BJP: ಜಗದೀಶ್ ಶೆಟ್ಟರ್ ಆಗಮನದ ಬೆನ್ನಲ್ಲೇ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆ ಫಿಕ್ಸ್
ಬೆಂಗಳೂರು, ಜನವರಿ 25: ಬಿ.ವೈ.ವಿಜಯೇಂದ್ರ ಅವರು ರಾಜ್ಯ ಅಧ್ಯಕ್ಷರಾದ ಬಳಿಕ ಬಿಜೆಪಿಯ ಪ್ರಥಮ ರಾಜ್ಯ ಕಾರ್ಯಕಾರಿಣಿ ಸಭೆಯು ಇದೇ 27ರಂದು ಬೆಂಗಳೂರಿನ ಗಾಯತ್ರಿ ವಿಹಾರ, ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತಿಳಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಮೂಲೆಮೂಲೆಗಳಿಂದ ಈ ಕಾರ್ಯಕಾರಿಣಿಯ ಅಪೇಕ್ಷಿತರು ಬರಲಿದ್ದಾರೆ. ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷದ ಚಟುವಟಿಕೆ ಜೊತೆಗೆ ನಮ್ಮ ಮುಂದಿನ ಕಾರ್ಯಯೋಜನೆ ಕುರಿತು ಚರ್ಚೆ ನಡೆಯಲಿದೆ ಎಂದರು.


ಶಾಶಕರು, ಸಂಸದರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು ಸೇರಿದಂತೆ 900ಕ್ಕೂ ಹೆಚ್ಚು ಅಪೇಕ್ಷಿತರು ಈ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ. ಆ ನಿಟ್ಟಿನಲ್ಲಿ ಬಿಜೆಪಿ ರಾಜ್ಯ ಘಟಕವು 10 ದಿನಗಳಿಂದ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದೆ.
ಬೆಂಗಳೂರಿನ 3 ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷರಾದ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ, ಶಾಸಕ ಕೆ.ಸಿ. ರಾಮಮೂರ್ತಿ, ಮಾಜಿ ಉಪ ಮೇಯರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪದಾಧಿಕಾರಿಗಳು, ಶಾಸಕರ ಮಾರ್ಗದರ್ಶನದಲ್ಲಿ ಸಭೆಯ ಯಶಸ್ಸಿಗೆ ಪೂರ್ವತಯಾರಿ ನಡೆದಿದೆ ಎಂದು ತಿಳಿಸಿದರು.
25ಕ್ಕೂ ಹೆಚ್ಚು ವೃತ್ತಗಳಲ್ಲಿ ಪ್ರಮುಖರಿಗೆ ಸ್ವಾಗತ ಕೋರುತ್ತಿದ್ದಾರೆ. ಅಪೇಕ್ಷಿತರಿಗೆ ವ್ಯವಸ್ಥಿತವಾಗಿ ವಾಹನ ವ್ಯವಸ್ಥೆ, ಕೊಠಡಿ ವ್ಯವಸ್ಥೆ ಸೇರಿ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಸಭೆಯಲ್ಲಿ ರಾಜ್ಯ ಸರಕಾರದ ಧೋರಣೆ, ಹಿಂದೂ ವಿರೋಧಿ ನೀತಿ, ಅಭಿವೃದ್ಧಿ ಕುಂಠಿತವಾದುದನ್ನು ಚರ್ಚೆ ಮಾಡಲಾಗುವುದು ಎಂದರು.
ಕೇಂದ್ರದ ಜನಪರ ಯೋಜನೆಗಳ ಚರ್ಚೆ ನಡೆಯಲಿದೆ. ಅಯೋಧ್ಯೆಯ ಪ್ರಭು ಶ್ರೀರಾಮಚಂದ್ರನ ಕುರಿತ ಪ್ರದರ್ಶಿನಿ ವ್ಯವಸ್ಥೆಯನ್ನೂ ಮಾಡಲಾಗಿದೆ. ಡಿಜಿಟಲ್ ಎಂಟ್ರಿ ಮೂಲಕ ನೋಂದಣಿ ನಡೆಯಲಿದೆ. ಅಪೇಕ್ಷಿತರಿಗೆ ಹೊಸ ಅನುಭವ ಆಗುವ ಮಾದರಿಯಲ್ಲಿ ಅಚ್ಚುಕಟ್ಟಾಗಿ ಈ ಕಾರ್ಯಕಾರಿಣಿ ನಡೆಯಲಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡ ಸಂಘಟನಾತ್ಮಕ ಸಭೆ ಇದಾಗಲಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯತ್ ಮಟ್ಟದಿಂದ ಆರಂಭಿಸಿ ವಿಧಾನಸೌಧದಲ್ಲಿ ಆಡಳಿತ ನಡೆಸಿರುವ ಅನೇಕ ಹಿರಿಯರಿಗೆ ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನಿ ಆಗಬೇಕೆಂಬ ಆಶಯವಿದೆ. ಅಂಥವರು ಸಹಸ್ರಾರು ಸಂಖ್ಯೆಯಲ್ಲಿ ಇದ್ದಾರೆ. ಆ ನಿಟ್ಟಿನಲ್ಲಿ ಬಿಜೆಪಿಗೆ ಬರುವವರಿಗೆ ಪಕ್ಷವು ಮುಕ್ತ ಆಹ್ವಾನ ನೀಡಿದೆ. ಅನೇಕರು ಈಗಾಗಲೇ ಪಕ್ಷ ಸೇರಿದ್ದಾರೆ. ಕಾಂಗ್ರೆಸ್ನ ಹಿಂದೂ ವಿರೋಧಿ ನೀತಿ ಖಂಡಿಸಿ ಸ್ಥಳೀಯವಾಗಿ, ಗ್ರಾಮ, ನಗರ ಮಟ್ಟಗಳಲ್ಲಿ ಬಿಜೆಪಿ ಕಡೆ ಮುಖ ಮಾಡಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಕೆ.ಸಿ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಭಾಗಿಯಾಗಿದ್ದರು.











Click it and Unblock the Notifications