Siddaramaiah; ಕೋಲಾರ ಕ್ಷೇತ್ರ ಆಯ್ಕೆ ಹಿಂದಿನ ಲೆಕ್ಕಾಚಾರಗಳು
ಕೋಲಾರ, ಜನವರಿ 10; "ಇಲ್ಲಿನ ಜನರ ಪ್ರೀತಿ ಅಭಿಮಾನವನ್ನು ನಾನು ತಿರಸ್ಕಾರ ಮಾಡಲಾರೆ. ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ ಹೈಕಮಾಂಡ್ನ ಅನುಮತಿ ಮೇರೆಗೆ ನನ್ನ ಸ್ಪರ್ಧೆ ನಿರ್ಧಾರವಾಗಲಿದೆ" ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಸೋಮವಾರ ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ ಈ ಮೂಲಕ ಹಲವಾರು ದಿನಗಳ ಉಹಾಪೋಹಗಳಿಗೆ ತೆರೆ ಎಳೆದರು. ಈ ವಿಚಾರ ಈಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದ ಹಾಲಿ ಶಾಸಕ ಸಿದ್ದರಾಮಯ್ಯ ಮುಂದಿನ ಚುನಾವಣೆ ವೇಳಗೆ ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ ಎಂಬುದು ಖಚಿತವಾಗಿದೆ. ಬೆಂಗಳೂರು ನಗರಕ್ಕೆ ಸಮೀಪ ಇರುವ ಕ್ಷೇತ್ರವನ್ನೇ ಅವರು ಆಯ್ಕೆ ಮಾಡಿಕೊಳ್ಳಲು ಕಾರಣವೇನು? ಎಂಬುದು ಸದ್ಯದ ಚರ್ಚೆಯಾಗಿದೆ.
ಕೋಲಾರ ಕ್ಷೇತ್ರ ಹಾಲಿ ಶಾಸಕರು ಕೆ. ಶ್ರೀನಿವಾಸ ಗೌಡ. ಅವರು ಸಹ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ ನಾನು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡದೆ ಬೆಂಬಲ ನೀಡುತ್ತೇನೆ ಎಂದು ಸಹ ಹೇಳಿದ್ದಾರೆ. ಕೋಲಾರವನ್ನು ಸಿದ್ದರಾಮಯ್ಯ ಆಯ್ಕೆ ಮಾಡಿಕೊಳ್ಳಲು ಕಾರಣಗಳು ಇಲ್ಲಿವೆ....

ಸಿದ್ದರಾಮಯ್ಯ ಕೋಲಾರ ಆಯ್ಕೆ ಏಕೆ?
2023ರ ವಿಧಾನಸಭೆ ಚುನಾವಣೆಗೆ ಕ್ಷೇತ್ರ ಬದಲಾವಣೆ ಮಾಡಬೇಕು ಎಂದು ತೀರ್ಮಾನಿಸಿದ್ದ ಸಿದ್ದರಾಮಯ್ಯ ಕೋಲಾರದ ಮೇಲೆ ಕಣ್ಣಿಟ್ಟಿದ್ದರು. ಅದಕ್ಕಾಗಿ ಅವರು ಎರಡು ಬಾರಿ ಖಾಸಗಿ ಸಂಸ್ಥೆ ಮೂಲಕ ಕ್ಷೇತ್ರದಲ್ಲಿ ಸಮೀಕ್ಷೆ ಮಾಡಿಸಿದ್ದಾರೆ. ಎರಡೂ ಸಮೀಕ್ಷೆಗಳಲ್ಲೂ ಸಿದ್ದರಾಮಯ್ಯ ಗೆಲುವು ಸುಲಭ ಎಂಬ ವರದಿ ಬಂದಿದೆ. ಈ ಹಿನ್ನಲೆಯಲ್ಲಿ ಅವರು ಕೋಲಾರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಕೋಲಾರದಲ್ಲಿ ಸೋಮವಾರ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಕೆ. ಹೆಚ್. ಮುನಿಯಪ್ಪ ಅವರ ಆದಿಯಾಗಿ ಕೋಲಾರ ಜಿಲ್ಲೆಯ ಎಲ್ಲಾ ನಾಯಕರು ಇಲ್ಲಿಂದಲೇ ಸ್ಪರ್ಧೆ ಮಾಡಬೇಕು ಎಂದು ನನಗೆ ಒತ್ತಾಯ ಮಾಡುತ್ತಿದ್ದಾರೆ" ಎಂದು ಹೇಳಿದ್ದಾರೆ.

ಬೆಂಗಳೂರಿಗೆ ಹತ್ತಿರದಲ್ಲಿರುವ ಕ್ಷೇತ್ರ
2013ರ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಗೆದ್ದು ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. 2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ, ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದ ಕಣಕ್ಕಿಳಿದರು. ಬಾದಾಮಿಯಲ್ಲಿ ಗೆದ್ದ ಅವರು ಅದು ಬಹಳ ದೂರ ಎಂದು ಹೇಳುತ್ತಿದ್ದರು. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಬೆಂಗಳೂರು ನಗರಕ್ಕೆ ಹತ್ತಿರದಲ್ಲಿರುವ ಕ್ಷೇತ್ರದ ಹುಡುಕಾಟದಲ್ಲಿದ್ದರು. ಆಗ ಅವರು ಆಯ್ಕೆ ಮಾಡಿರುವುದೇ ಕೋಲಾರ ವಿಧಾನಸಭಾ ಕ್ಷೇತ್ರ.
ಕೆಲವು ತಿಂಗಳ ಹಿಂದೆ ಸಿದ್ದರಾಮಯ್ಯ ಕೋಲಾರಕ್ಕೆ ಭೇಟಿ ನೀಡಿ, ದೇವಾಲಯ, ಮಸೀದಿ, ಚರ್ಚ್ಗಳಿಗೆ ಭೇಟಿ ನೀಡಿದ್ದರು. ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ, ಎಲ್ಲಾ ಧರ್ಮಗುರುಗಳೊಂದಿಗೆ ಮಾತನಾಡಿದ್ದರು. ಜನವರಿ 9ರಂದು ಕೋಲಾರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.

ಪುತ್ರನ ರಾಜಕೀಯ ಭವಿಷ್ಯ
ಸಿದ್ದರಾಮಯ್ಯ ವರುಣದಿಂದ ಕಣಕ್ಕಿಳಿಯಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. 2018ರ ಚುನಾವಣೆಯಲ್ಲಿ ಕ್ಷೇತ್ರವನ್ನು ಪುತ್ರ ಯತೀಂದ್ರಗೆ ತ್ಯಾಗ ಮಾಡಿ ಸಿದ್ದರಾಮಯ್ಯ ಚಾಮುಂಡೇಶ್ವರಿ, ಬಾದಾಮಿಯಲ್ಲಿ ಕಣಕ್ಕಿಳಿದಿದ್ದರು. ಯತೀಂದ್ರ ಸಿದ್ದರಾಮಯ್ಯ ವರುಣದಲ್ಲಿ ಕಣಕ್ಕಿಳಿದು ಗೆಲುವು ಕಂಡಿದ್ದರು.
ಮುಂದಿನ ಚುನಾವಣೆಗೆ ವರುಣದಿಂದ ಕಣಕ್ಕಿಳಿದರೆ ಪುತ್ರನ ರಾಜಕೀಯ ಭವಿಷ್ಯವೇನು? ಎಂಬುದು ಸಿದ್ದರಾಮಯ್ಯ ಲೆಕ್ಕಾಚಾರವಾಗಿದೆ. ಯತೀಂದ್ರರನ್ನು ಬೇರೆ ಕಡೆ ನಿಲ್ಲಿಸಿ ಗೆಲ್ಲಿಸುವುದು ಕಷ್ಟ. ಆದ್ದರಿಂದ ಸಿದ್ದರಾಮಯ್ಯ ಕೋಲಾರವನ್ನು ಆಯ್ಕೆ ಮಾಡಿಕೊಂಡು, ವರುಣವನ್ನು ಪುತ್ರನಿಗೆ ಬಿಟ್ಟುಕೊಟ್ಟಿದ್ದಾರೆ ಎಂಬ ವಿಶ್ಲೇಷಣೆ ನಡೆಯುತ್ತಿದೆ.
ಕೋಲಾರ ಸ್ಪರ್ಧೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, "ಸಿದ್ದರಾಮಯ್ಯ ಎಂಬ ಕಾರಣಕ್ಕೆ ಪಕ್ಷದಲ್ಲಿ ನನಗೊಬ್ಬನಿಗೇ ವಿಶೇಷ ಅವಕಾಶ, ಸೌಲಭ್ಯ ಇಲ್ಲ, ಪಕ್ಷದಲ್ಲಿ ಯಾರೇ ಆಗಲಿ ಎಲ್ಲರೂ ಹೈಕಮಾಂಡ್ನ ಅನುಮತಿ ಪಡೆದು ಸ್ಪರ್ಧೆ ಮಾಡಬೇಕು. ಅದರಂತೆ ನನಗೂ ಹೈಕಮಾಂಡ್ ಅನುಮತಿ ನೀಡಿದರೆ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ" ಎಂದು ಹೇಳಿದ್ದಾರೆ.

ಪಕ್ಷ ಸಂಘಟನೆ, ಒಳಜಗಳ
2019ರ ಲೋಕಸಭೆ ಚುನಾವಣೆಯಲ್ಲಿ ಹಿರಿಯ ನಾಯಕ ಕೆ. ಹೆಚ್. ಮುನಿಯಪ್ಪ ಸೋತ ಬಳಿಕ ಕೋಲಾರ ಜಿಲ್ಲಾ ಕಾಂಗ್ರೆಸ್ನ ಚಿತ್ರಣ ಬದಲಾಗಿದೆ. ಜಿಲ್ಲಾ ಕಾಂಗ್ರೆಸ್ನಲ್ಲಿ ಒಳಜಗಳವಿದೆ. ಆದ್ದರಿಂದ ಸಿದ್ದರಾಮಯ್ಯ ಅದನ್ನು ಸರಿಪಡಿಸಿ ಎಲ್ಲರನ್ನೂ ಒಗ್ಗಟ್ಟಾಗಿ ಕರೆದುಕೊಂಡು ಹೋಗಲು ಕೋಲಾರದಿಂದಲೇ ಕಣಕ್ಕಿಳಿಯುವುದಾಗಿ ಘೋಷಣ ಮಾಡಿದ್ದಾರೆ.
ಅಲ್ಲದೇ ಕೋಲಾರದಲ್ಲಿ ಸುಮಾರು 40 ಸಾವಿರ ಮುಸ್ಲಿಂ, 49 ಸಾವಿರ ಎಸ್ಸಿ, 38 ಸಾವಿರ ಒಕ್ಕಲಿಗ ಮತಗಳಿವೆ. ಮತಗಳು ಬಿಜೆಪಿ, ಜೆಡಿಎಸ್ ಎಂದು ವಿಭಜನೆ ಆಗುವುದನ್ನು ತಡೆಯಲು ಸಿದ್ದರಾಮಯ್ಯ ಕೋಲಾರ ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಲೆಕ್ಕಾಚಾರವಿದೆ.

ಕೋಲಾರದ ಜಾತಿ ಲೆಕ್ಕಾಚಾರ ಹೀಗಿದೆ
ಕೋಲಾರದ ಜಾತಿ ಲೆಕ್ಕಾಚಾರವನ್ನು ನೋಡಿರುವ ಸಿದ್ದರಾಮಯ್ಯ ಆ ಕ್ಷೇತ್ರದಿಂದಲೇ ಕಣಕ್ಕಿಳಿಯಲು ಬಯಸಿದ್ದಾರೆ. ಕೋಲಾರದ ಒಟ್ಟು ಮತದಾರರ ಸುಮಾರು 2,24,455 ಆಗಿದೆ.
ಇವರಲ್ಲಿ 49 ಸಾವಿರ ಎಸ್ಸಿ, 41 ಸಾವಿರ ಮುಸ್ಲಿಂ, 38 ಸಾವಿರ ಒಕ್ಕಲಿಗ, 25 ಸಾವಿರ ಕುರುಬ, 11 ಸಾವಿರ ಎಸ್ಟಿ, 5 ಸಾವಿರ ಬ್ರಾಹ್ಮಣ, 53 ಸಾವಿರ ಇತರೆ ಮತಗಳಿವೆ. ಎಸ್ಸಿ, ಮುಸ್ಲಿಂ, ಕುರುಬ, ಎಸ್ಟಿ, ಇತರೆ ಮತಗಳು ಸೇರಿದರೆ ಸುಲಭವಾಗಿ ಗೆಲುವು ಸಾಧಿಸಬಹುದು ಎಂಬುದು ಸಿದ್ದರಾಮಯ್ಯ ಲೆಕ್ಕಾಚಾರವಾಗಿದೆ.












Click it and Unblock the Notifications