ಚುನಾವಣೆ ಹೊಸ್ತಿಲಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಬೊಮ್ಮಾಯಿ ನಿರೀಕ್ಷೆ ಏನು? ಯಾರಾಗಬಹುದು ಹೊಸ ಸಚಿವರು?
ಬೆಂಗಳೂರು, ಜನವರಿ 18: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬಿಜೆಪಿಯ ಕೇಂದ್ರ ನಾಯಕತ್ವದೊಂದಿಗೆ ವಿಸ್ತೃತ ಚರ್ಚೆ ನಡೆಸಿದ್ದೇವೆ. ಅವರಿಂದ ಸೂಚನೆ ಬಂದ ತಕ್ಷಣ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬೊಮ್ಮಾಯಿ ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿದ್ದರು.
'ನಾವು ಈಗಾಗಲೇ ಕಳೆದ ಬಾರಿ ಚರ್ಚಿಸಿದ್ದೇವೆ. ಅವರು (ಪಕ್ಷದ ನಾಯಕತ್ವ) ಶೀಘ್ರದಲ್ಲೇ ಈ ಬಗ್ಗೆ ತಿಳಿಸುತ್ತಾರೆ. ಕಳೆದ ಎರಡು ದಿನಗಳಿಂದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇತ್ತು. ನಮಗೆ ಪ್ರತ್ಯೇಕವಾಗಿ ಚರ್ಚಿಸಲು ಸಾಧ್ಯವಾಗಲಿಲ್ಲ,' ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕತ್ವದೊಂದಿಗೆ ಈ ಹಿಂದೆಯೇ ಚರ್ಚಿಸಲಾಗಿದ್ದು, ಅದರ ಆಣತಿಯನಂತೆ ಎಲ್ಲವೂ ನಡೆಯಲಿದೆ ಎಂದು ಹೇಳಿದ್ದಾರೆ.
ಬೊಮ್ಮಾಯಿ ಅವರು ಡಿಸೆಂಬರ್ 26 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ವಿವರವಾಗಿ ಚರ್ಚಿಸಿದ್ದರು.
ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ ಎಂದು ನಿರೀಕ್ಷಿಸುತ್ತಿರುವುದಾಗಿ ತಿಳಿಸಿದ ಸಿಎಂ, ಫೆಬ್ರವರಿ 7 ರಂದು ಮತ್ತೊಂದು ಸಭೆಯನ್ನು ನಡೆಸಲಾಗುವುದು ಎಂದು ಹೇಳಿದರು. ಸಚಿವ ಸಂಪುಟಕ್ಕೆ ಯಾರು ಸೇರುತ್ತಾರೆ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ನಡೆಯದ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಿಂದ ಸಿಎಂ ಮೇಲೆ ಒತ್ತಡವಿದೆ. ಮೇ ವೇಳೆಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಖಾಲಿ ಇರುವ ಆರು ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಅಥವಾ ಕೆಲವನ್ನು ಕೈಬಿಟ್ಟು ಸಮಾನ ಸಂಖ್ಯೆಯ ಹೊಸ ಸಚಿವರನ್ನು ಸೇರಿಸಿಕೊಳ್ಳುವ ಮೂಲಕ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂಬ ವರದಿಗಳು ಬಂದಿದ್ದವು.
ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಒತ್ತಡ
ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಉಡುಪಿ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿಗೆ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಸುದ್ದಿಯು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಹೈಕಮಾಂಡ್ನಿಂದ ಸೂಚನೆ ಬಂದಿದೆ. ಆ ನಂತರದಲ್ಲಿ ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಅವರೀಗ ಮತ್ತೊಮ್ಮೆ ಸಚಿವರಾಗಲು ಮುಖ್ಯಮಂತ್ರಿ ಬೊಮ್ಮಾಯಿ ಮೇಲೆ ಒತ್ತಡ ಹೇರುತ್ತಿದ್ದಾರೆ.
ಮಾಜಿ ಸಚಿವ ರಮೇಶ ಜಾರಕಿಹೊಳಿ ಒತ್ತಡ
ಸಿಡಿ ಪ್ರಕರಣದಲ್ಲಿ ಗೋಕಾಕ ಶಾಸಕ, ಮಾಜಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಚುನಾವಣೆ ಹತ್ತಿರವಾಗುತ್ತಿದ್ದಂತೆ ಅವರು ಸಿಎಂ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹೇರುತ್ತಿದ್ದಾರೆ. ಒಂದು ವೇಳೆ, ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡದೇ ಹೋದಲ್ಲಿ, ಅವರು ಮತ್ತೆ ಕಾಂಗ್ರೆಸ್ ಪಕ್ಷದ ಬಾಗಿಲು ತಟ್ಟಬಹುದೆಂಬ ಮಾತುಗಳೂ ರಾಜಕೀಯ ವಲಯದಲ್ಲಿ ಕೇಳಿಬಂದಿವೆ.












Click it and Unblock the Notifications