ಸೋಮವಾರದ ವಿಧಾನಸಭೆ ಕಲಾಪದ ಮುಖ್ಯಾಂಶಗಳು
ಬೆಂಗಳೂರು, ಫೆ.9 : ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕ 2014ಕ್ಕೆ ವಿಧಾನಸಭೆಯಲ್ಲಿ ಸೋಮವಾರ ಅನುಮೋದನೆ ದೊರಕಿದೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಿಬಿಎಂಪಿ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ಬಗ್ಗೆಯೂ ವಿಧಾನಸಭೆಯಲ್ಲಿ ಚರ್ಚೆ ನಡೆಯಿತು.
ಅರ್ಕಾವತಿ ಪುನಶ್ಚೇತನ ನಡೆಯುತ್ತಿದೆ : ಅರ್ಕಾವತಿ ನದಿ ಪುನಶ್ಚೇತನ ಕಾಮಗಾರಿಯನ್ನು ಈಗಾಗಲೇ ಆರಂಭಿಸಲಾಗಿದ್ದು, ಯೋಜನೆಯಡಿ 948 ಕಿ.ಮೀ. ಕಾಮಗಾರಿಯನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಅರ್ಕಾವತಿ ನದಿಯನ್ನು ಥೇಮ್ಸ್ ನದಿ ಮಾದರಿಯಲ್ಲಿ ಪುನಶ್ಚೇತನಗೊಳಿಸಲು ಜಾಗತಿಕ ಮಟ್ಟದಲ್ಲಿ ಟೆಂಡರ್ ಕರೆಯಲಾಗಿದೆ. ಹಲವಾರು ಮಂದಿ ಟೆಂಡರ್ ಹಾಕಿದ್ದು, ಪರಿಶೀಲನೆ ನಂತರ ಕ್ರಮಕೈಗೊಳ್ಳಲಾಗುವುದು ಎಂದರು. ಮುಂಬರುವ 2016ರ ಮಾರ್ಚ್ವೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ. ['ಈಶ್ವರಪ್ಪ ಆರತಕ್ಷತೆ ಗುಂಗಿನಲ್ಲಿಯೇ ಇದ್ದಾರೆ']

ಸರೋವರ ಸಂರಕ್ಷಣೆಗೆ ಪ್ರಾಧಿಕಾರ : ಸರೋವರ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಕರ್ನಾಟಕ ಸರೋವರ ಸಂರಕ್ಷಣೆ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ತರಲಾಗುತ್ತದೆ ಎಂದು ಅರಣ್ಯ ಸಚಿವ ರಮಾನಾಥ ರೈ ವಿಧಾನಸಭೆಯಲ್ಲಿ ಹೇಳಿದ್ದಾರೆ. ಕೆರೆ ಹಾಗೂ ಸರೋವರಗಳ ರಕ್ಷಣೆಗೆ ಶಾಸನಬದ್ಧ ಕಾಯ್ದೆಯ ಅಗತ್ಯವಿದೆ. ಒತ್ತುವರಿ ಕೆರೆಗಳ ರಕ್ಷಣೆಯೂ ಆಗಬೇಕಿದೆ ಎಂದು ಸಚಿವರು ಹೇಳಿದರು. [ಗುರುವಾರದ ವಿಧಾನಸಭೆ ಕಲಾಪದಲ್ಲಿ ಏನೇನಾಯ್ತು?]
ವಿಶ್ವವಿದ್ಯಾಲಯಗಳ ವಿಧೇಯಕಕ್ಕೆ ಒಪ್ಪಿಗೆ : ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕ 2014ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು ವಿಧಾನಸಭೆಯಲ್ಲಿ ಇಂದು ವಿಧೇಯಕವನ್ನು ಮಂಡಿಸಿದ್ದರು. ಚರ್ಚೆಯ ನಂತರ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ವಿಧೇಯಕವನ್ನು ಮತಕ್ಕೆ ಹಾಕಿದಾಗ ಧ್ವನಿ ಮತದ ಮೂಲಕ ವಿಧೇಯಕ ಅಂಗೀಕಾರಗೊಂಡಿತು.
ಬಿಬಿಎಂಪಿ ಅಕ್ರಮದ ಬಗ್ಗೆ ಚರ್ಚೆ : ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಿಬಿಎಂಪಿ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ಬಗ್ಗೆ ಇಂದು ವಿಧಾನಸಭೆಯಲ್ಲಿ ಚರ್ಚೆ ನಡೆಯಿತು. ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಈ ಕುರಿತು ನಿಲುವಳಿ ಸೂಚನೆ ಮಂಡಿಸಲು ಮುಂದಾದರು.
ಈ ಚರ್ಚಿಸಲು ಅವಕಾಶ ನೀಡಬೇಕೆಂದು ಸ್ಪೀಕರ್ ಅವರಿಗೆ ಮನವಿ ಮಾಡಿದರು. ಸ್ಪೀಕರ್ ಈಗಾಗಲೇ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ಚರ್ಚೆ ನಡೆಸುವುದು ಸೂಕ್ತವಲ್ಲ ಎಂದು ಸಲಹೆ ನೀಡಿದರು.
ವಿದ್ಯಾರ್ಥಿ ವೇತನ ತಾರತಮ್ಯ ನಿವಾರಣೆ : ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯಿಂದ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನದ ತಾರತಮ್ಯವನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ. ಪ್ರಸಕ್ತ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ 1ರಿಂದ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕರಿಗೆ 400, ಬಾಲಕಿಯರಿಗೆ 450, 6 ರಿಂದ 7ನೇ ತರಗತಿ ಓದುತ್ತಿರುವ ಬಾಲಕರಿಗೆ 400, ಬಾಲಕಿಯರಿಗೆ 550 ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.











Click it and Unblock the Notifications