ಅರ್ಕಾವತಿ ಅಕ್ರಮದ ಬಗ್ಗೆ ನ್ಯಾಯಾಂಗ ತನಿಖೆ
ಬೆಂಗಳೂರು, ಜು. 28 : ಸೋಮವಾರದ ವಿಧಾನಸಭೆ ಕಲಾಪ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣದ ಗದ್ದಲದ ನಡುವೆಯೇ ಆರಂಭಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಕಾವತಿ ಬಡಾವಣೆಯ ಭೂ ಸ್ವಾಧೀನದ ಕುರಿತು ನ್ಯಾಯಾಂಗ ತನಿಖೆ ನಡೆಸುವುದಾಗಿ ಘೋಷಿಸಿದ್ದಾರೆ. ಅದರೆ, ಬಿಜೆಪಿ ಸದಸ್ಯರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರ ವೈಯಕ್ತಿಕ ಪ್ರತಿಷ್ಠೆಯ ರೂಪ ತಾಳಿರುವ ಅರ್ಕಾವತಿ ಬಡಾವಣೆ ಭೂ ಸ್ವಾಧೀನ ವಿವಾದ ಶನಿವಾರದ ಕಲಾಪವನ್ನೇ ಬಲಿತೆಗೆದುಕೊಂಡಿತ್ತು. ಸಿಬಿಐ ತನಿಖೆಗೆ ಬಿಜೆಪಿ ಪಟ್ಟು ಹಿಡಿದಿತ್ತು. ಆದರೆ, ನ್ಯಾಯಾಂಗ, ಸದನ ಸಮಿತಿ ಹಾಗೂ ಸಿಒಡಿ ಈ ಮೂವರ ಪೈಕಿ ಒಂದು ಆಯ್ಕೆ ಮಾಡಿಕೊಳ್ಳಿ ಎಂದು ಸರ್ಕಾರ ಆಯ್ಕೆ ನೀಡಿತ್ತು.

ಸೋಮವಾರದ ಕಲಾಪ ಆರಂಭವಾಗುತ್ತಿದ್ದಂತೆ ಪುನಃ ಈ ವಿಚಾರವನ್ನು ಪ್ರಸ್ತಾಪಿಸಿದ ಪ್ರತಿಪಕ್ಷ ಬಿಜೆಪಿ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಆದರೆ, ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿಗಳು ನ್ಯಾಯಾಂಗ ತನಿಖೆ ನಡೆಸಲು ಸರ್ಕಾರ ನಿರ್ಧರಿಸಿದೆ. ಇದರಿಂದ ನಿಮ್ಮ ಲೂಟಿ ಬಹಿರಂಗವಾಗಲಿದೆ ಎಂದು ಹೇಳಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. [1 ಗುಂಟೆ ಡಿನೋಟಿಫೈ ಮಾಡಿದ್ದಲ್ಲಿ ರಾಜಕೀಯದಿಂದ ನಿವೃತ್ತಿ]
ಏನಿದು ಅರ್ಕಾವತಿ ವಿವಾದ : ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು, ಅರ್ಕಾವತಿ ಬಡಾವಣೆಯ 541 ಎಕರೆ ಭೂಮಿಯನ್ನು ಅಕ್ರಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನೋಟಿಫಿಕೇಶನ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹೈಕಮಾಂಡ್ಗೆ ಫಂಡ್ ನೀಡಲು ಸಿದ್ದರಾಮಯ್ಯ ಈ ಅಕ್ರಮ ಎಸಗಿದ್ದಾರೆ, ಈ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.
ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಈ ವಿವಾದದ ಕುರಿತು ವಿಧಾನಸಭೆಯಲ್ಲಿ ಮತ್ತು ಹೊರಗೆ ನಾಯಕರ ಮಧ್ಯೆ ಬಿರುಸಿನ ಚರ್ಚೆ ನಡೆಯುತ್ತಿದೆ. ಸದ್ಯ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿರುವುದು ಪ್ರತಿಪಕ್ಷ ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ.












Click it and Unblock the Notifications