ಬುಧವಾರದ ವಿಧಾನಸಭೆ ಕಲಾಪದಲ್ಲಿ ಏನೇನಾಯ್ತು?
ಬೆಂಗಳೂರು, ಫೆ.11 : ವಿಧಾನ ಮಂಡಲದ ಜಂಟಿ ಅಧಿವೇಶನದ ಎರಡು ದಿನಗಳ ಕಲಾಪ ಬಾಕಿ ಇದೆ. ಆದರೆ, ಸಚಿವರು, ಆಡಳಿತ ಪಕ್ಷದ ಶಾಸಕರು ಹಾಗೂ ಅಧಿಕಾರಿಗಳು ಇಂದು ಕಲಾಪಕ್ಕೆ ಗೈರು ಹಾಜರಾಗಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸಭಾತ್ಯಾಗ ಮಾಡಿದರು.
ಸಣ್ಣ ಹಿಡುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ : 3 ರಿಂದ 5 ಎಕರೆ ಕಂದಾಯ ಜಮೀನನ್ನು ಒತ್ತುವರಿ ಮಾಡಿಕೊಂಡ ಸಣ್ಣ ಹಿಡುವಳಿದಾರರನ್ನು ತೆರವುಗೊಳಿಸುವುದಿಲ್ಲ ಎಂದು ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಸಣ್ಣ ಹಿಡುವಳಿದಾರರನ್ನು ತೆರವುಗೊಳಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. 5 ರಿಂದ 10 ಎಕರೆ ಜಮೀನನ್ನು ತೆರವುಗೊಳಿಸಲಾಗುತ್ತದೆ ಎಂದರು.

ಕಾನೂನು ಬಾಹಿರ ನೇಮಕದ ವಿರುದ್ಧ ತನಿಖೆ : ಅರಣ್ಯ ಇಲಾಖೆಯಲ್ಲಿ ನಿಯಮ ಬಾಹಿರವಾಗಿ ನೇಮಕಗೊಂಡಿರುವವರ ವಿರುದ್ಧ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದೆಂದು ಅರಣ್ಯ ಸಚಿವ ರಮಾನಾಥ್ ರೈ ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ. ಇಲಾಖೆಯಲ್ಲಿ ಕೆಲವು ಅಧಿಕಾರಿಗಳು ನಿಯಮ ಬಾಹಿರವಾಗಿ ನೇಮಕಗೊಂಡಿದ್ದಾರೆ. ತನಿಖೆ ಆರು ತಿಂಗಳಿನಲ್ಲಿ ಪೂರ್ಣಗೊಳ್ಳಲಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು. [ಶಿರಾಡಿ ರಸ್ತೆ ರಿಪೇರಿಗೆ ಇನ್ನೆಷ್ಟು ದಿನ ಬೇಕು?]
ಆದಾಯ ಮಿತಿ ತೆರವುಗೊಳಿಸುವ ಬಗ್ಗೆ ಚಿಂತನೆ : ರಾಷ್ಟ್ರೀಯ ಭದ್ರತಾ ಯೋಜನೆಯಡಿ ವಿಕಲಚೇತನರಿಗೆ ನೀಡುತ್ತಿರುವ ಮಾಸಿಕ ಪಿಂಚಣಿಗೆ ಇರುವ ಆದಾಯದ ಮಿತಿಯನ್ನು ತೆರವುಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಶ್ರೀನಿವಾಸ್ ಪ್ರಸಾದ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಕೋಟಾ ಶ್ರೀನಿವಾಸ ಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗೆ 12 ಸಾವಿರ ಮತ್ತು ನಗರ ಪ್ರದೇಶದವರಿಗೆ 17 ಸಾವಿರ ಆದಾಯದ ಮಿತಿ ನಿಗದಿಗೊಳಿಸಲಾಗಿದೆ ಎಂದರು.
ಗಾಂಧಿ, ಸೇಂದಿ ಚರ್ಚೆ : 'ನಮ್ಮಲ್ಲಿ ಗಾಂಧಿಯನ್ನು ಮಾತನಾಡಿಸೋರು ಇಲ್ಲ, ಸೇಂದಿಯನ್ನು ಮಾತನಾಡಿಸೋರು ಇದಾರೆ. ಕನ್ನಡ ಉಳಿಸಿ ಎಂದು ಹೇಳುತ್ತಲೇ ಕಾನ್ವೆಂಟ್ಗಳನ್ನು ತೆರೆಯಲು ಅನುಮತಿ ನೀಡುತ್ತಾರೆ' ಎಂದು ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಅವರು ಸರ್ಕಾರದ ಕಾರ್ಯವೈಖರಿಯನ್ನು ಸದನದಲ್ಲಿ ಇಂದು ಬಿಚ್ಚಿಟ್ಟರು. ಫ್ರೀಡಂಪಾರ್ಕ್ನಲ್ಲಿ ಮದ್ಯದಂಗಡಿ ಮಾಲೀಕರು ಧರಣಿ ಮಾಡಿದರೆ ಸರ್ಕಾರ ಸ್ಪಂದಿಸುತ್ತದೆ. ಜನರು ದಿನಗಟ್ಟಲೇ ಮುಷ್ಕರ ನಡೆಸಿದರೂ ಅವರ ಸಮಸ್ಯೆ ಬಗೆಹರಿಸುವುದಿಲ್ಲ ಎಂದು ಸರ್ಕಾರ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿದರು.
ಸಿಗಂದೂರಿನಲ್ಲಿ ಭಕ್ತರಿಗೆ ಸೌಲಭ್ಯ : ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಹೆಚ್ಚುವರಿ ಲಾಂಚ್, ಮೂಲಭೂತ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದು ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಬಾಬು ರಾವ್ ಚಿಂಚನಸೂರ ವಿಧಾನ ಪರಿಷತ್ತಿನಲ್ಲಿ ಹೇಳಿದರು. ಡಾ.ಜಯಮಾಲಾ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ರಜೆ, ಹಬ್ಬ ಮುಂತಾದ ದಿನಗಳಲ್ಲಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಮಿಸುತ್ತಾರೆ. ಅವರಿಗೆ ಎಲ್ಲಾ ರೀತಿಯ ಸೌಲಭ್ಯ ಒದಗಿಸಲಾಗುತ್ತದೆ ಎಂದರು.












Click it and Unblock the Notifications