'ರಾಜ್ಯದ ಜನ ಮತ್ತೆ ಬಿಎಸ್ ಯಡಿಯೂರಪ್ಪರನ್ನು ನಂಬುವುದಿಲ್ಲ: ಸಿದ್ದರಾಮಯ್ಯ ವಾಗ್ದಾಳಿ
ರಾಜ್ಯ ಚುನಾವಣೆಯಲ್ಲಿ ಮ್ತತೆ ಅದಿಕಾರಕ್ಕೆ ಬರಲು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಕಾಂಗ್ರೆಸ್ ಕೂಡ ಬಿಜೆಪಿಯ ಪ್ರಯತ್ನಗಳನ್ನು ಮುರಿಯುತ್ತಿದೆ. ಸರ್ಕಾರ ಮತ್ತು ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು, ಫೆಬ್ರವರಿ. 05: ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯದ ಜನರು ಮತ್ತೆ ಅವರನ್ನು ನಂಬುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಜನರಿಗೆ ಹೊರೆಯಾಗಿದೆ ಎಂದು ಕಿಡಿಕಾರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷದ ನಾಯಕ, ''ಬಿಜೆಪಿಗೆ ತಮ್ಮವರೇ ಆದ ಯಡಿಯೂರಪ್ಪನವರ ಮೇಲೆ ನಂಬಿಕೆ ಇಲ್ಲ, ಹೀಗಾಗಿಯೇ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದಾರೆ. ಅವರನ್ನು ಮತ್ತೊಮ್ಮೆ ನಂಬಿ ಬಿಜೆಪಿಗೆ ಅವಕಾಶ ನೀಡಲು ರಾಜ್ಯದ ಜನತೆ ಸಿದ್ಧರಿಲ್ಲ. ಭ್ರಷ್ಟ ಪಕ್ಷವನ್ನು ಅಧಿಕಾರದಿಂದ ತೆಗೆದುಹಾಕಲು ಜನ ಸಾಮಾನ್ಯರು ಚುನಾವಣೆಗಾಗಿ ಕಾಯುತ್ತಿದ್ದಾರೆ" ಎಂದು ಹೇಳಿದ್ದಾರೆ.
ವಿಧಾನಸಭಾ ಚುನಾವಣೆ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರತ್ಯೇಕ ಪ್ರಜಾಧ್ವನಿ ಯಾತ್ರೆಯ ಸಂಪೂರ್ಣ ವಿವರಗಳು
ಮುಖ್ಯಮಂತ್ರಿ ಅಭ್ಯರ್ಥಿಗಾಗಿ ಕಾಂಗ್ರೆಸ್ ನಾಯಕರು ಹರಸಾಹಸ ಪಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದ ಬಿಎಸ್ ಯಡಿಯೂರಪ್ಪ ಅವರ ಮಾತಿನ ಬೆನ್ನಲ್ಲೇ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ.
ಇನ್ನು, ತಾವು ಕೋಲಾರದಿಂದಲೇ ಸ್ಪರ್ಧೆ ಮಾಡುವ ಬಗ್ಗೆ ಮತ್ತೆ ಮಾತನಾಡಿದ್ದಾರೆ. "ಹತ್ತಿರ ಎನ್ನುವ ಕಾರಣಕ್ಕೆ ಕೋಲಾರವನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಪಕ್ಷದ ಹೈಕಮಾಂಡ್ ಫೈನಲ್ ಮಾಡಿದರೆ ನೂರಕ್ಕೆ ನೂರರಷ್ಟು ಕೋಲಾರದಲ್ಲಿ ಗೆಲ್ಲುತ್ತೇನೆ" ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಮಾತನಾಡಿದ್ದ ಯಡಿಯೂರಪ್ಪ, ಅವರು ಹಳೆ ಮೈಸೂರು ಭಾಗದಿಂದಲೇ ಸ್ಪರ್ಧಿಸಲಿದ್ದಾರೆ. ಇದು ಸುಮ್ಮನೆ ನಾಟಕ ಎಂದು ಹೇಳಿದ್ದರು.
ಬೆಂಗಳೂರಿನಲ್ಲಿ ಪಕ್ಷದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದ ಯಡಿಯೂರಪ್ಪ, "ಕಾಂಗ್ರೆಸ್ಗೆ ಪ್ರಬಲ ನಾಯಕರಿಲ್ಲ ಮತ್ತು ಆಂತರಿಕವಾಗಿ ಸಿಎಂ ಸ್ಥಾನಕ್ಕಾಗಿ ಕಿತ್ತಾಡುವ ನಾಯಕರಿದ್ದಾರೆ. ಚುನಾವಣೆಯಲ್ಲಿ ನಾವು 130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಎಸ್ಸಿ/ಎಸ್ಟಿ ಅಥವಾ ಹಿಂದುಳಿದ ವರ್ಗಗಳ ಮೊಹಲ್ಲಾದತ್ತ ಗಮನ ಹರಿಸಬೇಕು, ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅವುಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕು. ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆಯೂ ಜನರಿಗೆ ತಿಳಿಸಬೇಕು" ಎಂದಿದ್ದಾರೆ.