ಜೆಡಿಎಸ್ ಸೋಲಿಸಲು ಎರಡು ರಾಷ್ಟ್ರೀಯ ಪಕ್ಷಗಳ ಕುತಂತ್ರ; ಚುನಾವಣಾ ಸಮೀಕ್ಷೆಗಳೆಲ್ಲಾ ಸುಳ್ಳು: ಎಚ್.ಡಿ.ಕುಮಾರಸ್ವಾಮಿ
ಮಂಡ್ಯ,ಏಪ್ರಿಲ್4: ರಾಜ್ಯ ವಿಧಾನಸಭಾ ಚುನಾವಣಾ ಘೋಷಣೆಗೂ ಮುನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ದಳಪತಿಗಳಿಗೆ ಹಾಸನ ಕ್ಷೇತ್ರ ಅಭ್ಯರ್ಥಿಯೇ ದೊಡ್ಡ ತಲೆನೋವಾಗಿದೆ. ಇತ್ತ ಗೆಲ್ಲುವ ವಿಶ್ವಾಸದಲ್ಲಿ ರಾಜ್ಯಾದ್ಯಂತ ಪ್ರಚಾರವನ್ನ ನಡೆಸುತ್ತಿರುವ ಕುಮಾರಸ್ವಾಮಿ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಸೋಲಿಸಲು ಎರಡೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಕುತಂತ್ರದ ರಾಜಕಾರಣವನ್ನ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ.

ಚುನಾವಣಾ ಸಮೀಕ್ಷೆ ಕುರಿತು ಮಾತನಾಡಿದ ಅವರು, ಚುನಾವಣಾ ಪೂರ್ವ ಸಮೀಕ್ಷೆಗಳನ್ನು ಯಾರೂ ನಂಬಬೇಡಿ. ಅದೆಲ್ಲವೂ ರಾಷ್ಟ್ರೀಯ ಪಕ್ಷಗಳು ದುಡ್ಡು ಕೊಟ್ಟು ಮಾಡಿಸುವ ಸಮೀಕ್ಷೆಗಳು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗಿಂತ 10 ರಿಂದ 15 ಸ್ಥಾನ ಹೆಚ್ಚು ಜೆಡಿಎಸ್ ಗೆಲ್ಲುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಜೆಡಿಎಸ್ ಪರ ಸುನಾಮಿ ಎದ್ದಿದೆ. ಜೆಡಿಎಸ್ ಗೆಲ್ಲಿಸಲು ಕೆಲವರು ಪಣ ತೊಟ್ಟಿದ್ದಾರೆ. ಮೊದಲು ನಮ್ಮ ಮನೆಯಲ್ಲಿದ್ದು ಹೋದವರು ಮತ್ತೆ ನಮ್ಮ ಪಕ್ಷ ಸೇರುತ್ತಿದ್ದಾರೆ. ಇದರಿಂದ ನಮ್ಮ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ. 2018ರ ಚುನಾವಣೆಯಲ್ಲಿ ನಾನು ಮುಖ್ಯಮಂತ್ರಿಯಾಗಬೇಕೆಂಬ ಕಾರಣಕ್ಕೆ ಜಿಲ್ಲೆಯ ಏಳಕ್ಕೆ ಏಳು ಕ್ಷೇತ್ರಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದಿದೀರೀ ಈ ಬಾರೀಯೂ ಗೆಲ್ಲಿಸಿ ಎಂದು ಮನವಿ ಮಾಡಿದರು.

ಜೆಡಿಎಸ್ಗೆ ಸಂಪೂರ್ಣ ಬಹುಮತ ಬಾರದಿದ್ದರೂ ಮುಖ್ಯಮಂತ್ರಿಯಾಗಿ ರೈತರ ಸಾಲಮನ್ನಾ ಮಾಡಿದೆ. ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಮನೆಗೆ ಭೇಟಿಕೊಟ್ಟು ಪರಿಹಾರ ಕೊಟ್ಟೆ, ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ನಲ್ಲಿ 8 ಸಾವಿರ ಕೋಟಿ ರು. ಹಣ ಬಿಡುಗಡೆ ಮಾಡಿಸಿದೆ. ನಂತರ ಬಂದ ಸರ್ಕಾರ ಜಿಲ್ಲೆಯ ಅಭಿವೃದ್ಧಿಯನ್ನು ಮಣ್ಣುಪಾಲು ಮಾಡಿತು ಕಿಡಿಕಾರಿದರು.
ಈಗಾಗಲೇ ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಮೂರನೇ ಬಾರಿ ಸಿಎಂ ಆಗೋ ದುರುದ್ದೇಶ ನನಗಿಲ್ಲ. ಬಡವರ ಸೇವೆಯನ್ನು ಗುರಿಯಾಗಿಸಿಕೊಂಡು ಕೆಲಸ ಮಾಡಲು ಬಂದಿದ್ದೇನೆ. ನನ್ನ ಈ ಹೋರಾಟ ಸ್ವಾರ್ಥಕ್ಕಲ್ಲ. ನನಗೆ ಯಾವುದೇ ಜಾತಿ, ಮತ, ಧರ್ಮ ಮುಖ್ಯವಲ್ಲ. ಯಾರೇ ಬಡವರು ನನ್ನ ಬಳಿ ಬಂದರೂ ನಿಮ್ಮ ಕಷ್ಟಏನೂಂತ ಕೇಳ್ತೀನಿ. ಯಾರೂ ಜಾತಿಯ ವ್ಯಾಮೋಹಕ್ಕೆ ಮಾರು ಹೋಗಬೇಡಿ ಎಂದು ತಿಳಿಸಿದರು.
ಕೆ.ಆರ್.ಪೇಟೆಗೆ ಎಚ್.ಟಿ.ಮಂಜು ಅವರನ್ನು ಅಭ್ಯರ್ಥಿ ಮಾಡುವುದಕ್ಕೆ ಎಲ್ಲರನ್ನೂ ಒಟ್ಟಿಗೆ ಸೇರಿಸುವ ಪ್ರಯತ್ನ ಮಾಡಿದ್ದೆ. ಆದರೆ, ನಮ್ಮವರೇ ಕೆಲವರು ಬೆನ್ನಿಗೆ ಚೂರಿ ಹಾಕಲು ಯತ್ನಿಸಿದ್ದಾರೆ. ಅವರಿಗೆ ಯಾರೂ ಮಾರು ಹೋಗಬೇಡಿ, ಎಚ್.ಟಿ.ಮಂಜು ಅವರನ್ನು ನಂಬಿ ಗೆಲ್ಲಿಸುವಂತೆ ಮನವಿ ಮಾಡಿದರು.












Click it and Unblock the Notifications