BJPvsBJP: 'ಸಹೋದರರ ಸವಾಲ್' ಸಲಹೆ ನೀಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ- 'ನೀನ್ಯಾವನು ಹೇಳೋಕೆ' ಎಂದ ರಮೇಶ್ ಜಾರಕಿಹೊಳಿ
ಬೆಂಗಳೂರು, ಏಪ್ರಿಲ್ 03: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ, ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಹೊತ್ತಿಕೊಂಡಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಟಿಕೆಟ್ಗೆ ಸಂಬಂಧಿಸಿದಂತೆ ನಾಯಕರ ನಡುವೆ ಸಂಘರ್ಷ ಏರ್ಪಟ್ಟಿದೆ. 2019 ರಲ್ಲಿ ಕಾಂಗ್ರೆಸ್ನಿಂದ ಬಿಜೆಪಿಗೆ ಹೋಗಿದ್ದ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದ್ದಾರೆ.
ಭಾನುವಾರ ನಡೆದಿದ್ದ ಬಿಜೆಪಿ ಕೋರ್ ಕಮೀಟಿ ಸಭೆಯಲ್ಲಿ ಗೋಕಾಕ ರಮೇಶ್ ಜಾರಕಿಹೊಳಿ ಹಾಗೂ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ನಡುವೆ ಬಿರುಸಿನ ಮಾತುಕತೆ ನಡೆದಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಮೂಲಗಳ ಪ್ರಕಾರ ಅಥಣಿಯಿಂದ ಮಹೇಶ್ ಕುಮಠಳ್ಳಿ ಮತ್ತು ಕಾಗವಾಡದಿಂದ ಶ್ರೀಮಂತ್ ಪಾಟೀಲ್ ಅವರನ್ನು ಕಣಕ್ಕಿಳಿಸಲು ರಮೇಶ್ ಒತ್ತಾಯಿಸಿದ್ದಾರೆ. ಈ ಇಬ್ಬರೂ ಶಾಸಕರು 2019ರಲ್ಲಿ ರಮೇಶ್ ಜೊತೆಗೂಡಿ ಕಾಂಗ್ರೆಸ್ನಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕೂಡ ಅಥಣಿ ಕ್ಷೇತ್ರದ ಆಕಾಂಕ್ಷಿಯಾಗಿದ್ದು, ಅಲ್ಲಿಂದ ಮತ್ತೆ ಕುಮಠಳ್ಳಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೆಚ್ಚು ಒಲವು ತೋರಿಲ್ಲ ಎನ್ನಲಾಗಿದೆ. ಶ್ರೀಮಂತ ಪಾಟೀಲರನ್ನು ಕಾಗವಾಡದಿಂದ ಪುನರಾವರ್ತನೆ ಮಾಡಲು ಪಕ್ಷವೂ ಬಯಸುತ್ತಿಲ್ಲವೆಂದು ಮೂಲಗಳು ತಿಳಿಸಿವೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಮ್ಮ ಆಪ್ತರೊಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡುವಂತೆ ರಮೇಶ್ ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಬೇಡಿಕೆಗಳು ಪಕ್ಷದ ನಾಯಕತ್ವಕ್ಕೆ ಒಪ್ಪಿಗೆ ಆಗಲಿಲ್ಲ. ವಿಶೇಷವಾಗಿ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿ ಎಸ್ ಯಡಿಯೂರಪ್ಪ ಕೋಪಗೊಂಡಿದ್ದಾರೆ. ದೊಡ್ಡ ಧ್ವನಿಯಲ್ಲಿ ಮಾತನಾಡಿದ್ದಕ್ಕೆ, ರಮೇಶ್ ಅವರನ್ನು ಬಿಎಸ್ವೈ ತರಾಟೆಗೆ ತೆಗೆದುಕೊಂಡಿದ್ದಾರೆ. ಕ್ರಮವನ್ನೂ ಜರುಗಿಸುವುದಾಗಿ ಎಚ್ಚರಿಸಿದ್ದಾರೆ. ರಮೇಶ್ ಅವರ ಬೆಂಬಲಕ್ಕೆ ಬಂದ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಿಗೆ ಕ್ಷಮಾಪಣೆಯನ್ನೂ ಕೇಳಿದ್ದಾರೆ.
ಭಿನ್ನಾಭಿಪ್ರಾಯ ನಿವಾರಿಸಲು ಬೆಳಗಾವಿಯ ಮುಖಂಡರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತ್ಯೇಕ ಸಭೆ ಇಂದು ಸಭೆಯನ್ನೂ ನಡೆಸಿದ್ದಾರೆ.
ಕಡಾಡಿ- ಜಾರಕಿಹೊಳಿ ಸಂಘರ್ಷ
ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ವಾಗ್ಯುದ್ದ ನಡೆದಿದೆ. ಕೋರ್ ಕಮೀಟಿ ಸಭೆಯಲ್ಲಿ ಈರಣ್ಣ ಕಡಾಡಿ ಅವರು ಭಾಗವಹಿಸಿದ್ದರು. ಈ ವೇಳೆ, ಅಭಿಪ್ರಾಯ ತಿಳಿಸಿದ ಅವರು, ಕಾಂಗ್ರೆಸ್ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ವಿರುದ್ಧ ಬಾಲಚಂದ್ರ ಜಾರಕಿಹೊಳಿ ಸ್ಪರ್ಧಿಸಲಿ ಎಂದು ಸಲಹೆ ನೀಡಿದರು. ಪ್ರಸ್ತುತ ಬಾಲಚಂದ್ರ ಜಾರಕಿಹೊಳಿ ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ.
ಕಡಾಡಿ ಸಲಹೆಗೆ ಕೆರಳಿದೆ ರಮೇಶ್ ಜಾರಕಿಹೊಳಿ, 'ನಮ್ಮ ಬಗ್ಗೆ ಮಾತನಾಡೋಕೆ ನೀನ್ಯಾರು?' ಎಂದು ಏಕವಚನದಲ್ಲಿ ಗುಡುಗಿದ್ದಾರೆ. ಇದು ಬಿಜೆಪಿ ನಾಯಕರನ್ನು ಕೆರಳಿಸಿದೆ ಎಂದು ತಿಳಿದುಬಂದಿದೆ.
ಲಂಚ ಪ್ರಕರಣದಲ್ಲಿ ಸಿಕ್ಕುಬಿದ್ದಿರುವ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಶಾಸಕ ನೆಹರೂ ಓಲೇಕಾರ ಅವರನ್ನು ಕಣಕ್ಕಿಳಿಸಿದರೆ ಪಕ್ಷಕ್ಕೆ ಹಾನಿಯಾಗಬಹುದು ಎಂಬ ಆತಂಕವನ್ನು ದಾವಣಗೆರೆ ಮತ್ತು ಹಾವೇರಿಯ ಜಿಲ್ಲಾ ಮುಖಂಡರು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ವಿರೂಪಾಕ್ಷಪ್ಪ ಮತ್ತು ಓಲೇಕಾರ ಅವರ ಉಮೇದುವಾರಿಕೆಗೆ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭ್ರಷ್ಟಾಚಾರದ ಕುರಿತು ಆಡಳಿತ ಪಕ್ಷದ ನಿಲುವಿನ ಬಗ್ಗೆ ಪ್ರತಿಪಕ್ಷಗಳು ದಾಳಿ ಮಾಡಲು ಇದು ಅವಕಾಶ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಶಾಸಕ ಕೆ ಎಸ್ ಈಶ್ವರಪ್ಪ ಪ್ರತಿನಿಧಿಸುತ್ತಿರುವ ಶಿವಮೊಗ್ಗ ಕ್ಷೇತ್ರದ ವಿವಿಧ ಆಕಾಂಕ್ಷಿಗಳ ಬಗ್ಗೆಯೂ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.












Click it and Unblock the Notifications