ಡಿಕೆ ರವಿ ಸಾವು : ಸಿದ್ದರಾಮಯ್ಯಗೆ ಬಿಜೆಪಿ ಕೊನೆಯ ಗಡುವು
ಬೆಂಗಳೂರು, ಮಾ. 22 : ದಕ್ಷ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಅಸಹಜ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಸೋಮವಾರ ಸಿಬಿಐಗೆ ವಹಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಆನಂದ್ರಾವ್ ಸರ್ಕಲ್ ಸಮೀಪದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ನಾಯಕರು ಭಾನುವಾರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿರುವ ನಾಯಕರು ಡಿಕೆ ರವಿ ಸಾವಿನ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸುತ್ತಿದ್ದಾರೆ. [ಡಿಕೆ ರವಿ ಪ್ರಕರಣ : ಎಚ್ಡಿಕೆ ಆಡಿಯೋ ಬಾಂಬ್]

ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸರ್ಕಾರ ಡಿಕೆ ರವಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ರಾಜ್ಯದ ಜನರಿಗೆ ಮತ್ತು ವಿರೋಧ ಪಕ್ಷಗಳಿಗೆ ಸಿಐಡಿ ತನಿಖೆಯಲ್ಲಿ ವಿಶ್ವಾಸವಿಲ್ಲ ಎಂದರು. [ಡಿಕೆ ರವಿ ಪ್ರಕರಣ : ಮಾ.28ರಂದು ಕರ್ನಾಟಕ ಬಂದ್]
ರಾಜ್ಯಾದ್ಯಂತ ಸಿಬಿಐ ತನಿಖೆಗೆ ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಆದರೂ ಸರ್ಕಾರ ಮೌನವಾಗಿದೆ. ಸೋಮವಾರ ವಿಧಾನಸಭೆ ಕಲಾಪದಲ್ಲಿ ಸಿಬಿಐಗೆ ವಹಿಸುವ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಸುರೇಶ್ ಕುಮಾರ್, ಆರ್.ಅಶೋಕ್, ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಸಂಸದರಾದ ಬಿ.ಶ್ರೀರಾಮುಲು, ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ, ಬಿಬಿಎಂಪಿ ಸದಸ್ಯರು ಸೇರಿದಂತೆ ಹಲವು ಬಿಜೆಪಿ ನಾಯಕರು ಪಾಲ್ಗೊಂಡಿದ್ದಾರೆ.












Click it and Unblock the Notifications