ಚುನಾವಣಾ ದಿನಾಂಕ ಘೋಷಣೆ; ಇಲಾಖೆಗಳಿಗೆ ಮುಖ್ಯ ಕಾರ್ಯರ್ಶಿಗಳ ಸುತ್ತೋಲೆ
ಬೆಂಗಳೂರು, ಮಾರ್ಚ್ 30; ಕರ್ನಾಟಕದ 2023ರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಏಪ್ರಿಲ್ 13ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಮೇ 10ರ ಬುಧವಾರ ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ.
ಚುನಾವಣಾ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜವಾಬ್ದಾರಿ ಹೆಚ್ಚಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಲ್ಲಾ ಇಲಾಖೆಗಳಿಗೆ ನೀತಿ ಸಂಹಿತೆ ಜಾರಿ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಕರ್ನಾಟಕ ವಿಧಾನಸಭೆಗೆ ಸಾರ್ವಜನಿಕ ಚುನಾವಣೆಗಳನ್ನು ಭಾರತ ಚುನಾವಣಾ ಆಯೋಗವು ಇಂದು ಘೋಷಿಸಿದ್ದು, ಮಾದರಿ ನೀತಿ ಸಂಹಿತೆಯು ಜಾರಿಗೆ ಬಂದಿರುತ್ತದೆ. ಜಾರಿಯಾಗಿರುವ ಚುನಾವಣಾ ಮಾದರಿ ನೀತಿ ಸಂಹಿತೆಯು ಉಲ್ಲಂಘನೆಯಾಗದಂತೆ ಇಲಾಖೆಗಳು ಜಾಗ್ರತೆ ವಹಿಸುವುದು ಅವಶ್ಯವಾಗಿರುತ್ತದೆ ಎಂದು ಹೇಳಿದ್ದಾರೆ.
ಮಾದರಿ ನೀತಿ ಸಂಹಿತೆ ವಿನಾಯಿತಿ ಬೇಕಾದ ಪ್ರಸ್ತಾವನೆಗಳಿಗೆ ಭಾರತ ಚುನಾವಣಾ ಆಯೋಗದ ಅನುಮೋದನೆ ಕೋರಲು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿನ ಪರಿಶೀಲನಾ ಸಮಿತಿಯ ಮುಂದೆ ಮಂಡಿಸಬೇಕಾಗುತ್ತದೆ. ಆದ್ದರಿಂದ, ತಮ್ಮ ಇಲಾಖೆಯ ಹಾಗೂ ಅಧೀನದ ಮಂಡಳಿ/ ನಿಗಮಗಳಿಗೆ ಸಂಬಂಧಿಸಿದಂತೆ, ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಬೇಕಾಗಿರುವ ತುರ್ತು ಪ್ರಸ್ತಾವನೆಗಳನ್ನು ಮಾತ್ರ ಸೂಕ್ತ ಸಮರ್ಥನೆಗಳೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಪರಿಶೀಲನಾ ಸಮಿತಿಗೆ ಆಡಳಿತ ಇಲಾಖೆಗಳು ಕಳುಹಿಸುವುದು ಎಂದು ತಿಳಿಸಲಾಗಿದೆ.

ಮಾದರಿ ನೀತಿ ಸಂಹಿತೆ ಜಾರಿ; ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಣೆ ಕರ್ನಾಟಕದ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದರು. ರಾಜ್ಯದಲ್ಲಿ ತಕ್ಷಣದಿಂದ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಹೇಳಿದರು. ಏಪ್ರಿಲ್ 13ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಏಪ್ರಿಲ್ 21 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಮೇ 10ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ.
ನೀತಿ ಸಂಹಿತೆ ರಾಜಕೀಯ ಪಕ್ಷ, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ, ಸರ್ಕಾರದ ವಿವಿಧ ಇಲಾಖೆಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ/ ಮಂಡಳಿಗಳು, ಸ್ಥಳೀಯ ಪೌರ ಸಂಸ್ಥೆಗಳು ಸೇರಿದಂತೆ ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವ ಪ್ರತಿಯೊಂದು ಸಂಸ್ಥೆ ಅಥವ ಕಚೇರಿಗಳು ಸೇರಿದಂತೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳಿಗೆ, ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವವರಿಗೆ ಅನ್ವಯವಾಗುತ್ತದೆ.
ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ಸರ್ಕಾರ ಹೊಸ ಯೋಜನೆ ಕಾರ್ಯಕ್ರಮ ಘೋಷಣೆ ಮಾಡುವಂತಿಲ್ಲ. ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸುವಂತಿಲ್ಲ. ಹೊಸ ಯೋಜನೆ ಮತ್ತು ಕಾರ್ಯಕ್ರಮಗಳಿಗೆ ಹಣ ಮಂಜೂರು ಮಾಡುವಂತಿಲ್ಲ. ಹೊಸ ಡಿಪಿಆರ್ ತಯಾರು ಮಾಡುವಂತಿಲ್ಲ, ಟೆಂಡರ್ ಕರೆಯುವಂತಿಲ್ಲ.
ಆದರೆ ಬರ, ಪ್ರವಾಹಕ್ಕೆ ಪರಿಹಾರ ಬಿಡುಗಡೆ, ಕುಡಿಯುವ ನೀರು ಪೂರೈಕೆ, ಗೋ ಶಾಲೆ ಸ್ಥಾಪನೆ ತೆರೆಯಲು ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ. ಆದರೆ ಚುನಾವಣಾ ಆಯೋಗದ ಅನುಮತಿಯನ್ನು ಪಡೆಬೇಕು. ರಸ್ತೆ, ಸಮುದಾಯ ಭವನ, ಆಟದ ಮೈದಾನ ಮುಂತಾದ ಕಾಮಗಾರಿಗಳು ಪೂರ್ಣಗೊಂಡಿದ್ದರೆ ಅಧಿಕೃತ ಕಾರ್ಯಕ್ರಮಗಳು ಇಲ್ಲದೇ ಅಧಿಕಾರಿಗಳ ಮೂಲಕ ಅವುಗಳನ್ನು ಸಾರ್ವಜನಿಕ ಸೇವೆಗಳಿಗೆ ಸಮರ್ಪಣೆ ಮಾಡಬಹುದಾಗಿದೆ.
ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಚುನಾವಣಾ ಆಯೋಗದ ಸೂಚನೆಯಂತೆ ವಿವಿಧ ಇಲಾಖೆಗಳು ಒಟ್ಟಾಗಿ ಕಾರ್ಯ ನಿರ್ವಹಣೆ ಮಾಡುತ್ತಿವೆ. ಜಿಲ್ಲಾಚುನಾವಣಾಧಿಕಾರಿಗಳು ಸಹ ತಂಡಗಳನ್ನು ರಚನೆ ಮಾಡಿದ್ದಾರೆ.












Click it and Unblock the Notifications