Karnataka Bandh: ವಿದ್ಯುತ್ ದರ ವಿರೋಧಿಸಿ ಇಂದು ಕರ್ನಾಟಕ ಬಂದ್; ವ್ಯಾಪಾರ ಮತ್ತು ಉದ್ಯಮ ಸಂಸ್ಥೆಗಳಿಗೆ ಮುಷ್ಕರ
ಬೆಂಗಳೂರು, ಜೂನ್ 22: ರಾಜ್ಯದಲ್ಲಿ ಭಾರೀ ಪ್ರಮಾಣದ ವಿದ್ಯುತ್ ದರ ಏರಿಕೆ ಖಂಡಿಸಿ ಹುಬ್ಬಳ್ಳಿಯ ರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಗುರುವಾರ ರಾಜ್ಯ ಬಂದ್ಗೆ ಕರೆ ನೀಡಿದ್ದು, ಧಾರವಾಡ ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ವಹಿವಾಟು ಭಾಗಶಃ ಸ್ತಬ್ಧಗೊಳ್ಳುವ ಸಾಧ್ಯತೆಯಿದೆ.
ಬೆಳಗಾವಿ ವಾಣಿಜ್ಯೋದ್ಯಮ ಸಂಸ್ಥೆ, ಕಲ್ಯಾಣ ಕರ್ನಾಟಕ ವಾಣಿಜ್ಯ ಉದ್ಯಮ ಸೇರಿದಂತೆ ಉತ್ತರ ಕರ್ನಾಟಕ ಭಾಗದ 25 ವಾಣಿಜ್ಯೋದ್ಯಮ ಸಂಸ್ಥೆಗಳು ಕರ್ನಾಟಕ ಬಂದ್ಗೆ ಬೆಂಬಲ ವ್ಯಕ್ತಪಡಿಸಿವೆ.

ಕರ್ನಾಟಕ ಬಂದ್ ನಲ್ಲಿ ಭಾಗವಹಿಸದಿರಲು ಎಫ್ಕೆಸಿಸಿಐ ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದ ವಿವಿಧ ವಾಣಿಜ್ಯ ಸಂಘಟನೆಗಳು ನಿರ್ಧರಿಸಿವೆ. ಅಲ್ಲದೆ, ಎಫ್ಕೆಸಿಸಿಐ ತನ್ನ ಜಿಲ್ಲಾ ಘಟಕಗಳಿಗೂ ಬಂದ್ನಲ್ಲಿ ಭಾಗವಹಿಸದಂತೆ ಮನವಿ ಮಾಡಿದೆ.
ಇನ್ನೂ ಹಳೆ ಮೈಸೂರು ಭಾಗದ ಯಾವುದೇ ಸಂಘಟನೆಗಳು ಬಂದ್ಗೆ ಬೆಂಬಲವನ್ನ ಸೂಚಿಸಿಲ್ಲ. ದರ ಏರಿಕೆಯಿಂದ ಆಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.23ರಂದು ಸಭೆ ಕರೆದಿರುವ ಹಿನ್ನೆಲೆಯಲ್ಲಿ ಬಂದ್ನಿಂದ ದೂರು ಉಳಿಯಲು ಇವು ತೀರ್ಮಾನಿಸಿವೆ.
ರಾಜ್ಯಾದ್ಯಂತ ಜಿಲ್ಲಾ ಚೇಂಬರ್ಗಳು ಮತ್ತು ಇತರ ಉದ್ಯಮ ಸಂಘಗಳು ಆಂದೋಲನದಲ್ಲಿ ಭಾಗಿಯಾಗಲಿದೆ. ಆದರೆ, ಇಂದಿನ ಪ್ರತಿಭಟನೆಯ ನಡುವೆ ಅಗತ್ಯ ಸೇವೆಗಳು ಮತ್ತು ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವ ನಿರೀಕ್ಷೆಯಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಗಾರಿಕೋದ್ಯಮಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರಕ್ಕೆ ಬರುವುದಾಗಿ ಈ ಹಿಂದೆ ಹೇಳಿದ್ದರು. ಮುಂದಿನ ತಿಂಗಳಿನಿಂದ ವಿದ್ಯುತ್ ಬಿಲ್ ಹೆಚ್ಚಳವಾಗುವ ಆತಂಕವನ್ನ ಉದ್ಯಮಿಗಳು ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಬಂದ್ ಕರೆಗೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಬೆಂಬಲ ನೀಡಿದೆ. ಕಲಬುರಗಿಯಲ್ಲಿ ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ಎಂ.ಬಿ.ಸಜ್ಜನ್ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಪಕ್ಷದ ಜಿಲ್ಲಾ ಮತ್ತು ತಾಲೂಕು ಘಟಕಗಳು ಬಂದ್ ಕರೆಗೆ ಬೆಂಬಲವನ್ನ ನೀಡಿವೆ ಎಂದು ತಿಳಿದು ಬಂದಿದೆ.
ಬೆಳಗಾವಿ ಕೈಗಾರಿಕಾ ಸಂಸ್ಥೆ ಬೆಳಿಗ್ಗೆ 10 ಗಂಟೆಗೆ ರ್ಯಾಲಿ
ಬೆಳಗಾವಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ವತಿಯಿಂದ ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಧರ್ಮವೀರ ಸಂಭಾಜಿ ಚೌಕ್ನಿಂದ ಡಿಸಿ ಕಚೇರಿವರೆಗೆ ರ್ಯಾಲಿಯನ್ನು ಆಯೋಜಿಸಲಾಗಿದೆ. ಬೆಳಗಾವಿಯ ಎಲ್ಲಾ ಸಂಘಗಳು ಬಂದ್ಗೆ ಬೆಂಬಲ ನೀಡಿವೆ. ಇನ್ನೂ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಇಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಇಂದು ತಮ್ಮ ಸಂಸ್ಥೆಗಳನ್ನು ಮುಚ್ಚುವ ಮೂಲಕ ಆಂದೋಲನದಲ್ಲಿ ಪಾಲ್ಗೊಳ್ಳುವಂತೆ ಅವರು ಎಲ್ಲಾ ವ್ಯಾಪಾರ ಮತ್ತು ಉದ್ಯಮ ಸಂಸ್ಥೆಗಳನ್ನು ಕೇಳಿಕೊಂಡಿದ್ದಾರೆ.












Click it and Unblock the Notifications