ಕಾಂಗ್ರೆಸ್ 2ನೇ ಪಟ್ಟಿ; ಏಪ್ರಿಲ್ 4ರಂದು ದೆಹಲಿಯಲ್ಲಿ ಸಿಇಸಿ ಸಭೆ
ಬೆಂಗಳೂರು, ಏಪ್ರಿಲ್ 02; ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಮೇ 10ರ ಬುಧವಾರ ಚುನಾವಣೆ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯುವ ಉತ್ಸಾಹದಲ್ಲಿರುವ ಕಾಂಗ್ರೆಸ್ ಪಕ್ಷ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಚುನಾವಣಾ ಸಮಿತಿ ಸಭೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 4ರ ಮಂಗಳವಾರ ಮಧ್ಯಾಹ್ನ 12.30ಕ್ಕೆ ದೆಹಲಿಯಲ್ಲಿ ಸಿಇಸಿ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಬಗ್ಗೆ ಮಹತ್ವದ ಚರ್ಚೆ ಆಗಲಿದೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲಾಗಿದೆ. ಸಿಇಸಿ ಸಭೆಯ ಬಳಿಕ ಅಂದೇ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಹಲವು ವಿಚಾರ ಚರ್ಚೆ ಮಾಡಿದ್ದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಆಗಮಿಸಿದವರಿಗೆ ಟಿಕೆಟ್ ನೀಡುವುದು, ಹೆಚ್ಚು ಪೈಪೋಟಿ ಇರುವ ಕ್ಷೇತ್ರಗಳಲ್ಲಿ ಟಿಕೆಟ್ ಹಂಚಿಕೆ ಬಗ್ಗೆ ಸಭೆಯಲ್ಲಿ ವಿವರವಾದ ಚರ್ಚೆ ನಡೆಯಲಿದೆ. ಅದಲ್ಲೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಂದು ಕ್ಷೇತ್ರದಿಂದ ಕಣಕ್ಕಿಳಿಯುತ್ತಾರಾ? ಎಂಬ ಪ್ರಶ್ನೆಗೆ 2ನೇ ಪಟ್ಟಿ ಉತ್ತರ ನೀಡಲಿದೆ. ಈಗಾಗಲೇ ಮೊದಲ ಪಟ್ಟಿಯಲ್ಲಿ ವರಣಾದಿಂದ ಅವರು ಕಣಕ್ಕಿಳಿಯುತ್ತಾರೆ ಎಂದು ಘೋಷಣೆ ಮಾಡಲಾಗಿದೆ.
ಭಾರೀ ಪೈಪೋಟಿ ಇರುವ ಕ್ಷೇತ್ರಗಳ ನಾಯಕರ ಜೊತೆ ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಮಾತುಕತೆ ನಡೆಸಿದ್ದಾರೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಆರ್. ಎಂ. ಮಂಜುನಾಥ ಗೌಡ ಟಿಕೆಟ್ ಆಕಾಂಕ್ಷಿಯಾಗಿದ್ದರು. ಡಿ. ಕೆ. ಶಿವಕುಮಾರ್ ಶನಿವಾರ ಉಭಯ ನಾಯಕರ ಜೊತೆ ಮಾತುಕತೆ ನಡೆಸಿದ್ದರು.

ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ ಹೆಸರು ಘೋಷಣೆ ಮಾಡಬೇಕು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಮತ್ತು ಸಿದ್ದರಾಮಯ್ಯ ಸಮ್ಮುಖದಲ್ಲಿ ಶನಿವಾರ ಘೋಷಣೆಗಳನ್ನು ಕೂಗಲಾಗಿತ್ತು. ವರುಣ ಬಿಟ್ಟು ಮತ್ತೊಂದು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಕಣಕ್ಕಿಳಿಯಲಿದ್ದಾರೆ? ಎಂಬ ಸುದ್ದಿ ಇದೆ. ಆದರೆ ಯಾವ ಕ್ಷೇತ್ರ? ಎಂಬುದು 2ನೇ ಪಟ್ಟಿಯಲ್ಲಿ ತಿಳಿಯುವ ನಿರೀಕ್ಷೆ ಇದೆ.
ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡಲು ಮಾನಸಿಕವಾಗಿ ಸಿದ್ಧವಾಗಿದ್ದೇನೆ. ಆದರೆ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ. "ನನ್ನ ರಾಜಕೀಯ ಜೀವನ ವರುಣದಲ್ಲಿ ಪ್ರಾರಂಭವಾಗಿತ್ತು. ಇದು ನನ್ನ ಕೊನೆಯ ಚುನಾವಣೆ ಆದ ಕಾರಣ ಅಲ್ಲಿ ಕಣಕ್ಕಿಳಿಯುತ್ತಿದ್ದೇನೆ. ಏಪ್ರಿಲ್ 4ರಂದು ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಅಷ್ಟು ಸುಲಭದ ಪಟ್ಟಿ ಅಲ್ಲ; ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ 100 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆ ಕಡಿಮೆ ಇದೆ. ಭಾರೀ ಜಟಾಪಟಿ ಇರುವ ಕ್ಷೇತ್ರಗಳು, ಬಂಡಾಯ ಎದ್ದಿರುವ ಕ್ಷೇತ್ರಗಳು, ಬೇರೆ ಪಕ್ಷದಿಂದ ಆಗಮಿಸುವ ಶಾಸಕರು & ಮಾಜಿ ಶಾಸಕರ ಕ್ಷೇತ್ರಗಳ ಅಭ್ಯರ್ಥಿಗಳನ್ನು 3ನೇ ಪಟ್ಟಿಯಲ್ಲಿ ಘೋಷಣೆ ಮಾಡುವ ನಿರೀಕ್ಷೆ ಇದೆ. ಈಗಾಗಲೇ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ನಲ್ಲಿ ಎಚ್. ಡಿ. ತಮ್ಮಯ್ಯ ವಿರುದ್ಧ ಅಸಮಾಧಾನ ಹೆಚ್ಚಾಗಿದೆ. ಟಿಕೆಟ್ ಆಕಾಂಕ್ಷಿಗಳು ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ ಆರಂಭಿಸಿದ್ದು, ಪಕ್ಷಕ್ಕೆ ತಲೆನೋವು ತಂದಿದೆ.
ಸಖರಾಯಪಟ್ಟಣದಲ್ಲಿ ಆರು ಜನ ಟಿಕೆಟ್ ಆಕಾಂಕ್ಷಿಗಳ ನೇತೃತ್ವದಲ್ಲಿ ಬಂಡಾಯ ಸಭೆ ನಡೆಸಲಾಗಿದ್ದು, ನಮ್ಮ 6 ಜನರಲ್ಲೇ ಒಬ್ಬರಿಗೆ ಟಿಕೆಟ್ ಕೊಡಬೇಕು. ಆರು ಜನರಲ್ಲಿ ಯಾರಿಗೆ ಟಿಕೆಟ್ ಸಿಕ್ಕರೂ ಒಗ್ಗಟ್ಟಲ್ಲಿ ಕೆಲಸ ಮಾಡೋಣ ಎಂಬ ತೀರ್ಮಾನ ಮಾಡಲಾಗಿದೆ. ಇದೇ ಮಾದರಿಯಲ್ಲಿ ಹಲವು ಜಿಲ್ಲೆಗಳಲ್ಲಿ ಬಂಡಾಯದ ಧ್ವನಿ ಕೇಳಿ ಬಂದಿದ್ದು, ಚುನಾವಣೆ ಗೆಲ್ಲುವ ಉತ್ಸಾಹದಲ್ಲಿರುವ ಪಕ್ಷಕ್ಕೆ ಬಿಸಿತುಪ್ಪವಾಗಿದೆ. ಆದ್ದರಿಂದ ಕಾದು ನೋಡಿ ಚುನಾವಣೆ ಅಧಿಸೂಚನೆ ಪ್ರಕಟವಾದ ಬಳಿಕ 3ನೇ ಪಟ್ಟಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ.












Click it and Unblock the Notifications