ಕರ್ನಾಟಕದ ಈ ರಾಜಕೀಯ ನಾಯಕರಿಗೆ ಇದೇ ಕೊನೆ ಚುನಾವಣೆ: ಯಾರ್ಯಾರು ನೋಡಿ? ಕಾರಣವೇನು?
ಬೆಂಗಳೂರು, ಜನವರಿ 17: ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ರಾಜಕಾರಣದ ಹಲವು ದಿಗ್ಗಜರಿಗೆ ಮುಂಬರುವ ವಿಧಾನಸಭಾ ಚುನಾವಣೆಯು ಕೊನೆಯ ಚುನಾವಣೆಯಾಗುವ ಸಾಧ್ಯತೆಯಿದೆ. ಏಕೆಂದರೆ ಅವರು ಇನ್ನು ಐದು ವರ್ಷಗಳ ನಂತರ 80 ವರ್ಷಗಳನ್ನು ಪೂರೈಸುವ ಹೊಸ್ತಿಲಲ್ಲಿದ್ದಾರೆ. ಈ ಹಿರಿಯರಲ್ಲಿ ಹೆಚ್ಚಿನವರು ಆ ವೇಳೆಗೆ ಚುನಾವಣಾ ರಾಜಕೀಯದಿಂದ ನಿವೃತ್ತರಾಗಬಹುದು.
ಕಾಂಗ್ರೆಸ್ ಶಾಸಕರಾದ ಆರ್.ವಿ.ದೇಶಪಾಂಡೆ (75), ಕೆ.ಆರ್.ರಮೇಶ್ ಕುಮಾರ್ (73) ಶಾಮನೂರು ಶಿವಶಂಕರಪ್ಪ (91) ಸೇರಿದಂತೆ ಇತರರಿಗೆ ಇದು ಕೊನೆ ಚುನಾವಣೆ ಆಗಬಹುದು. ಬಿಜೆಪಿ ಶಾಸಕರಾದ ಕೆ.ಎಸ್.ಈಶ್ವರಪ್ಪ (74), ಜಿ.ಎಚ್.ತಿಪ್ಪಾರೆಡ್ಡಿ (77) ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ (71) ಅವರಿಗೆ ಈ ಚುನಾವಣೆಯೇ ಕೊನೆಯಾಗುವ ಸಾಧ್ಯತೆ ಇದೆ. ಈ ಶಾಸಕರಲ್ಲಿ ಅನೇಕರು ಚುನಾವಣಾ ರಾಜಕೀಯವನ್ನು ತ್ಯಜಿಸುವ ತಮ್ಮ ಇಚ್ಛೆಯನ್ನು ಈಗಾಗಲೇ ವ್ಯಕ್ತಪಡಿಸಿದ್ದಾರೆ.

ಈ ಚುನಾವಣೆಯಲ್ಲಿ ಬಿ ಎಸ್ ಯಡಿಯೂರಪ್ಪ ಸ್ಪರ್ಧೆ ಇಲ್ಲ
ಮುಂದಿನ ತಿಂಗಳು 80ನೇ ವರ್ಷಕ್ಕೆ ಕಾಲಿಡಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪ್ರಸ್ತುತ ತಾವು ಪ್ರತಿನಿಧಿಸುತ್ತಿರುವ ಕ್ಷೇತ್ರವಾದ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.

ಚುನಾವಣೆಗೆ ಸ್ಪರ್ಧಿಸಲ್ಲ ಎಂದಿದ್ದ ಸಿದ್ದರಾಮಯ್ಯ
2018ರ ವಿಧಾನಸಭಾ ಚುನಾವಣೆಗೆ ಮುನ್ನ ಸಿದ್ದರಾಮಯ್ಯ ಅವರು ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಆದರೆ, 2018 ರಲ್ಲಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ಸಿಗೆ ಹೀನಾಯ ಸೋಲಾಯಿತು. ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂಬ ಅವರ ಮಹತ್ವಾಕಾಂಕ್ಷೆಯು ಅವರ ಮನಸ್ಸನ್ನು ಬದಲಾಯಿಸುವಂತೆ ಮಾಡಿತು ಎಂದು ಹೇಳಲಾಗುತ್ತಿದೆ. ಇದೀಗ 2023ರ ವಿಧಾನಸಭಾ ಚುನಾವಣೆಯೇ ತಮ್ಮ ಕೊನೆಯ ಚುನಾವಣೆ ಎಂದು ಹೇಳಿದ್ದಾರೆ.

ಆರ್ ವಿ ದೇಶಪಾಂಡೆ ನಿವೃತ್ತಿ ಘೋಷಣೆ?
ಮಾಜಿ ಸಚಿವ ಆರ್ ವಿ ದೇಶಪಾಂಡೆ ಅವರು ಬೆಳಗಾವಿ ವಿಧಾನಮಂಡಲದ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದ ನಂತರ ವಿಧಾನಸಭೆಯಲ್ಲಿ ಮಾತನಾಡಿದರು. ಈ ವಿಧಾನಸಭಾ ಚುನಾವಣೆಯ ನಂತರ ನಿವೃತ್ತಿ ಹೊಂದುವುದಾಗಿ ಹೇಳಿದರು. 'ದೇಶಪಾಂಡೆ ಅವರು ಚುನಾವಣೆಗೂ ಮುನ್ನವೇ ನಿವೃತ್ತಿ ಹೊಂದಲು ಬಯಸಿದ್ದರು. ಆದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನಾನು ಅವರನ್ನು ಮನವೊಲಿಸಿದೆ' ಎಂದು ಸಿದ್ದರಾಮಯ್ಯ ಹೇಳಿದರು.

ಶಾಮನೂರು ಶಿವಶಂಕರಪ್ಪ ನಿವೃತ್ತಿ?
ಹಾಲಿ ವಿಧಾನಸಭೆಯ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವಂತೆ ಕಾಂಗ್ರೆಸ್ ಈಗಾಗಲೇ ಕೇಳಿಕೊಂಡಿದೆ ಎಂದು ಹೇಳಲಾಗುತ್ತಿದೆ. ಅವರ ಕುಟುಂಬದ ಒಬ್ಬರು ಅವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಕೆ ಎಸ್ ಈಶ್ವರಪ್ಪ ನಿರ್ಧಾರವೇನು?
ಸಂಪುಟಕ್ಕೆ ಮರಳಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿರುವ ಈಶ್ವರಪ್ಪ ವಿಧಾನಸಭೆ ಚುನಾವಣೆ ಬಳಿಕ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಪಕ್ಷಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ. ಅದೇ ಆಧಾರದ ಮೇಲೆ ಅವರು ಸಂಪುಟಕ್ಕೆ ಸೇರ್ಪಡೆಗೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ಚುನಾವಣೆಗೆ ಟಿಕೆಟ್ ನಿರಾಕರಿಸಿದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಪಕ್ಷದ ನಾಯಕರೇ ತಿಳಿಸಿದ್ದಾರೆ.

ಮೂರು ತಿಂಗಳಲ್ಲಿ ಬರಲಿದೆ ಚುನಾವಣೆ
ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನು ಮೂರು ತಿಂಗಳಲ್ಲಿ ಬರಲಿದೆ. ಆಡಳಿತಾರೂಢ ಬಿಜೆಪಿ ಸರ್ಕಾರ ವಿಜಯ ಸಂಕಲ್ಪ ಯಾತ್ರೆಗೆ ಅಣಿಯಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ರಾಜ್ಯದಾದ್ಯಂತ ಬಸ್ ಯಾತ್ರೆ ಕೈಗೊಂಡಿದೆ. ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಂಚರತ್ನ ಯಾತ್ರೆ ಕೈಗೊಂಡಿದೆ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯ ಹೊಂದಿದೆ. ಕರಾವಳಿ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications