ಮತ್ತೆ ಆ್ಯಕ್ಟಿವ್‌ ಆದ ಯಡಿಯೂರಪ್ಪ: ಲೋಕಸಭೆ ಚುನಾವಣೆಯಲ್ಲಿ ಲಿಂಗಾಯತರಿಗೆ ಗಾಳ- ಬಿಜೆಪಿಗೆ ಅನಿವಾರ್ಯವಾದರೇ 'ರಾಜಾಹುಲಿ'?

ಬೆಂಗಳೂರು, ಜೂನ್‌ 23: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. 2024 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ನೆಲಕಚ್ಚದಂತೆ ನೋಡಿಕೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಕೇಸರಿ ಪಕ್ಷವು ಮತ್ತೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಆಶ್ರಯಿಸಲು ನಿರ್ಧರಿಸಿದಂತಿದೆ. ಬಿಎಸ್‌ವೈ ಮೂಲಕ ಲಿಂಗಾಯತ ವೋಟುಗಳನ್ನು ತನ್ನದಾಗಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ಹೇಳಲಾಗುತ್ತಿದೆ.

ಆ್ಯಕ್ಟಿವ್‌ ಆದ ಯಡಿಯೂರಪ್ಪ

ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಯಡಿಯೂರಪ್ಪನವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಈಗ ಅನ್ನಭಾಗ್ಯದ ವಿಚಾರದಲ್ಲಿ ಬಹಿರಂಗ ಹೇಳಿಕೆ ನೀಡಿದ್ದಾರೆ. ತಮ್ಮ ನೇತೃತ್ವದಲ್ಲಿ ವಿಧಾನಸಭೆಯ ಹೊರಗೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಗುರುವಾರ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

Karnataka BJP Backs BS Yediyurappa

'ಕಾಂಗ್ರೆಸ್ ತನ್ನ ಭರವಸೆಗಳನ್ನು ಜಾರಿಗೊಳಿಸಲು ವಿಫಲವಾದರೆ, ಅಧಿಕಾರದಲ್ಲಿ ಉಳಿಯಲು ಅವರಿಗೆ ನೈತಿಕ ಹಕ್ಕುಗಳಿಲ್ಲ. ರಾಜ್ಯಪಾಲರ ಭಾಷಣದ ನಂತರ ಜುಲೈ 4 ರಂದು ಮಹಾತ್ಮ ಗಾಂಧಿ ಪ್ರತಿಮೆ ಎದುರು ಎಲ್ಲಾ 10 ದಿನಗಳ ಕಾಲ ಪ್ರತಿಭಟನೆ ನಡೆಸುತ್ತೇವೆ. ಕಾಂಗ್ರೆಸ್ ಸುಳ್ಳು ಭರವಸೆ ನೀಡಿ ಜನರನ್ನು ವಂಚಿಸಿದೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತೇವೆ' ಎಂದು ಯಡಿಯೂರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ಗುರುವಾರ ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ನಡೆದ ಪಕ್ಷದ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಬಳಿಕ ಈ ವಿಚಾರಗಳನ್ನು ಹೇಳಿದ್ದಾರೆ. ಇದರ ಮೂಲಕ ಯಡಿಯೂರಪ್ಪ ಮತ್ತೆ ಆ್ಯಕ್ಟಿವ್‌ ಆಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

Karnataka BJP Backs BS Yediyurappa

ವಿಪಕ್ಷ ನಾಯಕನನ್ನು ನೇಮಿಸದ ಬಿಜೆಪಿ

ಚುನಾವಣಾ ಫಲಿತಾಂಶಗಳು ಪ್ರಕಟವಾಗಿ ಒಂದು ತಿಂಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಆದರೆ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಕಾರ್ಯನಿರ್ವಹಿಸುವ ಪಕ್ಷದ ಶಾಸಕಾಂಗ ಪಕ್ಷದ ನಾಯಕನನ್ನು ಬಿಜೆಪಿ ಇನ್ನೂ ಹೆಸರಿಸಿಲ್ಲ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವ ಆರ್.ಅಶೋಕ, ಸುನೀಲ್ ಕುಮಾರ್ ಈ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಬಿಜೆಪಿ ಹೈಕಮಾಂಡ್‌ಗೆ ಯಡಿಯೂರಪ್ಪ ಸಲಹೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

Karnataka BJP Backs BS Yediyurappa

16ನೇ ವಿಧಾನಸಭೆಯ ಮೊದಲ ಅಧಿವೇಶನ ಜುಲೈ 3ರಂದು ಆರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 7ರಂದು ಬಜೆಟ್ ಮಂಡಿಸುವ ಸಾಧ್ಯತೆ ಇದೆ.

ಕ್ಷೀಣಿಸದ ಯಡಿಯೂರಪ್ಪ ಪ್ರಭಾವ

ಲಿಂಗಾಯತ ಪ್ರಬಲ ನಾಯಕರನ್ನು ಬಿಜೆಪಿ ಸರಿಯಾಗಿ ನಡೆಸಿಕೊಂಡಿಲ್ಲವೆಂಬುದು ಪಕ್ಷದ ಸೋಲಿಗೆ ಕಾರಣವೆಂದು ಹೇಳಲಾಗುತ್ತಿದೆ. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. 2021 ರ ಜುಲೈನಲ್ಲಿ ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸಲಾಯಿತು. ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್‌ ನಿರಾಕರಿಸಲಾಯಿತು. ಇದು ಲಿಂಗಾಯತರನ್ನು ಕೆರಳಿಸುವಂತೆ ಮಾಡಿತು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

Karnataka BJP Backs BS Yediyurappa

ಕಿತ್ತೂರು-ಕರ್ನಾಟಕ ಮತ್ತು ಮಧ್ಯ ಕರ್ನಾಟಕ ಭಾಗದಲ್ಲಿ ಬಿಜೆಪಿ ವಿರುದ್ಧ ಲಿಂಗಾಯತರು ಮತ ಚಲಾಯಿಸಿದ್ದು ಸೋಲಿಗೆ ಕಾರಣವಾಗಿದೆ ಎಂಬುದು ಫಲಿತಾಂಶದಿಂದ ಗೊತ್ತಾಗಿದೆ. ಲೋಕಸಭೆ ಚುನಾವಣೆ ದೃ‍ಷ್ಟಿಯಲ್ಲಿ ನೋಡುವುದಾದರೆ, ಕರ್ನಾಟಕ ಬಿಜೆಪಿಗೆ ನಿರ್ಣಾಯಕ ರಾಜ್ಯವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಉತ್ತಮ ಸಾಧನೆ ಮಾಡಬೇಕಿದೆ. ಈ ಉದ್ದೇಶದಿಂದ ಬಿಜೆಪಿ ಯಡಿಯೂರಪ್ಪ ಅವರನ್ನು ಮತ್ತೆ ಮುಂಚೂಣಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ. ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಈಗಾಗಲೇ ಏಳು ತಂಡಗಳನ್ನು ರಚಿಸಿದೆ. ಮುಂದಿನ ವರ್ಷ ಏಪ್ರಿಲ್-ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ತಯಾರಿ ನಡೆಸಲು ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+