ಸಚಿವ ಖಾದರ್ ಅಧಿಕಾರ ಮೂರು ತಿಂಗಳು ಮಾತ್ರ?
ಬೆಂಗಳೂರು, ಜೂ. 30 : ಇನ್ನು ಮೂರು ತಿಂಗಳಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಅಧಿಕಾರ ಕಳೆದುಕೊಳ್ಳಲಿದ್ದಾರೆಯೇ?. ಮುಂಗಾರು ಅಧಿವೇಶನದ ಆರನೇ ದಿನವಾದ ಸೋಮವಾರ ಈ ಕುರಿತು ಖಾದರ್ ವಿಧಾನ ಪರಿಷತ್ತಿನಲ್ಲಿ ನೀಡಿರುವ ಹೇಳಿಕೆ ಹಲವಾರು ಅಚ್ಚರಿಗಳಿಗೆ ಕಾರಣವಾಗಿದೆ.
ಸೋಮವಾರ ವಿಧಾನಪರಿಷತ್ತಿನಲ್ಲಿ ಸಿದ್ದರಾಜು ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ರಾಜ್ಯದಲ್ಲಿ ಬೈಕ್ ಆಂಬ್ಯುಲೆನ್ಸ್ ಗಳನ್ನು ಪರಿಚಯಿಸುವ ಬಗ್ಗೆ ಮಾಹಿತಿ ನೀಡುತ್ತಿದ್ದರು. ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೈಕ್ ಆಂಬ್ಯುಲೆನ್ಸ್ ಗಳನ್ನು ಪರಿಚಯಿಸಲಾಗುವುದು ಎಂದು ಹೇಳಿದರು.

ಬೈಕ್ ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಮತ್ತು ಪ್ರಥಮ ಚಿಕಿತ್ಸೆ ಸೌಲಭ್ಯವಿರುತ್ತದೆ ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿ ಇರುತ್ತಾರೆ ಎಂದು ಸಚಿವರು ಮಾಹಿತಿ ನೀಡಬೇಕಾದರೆ ಮಧ್ಯ ಪ್ರವೇಶಿಸಿದ ಸಿದ್ಧರಾಜು ಅವರು ಮೂರು ತಿಂಗಳೊಳಗೆ ಈ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. [ಬೆಂಗಳೂರಿಗೆ ಬರಲಿದೆ ಬೈಕ್ ಆ್ಯಂಬುಲೆನ್ಸ್]
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಮೂರು ತಿಂಗಳು ನಾನು ಸಚಿವನಾಗಿರುವ ಬಗ್ಗೆ ಖಾತ್ರಿ ಇಲ್ಲ. ಸಚಿವನಾಗಿ ಮುಂದುವರೆದರೆ, ಖಂಡಿತ ಮೂರು ತಿಂಗಳವೊಳಗೆ ಬೈಕ್ ಆಂಬ್ಯುಲೆನ್ಸ್ ಅನ್ನು ಬೆಂಗಳೂರು ನಗರದಕ್ಕೆ ಪರಿಚಯಿಸುತ್ತೇನೆ ಎಂದು ಹೇಳಿದರು. ಸಚಿವರ ಈ ಹೇಳಿಕೆ ವಿಧಾನಪರಿಷತ್ತಿನ ಸದಸ್ಯರಲ್ಲಿ ಅಚ್ಚರಿ ಉಂಟು ಮಾಡಿತು.
ಮುದ್ರಾಂಕ ಶುಲ್ಕ ಪರಿಷ್ಕರಣೆ : ದಾನ ಹಾಗೂ ವ್ಯವಸ್ಥಾ ಪತ್ರಕ್ಕೆ ಸರ್ಕಾರ ನಿಗದಿ ಪಡಿಸಿರುವ 1000 ರೂ. ಮುದ್ರಾಂಕ ಶುಲ್ಕವನ್ನು ಗ್ರಾಮೀಣ ಭಾಗಕ್ಕೆ ಕಡಿಮೆ ಮಾಡುವುದಾಗಿ ಕಂದಾಯ ಸಚಿವ ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ಈ ಕುರಿತು ಮಾಹಿತಿ ನೀಡಿರುವ ಅವರು, 1999 ರವರೆಗೂ ದಾನ ಹಾಗೂ ವ್ಯವಸ್ಥಾ ಪತ್ರಕ್ಕೆ ಆಸ್ತಿ ಮೌಲ್ಯದ ಶೇ.10ರಷ್ಟು ಮುದ್ರಾಂಕ ಶುಲ್ಕವನ್ನು ವಸೂಲಿ ಮಾಡಲಾಗುತ್ತಿತ್ತು. 2001ರಿಂದ ಇದರಲ್ಲಿ ತಿದ್ದುಪಡಿ ಮಾಡಿ 1000 ರೂ. ನಿಗದಿಪಡಿಸಲಾಗಿದೆ. ಸದ್ಯ ಸರ್ಕಾರ ಇದನ್ನು ಗ್ರಾಮೀಣ ಪ್ರದೇಶದಲ್ಲಿ ಕಡಿಮೆ ಮಾಡಲು ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು. ಕೊರಟಗೆರೆ ಕ್ಷೇತ್ರದ ಜೆಡಿಎಸ್ ಶಾಸಕ ಸುಧಾಕರ ಲಾಲ್ ದಾನ ಹಾಗೂ ವ್ಯವಸ್ಥಾ ಪತ್ರದ ದರ ಇಳಿಕೆ ಮಾಡಿರುವ ಕುರಿತು ಪ್ರಶ್ನಿಸಿದ್ದರು.
ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ : ಮುಂಗಾರು ಕೈಕೊಟ್ಟಿರುವುದರಿಂದಿ ರೈತರಿಗೆ ಅನುಕೂಲವಾಗುವಂತೆ ಬೆಳೆವಿಮೆ ನೋಂದಣಿ ಅವಧಿಯನ್ನು ಜುಲೈ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ವಿಧಾನಸಭೆಯಲ್ಲಿ ಹೇಳಿದ್ದಾರೆ. ಕಡೂರು ಕ್ಷೇತ್ರದ ಜೆಡಿಎಸ್ ಶಾಸಕ ವೈ.ಎಸ್.ವಿ.ದತ್ತಾ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ರೈತರಿಗೆ ಅನುಕೂಲವಾಗುವಂತೆ ಒಂದು ತಿಂಗಳ ಬೆಳೆ ವಿಮೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದರು.
ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಒಂದು ಕೆರೆ ಅಭಿವೃದ್ಧಿ : ಸಣ್ಣ ನೀರಾವರಿ ಇಲಾಖೆಯಿಂದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕೆರೆಗಳನ್ನು ಅಭಿವೃದ್ಧಿ ಮಾಡುವುದಾಗಿ ಸಣ್ಣ ನೀರಾವರಿ ಸಚಿವ ಶಿವರಾಜ್ ತಂಗಡಗಿ ವಿಧಾನಸಭೆಯಲ್ಲಿ ಹೇಳಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೊಂದು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿ ನೀರು ತುಂಬುವಂತೆ ಮಾಡಲು ಒಂದು ಕೋಟಿ ರೂ.ಗೂ ಹೆಚ್ಚು ಅನುದಾನ ಖರ್ಚು ಮಾಡುತ್ತಿರುವುದಾಗಿ ಸಚಿವರು ಮಾಹಿತಿ ನೀಡಿದರು.












Click it and Unblock the Notifications