ಮಗಳು ಪ್ರಿಯಾಂಕಾಗೆ ಯಮನಕನಮರಡಿ ಬಿಟ್ಟುಕೊಟ್ಟು, ಸವದತ್ತಿಯತ್ತ ಸತೀಶ ಜಾರಕಿಹೊಳಿ ಚಿತ್ತ?
ಬೆಂಗಳೂರು, ಡಿಸೆಂಬರ್ 21: ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇವೆ. ರಾಜಕೀಯ ಪಕ್ಷಗಳು ಚುನಾವಣೆಗೆ ತಯಾರಿ ನಡೆಸಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ದೆಹಲಿ ಹಾಗೂ ಪಂಜಾಬ್ನಲ್ಲಿ ಸ್ಪಷ್ಟ ಬಹುಮತದಿಂದ ಅಧಿಕಾರ ಗದ್ದುಗೆ ಹಿಡಿದಿರುವ ಆಮ್ ಆದ್ಮಿ ಪಕ್ಷವು ಸಹ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಬಿಜೆಪಿ ಪ್ರಧಾನಿ ಮೋದಿ ವರ್ಚಸ್ಸನ್ನು ಬಳಸಿಕೊಳ್ಳುವ ಎಲ್ಲ ರೀತಿಯ ಯತ್ನಗಳನ್ನು ಮಾಡಲಿದೆ. ಆಡಳಿತ ವಿರೋಧಿ ಅಲೆಯನ್ನು ಬಳಸಿಕೊಳ್ಳಲು ಕಾಂಗ್ರೆಸ್ ಸಜ್ಜಾಗಿದೆ. ಇನ್ನು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷವು ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಸಕ್ರಿಯವಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳಲ್ಲಿ ಜೆಡಿಎಸ್ಗೆ ಹೆಚ್ಚು ಲಾಭವಾಗಬಹುದು.
ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಕುಟುಂಬದ ಪ್ರಾಬಲ್ಯ
ಉತ್ತರ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ. ಅದರಲ್ಲೂ ಬೆಳಗಾವಿ ಜಿಲ್ಲೆ, ಪ್ರತಿಷ್ಠಿತ ರಾಜಕಾರಣಕ್ಕೆ ಹೆಸರುವಾಸಿಯಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಎರಡು ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಡುವುದು ಶತಸಿದ್ಧ. 18 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಜಾತಿ ಹಾಗೂ ಕೌಟುಂಬಿಕ ಹಿನ್ನೆಲೆಗಳು ಹೆಚ್ಚು ಪ್ರಭಾವ ಬೀರುತ್ತವೆ. ಅದರಲ್ಲೂ ಜಾರಕಿಹೊಳಿ ಕುಟುಂಬದ ರಾಜಕೀಯ ರಾಜ್ಯ ರಾಜಕಾರಣದಲ್ಲಿ ಹೆಚ್ಚು ಸದ್ದು ಮಾಡಲಿದೆ. ಈ ಬಾರಿ ರಮೇಶ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ನಿಂದ ಕಣಕ್ಕಿಳಿಯಲಿದ್ದಾರೆ. ಇನ್ನು ಅವರ ಕಿರಿಯ ಸಹೋದರ ಲಖನ್ ಜಾರಕಿಹೊಳಿ ಎಂಎಲ್ಸಿ (ಪಕ್ಷೇತರ) ಆಗಿದ್ದಾರೆ.
ಜಾರಕಿಹೊಳಿ ಕುಟುಂಬದ ಎರಡನೇ ತಲೆಮಾರು ರಾಜಕೀಯಕ್ಕೆ?
ಇಲ್ಲಿ ಕುತೂಹಲ ಕೆರಳಿಸಿರುವ ವಿಚಾರವೆಂದರೆ, ಜಾರಕಿಹೊಳಿ ಮನೆತನದ ಎರಡನೇ ತಲೆಮಾರು ರಾಜ್ಯ ರಾಜಕೀಯಕ್ಕೆ ಪ್ರವೇಶ ಪಡೆದಿರುವುದು. ಸತೀಶ್ ಜಾರಕಿಹೊಳಿ ಕ್ಷೇತ್ರವಾದ ಯಮಕನಮರಡಿಯಲ್ಲಿ ಅವರ ಮಗಳು ಪ್ರಿಯಾಂಕಾ ಸಕ್ರಿಯವಾಗಿರುವುದು. ಕಳೆದ ಎರಡು ವರ್ಷಗಳಿಂದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿರುವುದು.
ರಾಜಕೀಯಕ್ಕೆ ಪ್ರವೇಶದ ಕುರಿತು ಮಾತನಾಡಿರುವ ಪ್ರಿಯಾಂಕಾ ಅವರು, ತಮ್ಮ ತಂದೆ ಹೇಳಿದರೆ ರಾಜಕೀಯಕ್ಕೆ ಬರುವುದಾಗಿ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ ಅವರು, ತಮ್ಮ ಮಗಳು ಪ್ರಿಯಾಂಕಾ ರಾಜಕೀಯ ಪ್ರವೇಶಿಸುವುದು ಖಚಿತವೆಂದು ತಿಳಿಸಿದ್ದಾರೆ. ಒಂದು ವೇಳೆ, ಪ್ರಿಯಾಂಕಾ ಅವರು ರಾಜಕೀಯ ಪ್ರವೇಶಿಸದರೆ, ಯಮಕನಮರಡಿಯಿಂದಲೇ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬಂದಿವೆ. ಇದು ನಿಜವೇ ಆಗಿದ್ದಲ್ಲಿ, ಸತೀಶ್ ಜಾರಕಿಹೊಳಿ ಸವದತ್ತಿ ಯಲ್ಲಮ್ಮ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎಂಬ ವಿಚಾರ ಮುನ್ನೆಲೆಗೆ ಬಂದಿದೆ.
ಸವದತ್ತಿ ಯಲ್ಲಮ್ಮ ಕ್ಷೇತ್ರವೇ ಏಕೆ?
ಸವದತ್ತಿ ಯಲ್ಲಮ್ಮ ಕ್ಷೇತ್ರವು ಧಾರ್ಮಿಕ ಹಾಗೂ ಐತಿಹಾಸಿಕವಾಗಿ ಮಹತ್ವ ಪಡೆದುಕೊಂಡಿದೆ. ಇಲ್ಲಿ ಲಿಂಗಾಯತರ ಪ್ರಾಬಲ್ಯವಿದೆ. ಕಳೆದ ಮೂರು ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಸವದತ್ತಿ ಶಾಸಕರಾಗಿದ್ದ ಆನಂದ ಮಾಮನಿ ಅವರು ಮೃತಪಟ್ಟಿದ್ದಾರೆ. ಬಿಜೆಪಿಯಿಂದ ಪ್ರಬಲ ಅಭ್ಯರ್ಥಿಯೊಬ್ಬರು ತಯಾರಾಗಬೇಕಿದೆ.
ಸತೀಶ್ ಜಾರಕಿಹೊಳಿ ಅವರು ಸವದತ್ತಿ ಅನ್ನು ಪ್ರತಿಷ್ಠಿತ ಕ್ಷೇತ್ರವೆಂದು ಪರಿಗಣಿಸಿದ್ದಾರೆ. ಈ ಕ್ಷೇತ್ರದಲ್ಲಿ ಮೊದಲಿನಿಂದಲೂ ಸಕ್ರಿಯರಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ 10 ರಿಂದ 12 ಸ್ಥಾನಗಳು ಬರಲಿವೆ ಎಂದು ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಸಂಸದ ಸ್ಥಾನಕ್ಕಾಗಿ ನಡೆದ ಉಪಚುನಾವಣೆಯಲ್ಲಿ ಸವದತ್ತಿ ಕ್ಷೇತ್ರದಿಂದ ಹೆಚ್ಚು ಮತಗಳು ಜಾರಕಿಹೊಳಿ ಅವರಿಗೆ ಲಭಿಸಿದ್ದವು. ಈ ಹಿನ್ನೆಲೆಯಲ್ಲಿ ಸತೀಶ್ ಅವರು ಸವದತ್ತಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ವಿಚಾರಗಳು ಹರಿದಾಡುತ್ತಿವೆ. ಲಿಂಗಾಯತರ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ನಾಯಕ ಸಮುದಾಯದ ಸತೀಶ್ ಜಾರಕಿಹೊಳಿ ಅವರಿಗೆ ಲಾಭವಾಗಬಹುದೇ ಎಂಬ ಪ್ರಶ್ನೆಗಳೂ ಎದ್ದಿವೆ.
ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಅಡೆತಡೆಗಳೂ ಇವೆ
ಸವದತ್ತಿ ಕ್ಷೇತ್ರದಲ್ಲಿ ಸತೀಶ್ ಅವರಿಗೆ ಹಲವಾರು ಅಡೆತಡೆಗಳಿವೆ. ಮಾಮನಿ ಕುಟುಂಬದ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಅದೇ ಕುಟುಂಬದವರನ್ನು ನಿಲ್ಲಿಸಿದರೆ, ಸತೀಶ್ ಅವರ ದಾರಿ ಕಷ್ಟವಾಗಬಹುದು. ಕಳೆದ ಬಾರಿ ಆನಂದ ಮಾಮನಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆನಂದ ಛೋಪ್ರಾ ಕೇವಲ ಆರು ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಈ ಬಾರಿ ಅವರೂ ಸಹ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಒಂದು ವೇಳೆ, ಆನಂದ ಛೋಪ್ರಾಗೆ ಕಾಂಗ್ರೆಸ್ನಿಂದ ಟಿಕೆಟ್ ಸಿಗದೇ ಹೋದರೆ, ಮತ್ತೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಗಳಿವೆ. ಇದು ಸತೀಶ್ ಅವರಿಗೆ ಬಹುದೊಡ್ಡ ಅಡೆತಡೆ ಎಂದೇ ಹೇಳಬಹುದು. ಕಳೆದ ಬಾರಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ವಿಶ್ವಾಸ ವೈದ್ಯ ಅವರೂ ಸಹ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದೆಲ್ಲವೂ ಸತೀಶ್ ಅವರಿಗೆ ಸಂಕಷ್ಟಗಳನ್ನು ತಂದೊಡ್ಡುವ ಸಾಧ್ಯತೆಗಳಿವೆ.