ಚುನಾವಣಾ ಕಣದಲ್ಲಿ ಮಾವಂದಿರು; ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗ
ಬೆಂಗಳೂರು, ಏಪ್ರಿಲ್ 24; ಕರ್ನಾಟಕ ವಿಧಾನಸಭೆ ಚುನಾವಣಾ ಕಣ ಅಂತಿಮಗೊಂಡಿದೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಸೋಮವಾರ ಮಧ್ಯಾಹ್ನ 3 ಗಂಟೆ ತನಕ ಅವಕಾಶವಿತ್ತು. ಅಭ್ಯರ್ಥಿಗಳು ಮೇ 10ರಂದು ನಡೆಯುವ ಚುನಾವಣಗೆ ಪ್ರಚಾರ ಬಿರುಸುಗೊಳಿಸಿದ್ದಾರೆ. ಚುನಾವಣಾ ಆಯೋಗ ಮತದಾನ, ಮತ ಎಣಿಕೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕರ್ನಾಟಕದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿಯೇ ಕರ್ನಾಟಕ ಸರ್ಕಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಚುನಾವಣಾ ಆಯೋಗದ ಸೂಚನೆಯಂತೆಯೇ ಈ ವರ್ಗಾವಣೆಯನ್ನು ಕೈಗೊಳ್ಳಲಾಗಿದೆ.

ಬೆಂಗಳೂರು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಎಸ್. ಗಿರೀಶ್ ಮತ್ತು ದಾವಣಗೆರೆ ಎಸ್ಪಿ ಸಿ. ಬಿ. ರಿಷ್ಯಂತ್ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಈ ಇಬ್ಬರೂ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಪೊಲೀಸ್ ಇಲಾಖೆ ಪ್ರಧಾನ ಕಚೇರಿಯಲ್ಲಿ ಕೆಲಸ ಮಾಡಲಿದ್ದಾರೆ.
ಏಕೆ ಈ ವರ್ಗಾವಣೆ?; ವೈಟ್ಫೀಲ್ಡ್ ವಿಭಾಗದ ಡಿಸಿಪಿ ಎಸ್. ಗಿರೀಶ್ ಅವರನ್ನು ವರ್ಗಾವಣೆ ಮಾಡಿ ಆ ಜಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೇಮಕ ಮಾಡಲಾಗಿದೆ. ಗಿರೀಶ್ ಅವರ ಮಾವ ಕೆ. ಎನ್. ರಾಜಣ್ಣ ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ.

ದಾವಣಗೆರೆ ಎಸ್ಪಿ ಸಿ. ಬಿ. ರಿಷ್ಯಂತ್ ಸ್ಥಾನಕ್ಕೆ ಡಾ. ಕೆ. ಅರುಣ್ ನೇಮಕ ಮಾಡಲಾಗಿದೆ. ಸಿ. ಬಿ. ರಿಷ್ಯಂತ್ ಅವರ ಮಾವ ಮುನಿರತ್ನ ಬೆಂಗಳೂರು ನಗರ ಆರ್. ಆರ್. ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಮಾವಂದಿರು ಚುನಾವಣೆಗೆ ನಿಂತಿರುವ ಕಾರಣ ಅಳಿಯಂದಿರ ವರ್ಗಾವಣೆಯಾಗಿದೆ.
ವರ್ಗಾವಣೆ ಮಾಡುವಂತಿಲ್ಲ; ಕೇಂದ್ರ ಚುನಾವಣಾ ಆಯೋಗ ಮಾರ್ಚ್ 29ರಂದು ಕರ್ನಾಟಕ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ. ಅಂದಿನಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಯಾವುದೇ ಸರ್ಕಾರಿ ಅಧಿಕಾರಿಯನ್ನು ಸರ್ಕಾರ ವರ್ಗಾವಣೆ ಮಾಡುವಂತಿಲ್ಲ.
ಯಾವುದೇ ವರ್ಗಾವಣೆಗೂ ಮೊದಲು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯ ಸಮಿತಿಗೆ ತಿಳಿಸಬೇಕಿದೆ. ಆದರೆ ಚುನಾವಣಾ ಆಯೋಗವೇ ಸೂಚನೆ ನೀಡಿದರೆ ಯಾವುದೇ ಅಧಿಕಾರಿಯನ್ನು ವರ್ಗಾವಣೆ ಮಾಡಬಹುದು ಅಥವ ಚುನಾವಣಾ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಅಮಾನತು ಸಹ ಮಾಡಬಹುದಾಗಿದೆ.
ಈಗ ಇಬ್ಬರು ಐಪಿಎಸ್ ಅಧಿಕಾರಿಗಳ ಮಾವಂದಿರು ಚುನಾವಣಾ ಕಣದಲ್ಲಿರುವ ಕಾರಣ ಚುನಾವಣಾ ಆಯೋಗದ ಸೂಚನೆಯಂತೆ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಕೆ. ಅರುಣ್ ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು. ದಾವಣಗೆರೆಗೆ ಆಗಮಿಸಿದ ಅವರು ಮೊದಲು ಪೊಲೀಸರಿಂದ ಗೌರವ ವಂದನೆ ಸ್ವೀಕಾರ ಮಾಡಿದರು. ಬಳಿಕ ಸಿ. ಬಿ. ರಿಷ್ಯಂತ್ ಅಧಿಕಾರ ಹಸ್ತಾಂತರ ಮಾಡಿದರು.
ಚುನಾವಣಾ ಆಯೋಗದ ಸೂಚನೆ ಹಿನ್ನಲೆಯಲ್ಲಿ ಕಳೆದ ವಾರ ಡಿಸಿಪಿ (ಉತ್ತರ) ಬೆಂಗಳೂರು, ಎಸಿಪಿ, ನಾಲ್ವರು ಸಬ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿತ್ತು. ಅಲ್ಲದೇ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ನಡೆದ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆಯ ಪರಿಸ್ಥಿತಿಯನ್ನು ಅಸಮರ್ಪಕವಾಗಿ ನಿಭಾಯಿಸಿದ ಕಾರಣ ಡಿವೈಎಸ್ಪಿ ಮತ್ತು ಒಬ್ಬ ಸರ್ಕಲ್ ಇನ್ಸ್ಪೆಕ್ಟರ್ ವರ್ಗಾವಣೆ ಮಾಡಲಾಗಿತ್ತು.
ಅಭ್ಯರ್ಥಿಗಳ ವಿವರ; ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕೆ. ಎಸ್. ರಾಜಣ್ಣ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ. ಬಿಜೆಪಿಯಿಂದ ಎಲ್. ಸಿ. ನಾಗರಾಜ್ ಕಣದಲ್ಲಿದ್ದಾರೆ. ಜೆಡಿಎಸ್ನಿಂದ ವೀರಭದ್ರಯ್ಯ ಅಭ್ಯರ್ಥಿಯಾಗಿದ್ದಾರೆ.
ಬೆಂಗಳೂರಿನ ಆರ್. ಆರ್. ನಗರದಲ್ಲಿ ಮುನಿರತ್ನ ಬಿಜೆಪಿಯ ಅಭ್ಯರ್ಥಿ. ಕಾಂಗ್ರೆಸ್ನಿಂದ ಕುಸುಮಾ ಹನುಮಂತರಾಯಪ್ಪ ಕಣದಲ್ಲಿದ್ದಾರೆ. ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications