾದುನೋಡಬೇಕಿದೆ.
ಜೆಡಿಎಸ್ ಬಿಜೆಪಿಯ 'ಬಿ' ಟೀಮ್ ಎಂದಿದ್ದ ಸಿದ್ದರಾಮಯ್ಯ
ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬಿಜೆಪಿಯ 'ಬಿ' ಟೀಮ್ ಎಂದು ಸಿದ್ದರಾಮಯ್ಯ ಟೀಕಿಸಿದ್ದರು. ಇದಕ್ಕೆ ಇಂಬು ನೀಡುವಂತೆ ಕಳೆದ ವರ್ಷ ನಡೆದಿದ್ದ ಹಾನಗಲ್ ಹಾಗೂ ಸಿಂದಗಿ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಜೆಡಿಎಸ್ ಕಣಕ್ಕಿಳಿಸಿತ್ತು.
ಈ ಕುರಿತು ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ನಾಯಕರು, 'ಜೆಡಿಎಸ್ನ ನಿಜ ಬಣ್ಣ ಬಯಲಾಗಿದೆ. ಇದು ಬಿಜೆಪಿಯೊಂದಿಗೆ ಒಳಒಪ್ಪಂದ ಮಾಡಿಕೊಂಡಿದೆ' ಎಂದಿದ್ದರು.












Click it and Unblock the Notifications