ಬಿಜೆಪಿಯಿಂದ 'ಬೆಂಗಳೂರು ರಕ್ಷಿಸಿ' ಪಾದಯಾತ್ರೆ
ಬೆಂಗಳೂರು, ಫೆಬ್ರವರಿ 27 : ಕರ್ನಾಟಕ ಬಿಜೆಪಿ ಚುನಾವಣೆ ಹೊಸ್ತಿಲಲ್ಲಿ ಬೆಂಗಳೂರು ನಗರದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ. 'ಬೆಂಗಳೂರು ರಕ್ಷಿಸಿ' ಎಂಬ ಹೆಸರಿನಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಅವರು ಈ ಕುರಿತು ಮಾಹಿತಿ ನೀಡಿದರು. 'ಮಾರ್ಚ್ 2ರಿಂದ 15ರ ತನಕ ಬೆಂಗಳೂರು ರಕ್ಷಿಸಿ ಪಾದಯಾತ್ರೆ ನಡೆಸಲಾಗುತ್ತದೆ' ಎಂದು ಹೇಳಿದರು.
'ಒಟ್ಟು 10 ಸಮಸ್ಯೆಗಳನ್ನು ಮುಂದಿಟ್ಟುಕೊಂಡು ನಗರದ 28 ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲಾಗುತ್ತದೆ. 2 ಸಾವಿರ ಜನರ ಜೊತೆ ಪಾದಯಾತ್ರೆ ಮಾಡಲಾಗುತ್ತದೆ' ಎಂದು ಅಶೋಕ್ ವಿವರಣೆ ನೀಡಿದರು.

'ಬೆಂಗಳೂರು ನಗರದಲ್ಲಿ ಕುಸಿಯುತ್ತಿರುವ ಮೂಲಭೂತ ಸೌಕರ್ಯ, ನಲಪಾಡ್ ಪ್ರಕರಣ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲಾಗುತ್ತದೆ' ಎಂದು ಹೇಳಿದರು.
ಮಾರ್ಚ್ 2ರಂದು ಆರಂಭವಾಗುವ ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಅನಂತ ಕುಮಾರ್, ಡಿ.ವಿ.ಸದಾನಂದ ಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಕೆ.ಮುರಳೀಧರರಾವ್ ಸೇರಿದಂತೆ ಇತರ ನಾಯಕರು ಪಾಲ್ಗೊಳ್ಳಲಿದ್ದಾರೆ.












Click it and Unblock the Notifications