ನಾಮಪತ್ರ ವಾಪಸ್ ಪಡೆಯಲು ಸಮಯ ಅಂತ್ಯ: ವಾಪಸ್ ಪಡೆದವರು ಯಾರು? ಬಂಡಾಯವೆದ್ದು ಉಳಿದವರು ಯಾರು?
ಕರ್ನಾಟಕ ವಿಧಾನಸಭೆ ಚುನಾವಣೆ 2023ರ ನಾಮಪತ್ರ ವಾಪಸ್ ಪಡೆಯಲು ಸಮಯ ಅಂತ್ಯವಾಗಿದ್ದು, ಕೊನೆಯ ದಿನವಾದ ಏಪ್ರಿಲ್ 24ರಂದು ಹಲವು ಪ್ರಮುಖರು ನಾಪಪತ್ರ ವಾಪಸ್ ಪಡೆದಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ನಲ್ಲಿ ಟಿಕೆಟ್ ಸಿಗದೆ ಬಂಡಾಯವೆದ್ದಿದ್ದ ಹಲವರು ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ 224 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ನಿಂದ 223 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) 212 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಜೆಡಿಎಸ್ನಿಂದ 211 ಸೇರಿ ವಿವಿಧ ಪಕ್ಷಗಳು, ಪಕ್ಷೇತರರು ಎಲ್ಲರೂ ಒಟ್ಟಾರೆಯಾಗಿ 3130 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.

ಬಂಡಾಯ ಅಭ್ಯರ್ಥಿಗಳ ಜೊತೆ ಮಾತನಾಡಿದ ಪಕ್ಷದ ನಾಯಕರು ಹಲವು ಕ್ಷೇತ್ರಗಳಲ್ಲಿ ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕುಮುಟಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಟಿಕೆಟ್ ಸಿಗದೆ ಬಂಡಾಯವೆದ್ದು ನಾಮಪತ್ರ ಸಲ್ಲಿಸಿದ್ದ ಮಾಜಿ ಶಾಸಕಿ ಶಾರದಾ ಶೆಟ್ಟಿಯವರ ಮನವೊಲಿಸುವಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಡಿಕೆಶಿ ಸಂಧಾನಕ್ಕೆ ಒಪ್ಪಿದ ಶಾರದಾ ಶೆಟ್ಟಿ, ನಾಮಪತ್ರ ವಾಪಸ್ ಪಡೆದಿರುವುದಲ್ಲದೆ ರಾಜಕೀಯದಿಂದಲೇ ನಿವೃತ್ತಿ ಘೋಷಿಸಿದ್ದಾರೆ. ತಾನು ಯಾರಿಗೂ ಬೆಂಬಲ ನೀಡಲ್ಲ ಎಂದು ಕೂಡ ಅವರು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಗಳು
ಬೆಂಗಳೂರಿನ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಂಡಾಯ ಶಮನವಾಗದೆ ಹಾಗೆ ಉಳಿದುಕೊಂಡಿದೆ. ಪುಲಕೇಶಿ ನಗರದಲ್ಲಿ ಕಾಂಗ್ರೆಸ್ನಿಂದ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಅಖಂಡ ಶ್ರೀನಿವಾಸಮೂರ್ತಿ ಬಿಎಸ್ಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಗಾಂಧಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕೃಷ್ಣಯ್ಯ ಶೆಟ್ಟಿಗೆ ಟಿಕೆಟ್ ಕೈತಪ್ಪಿದ ನಂತರ ಕೆಂಡಾಮಂಡಲವಾಗಿದ್ದಾರೆ. ಯಾವುದೇ ಸಂಧಾನಕ್ಕೂ ಜಗ್ಗದ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ಚಿಕ್ಕಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಗಂಗಾಂಬಿಕೆ ಮಲ್ಲಿಕಾರ್ಜುನ್ ನಾಮಪತ್ರ ವಾಪಸ್ ಪಡೆದಿದ್ದಾರೆ. ಮಾಜಿ ಮೇಯರ್ ಗಂಗಾಂಬಿಕೆ ಬದಲು ಆರ್.ವಿ. ದೇವರಾಜ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಚಿಕ್ಕಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೆಜಿಎಫ್ ಬಾಬು ಮತ್ತು ಅವರ ಪತ್ನಿ ಇಬ್ಬರೂ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದರು, ಈಗ ಬಾಬು ಪತ್ನಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದು, ಕೆಜಿಎಫ್ ಬಾಬು ಕಣದಲ್ಲಿ ಉಳಿದುಕೊಂಡಿದ್ದಾರೆ.
ಬಿಜೆಪಿ ಬಂಡಾಯ ಅಭ್ಯರ್ಥಿಗಳು
ಗಾಂಧಿನಗರದಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ನಾಮಪತ್ರ ಹಿಂಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿಗೆ ಬಂಡಾಯ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಶಾಕ್ ನೀಡಿದ್ದಾರೆ. ಯಾವ ಮನವೊಲಿಕೆಗೂ ಬಗ್ಗದ ಅವರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪಗೌಡ ವಿರುದ್ಧ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ. ಯಡಿಯೂರಪ್ಪ ಕರೆ ಮಾಡಿ ಮನವಿ ಮಾಡಿದರೂ ಅರುಣ್ ಕುಮಾರ್ ತಮ್ಮ ನಿರ್ಧಾರವನ್ನು ಬದಲಿಸಿಲ್ಲ.
ಚನ್ನಗಿರಿಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದೆ ಬಂಡಾಯವೆದ್ದಿದ್ದ ಮಾಡಾಳ್ ಮಲ್ಲಿಕಾರ್ಜುನ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಕಣದಲ್ಲಿ ಉಳಿದುಕೊಂಡಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಟಿಕೆಟ್ ನಿರಾಕರಿಸುವುದು ಗೊತ್ತಿತ್ತು, ಆದರೆ ಮಗ ಮಾಡಾಳ್ ಮಲ್ಲಿಕಾರ್ಜುನ್ ಟಿಕೆಟ್ ಪಡೆಯುವಲ್ಲಿ ಪ್ರಯತ್ನಿಸಿ ವಿಫಲವಾದ ಬಳಿಕ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದಾರೆ. ಬಿಜೆಪಿ ವರಿಷ್ಠರ ಮನೊವೊಲಿಕೆ ಪ್ರಯತ್ನ ನೀಡಿದ್ದು ಟಿಕೆಟ್ ಕೈತಪ್ಪಿದ್ದ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಸೋಮವಾರ ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ.
ಬಿಜೆಪಿಯಿಂದ ಟಿಕೆಟ್ ಸಿಗದೆ ಬಂಡಾಯವೆದ್ದು ನಾಮಪತ್ರ ಸಲ್ಲಿಕೆ ಮಾಡಿದ್ದ ಶಿರಹಟ್ಟಿ ಕ್ಷೇತ್ರದ ಹಾಲಿ ಶಾಸಕ ರಾಮಣ್ಣ ಲಮಾಣಿ ಕೂಡ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ಬಿಎಸ್ವೈ ದೂರವಾಣಿ ಮೂಲಕ ಲಮಾಣಿ ಜೊತೆ ಚರ್ಚೆ ಮಾಡಿದ್ದು ಫಲ ನೀಡಿದೆ, ಭೀಮಸಿಂಗ್ ರಾಠೋಡ, ಗುರುನಾಥ ದಾನಪ್ಪನವರ ಕೂಡ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ.
ಉಳ್ಳಾಲದಲ್ಲಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ವಾಪಸ್ ಪಡೆದು ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿ ಬಲವಂತದಿಂದ ಸಹಿ ಹಾಕಿಸಿದ್ದಾರೆ, ಒತ್ತಡಕ್ಕೆ ಮಣಿದು ನಾಮಪತ್ರ ವಾಪಸ್ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.












Click it and Unblock the Notifications