ನನ್ನ ಪುತ್ರ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ ಎಂದ ಈಶ್ವರಪ್ಪ: ಕ್ಷೇತ್ರದ ಹೆಸರನ್ನೂ ಬಹಿರಂಗಪಡಿಸಿದ ಹಿರಿಯ ನಾಯಕ
ಹಾವೇರಿ, ಜೂನ್ 26: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಪುತ್ರ ಕೆ.ಇ. ಕಾಂತೇಶ್ಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸಲು ಲಾಬಿ ನಡೆಸಲಿದ್ದಾರೆ ಎಂಬಹುದು ತಿಳಿದುಬಂದಿದೆ. ಕಾಂತೇಶ್ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ ಎಂಬ ಸುಳಿವನ್ನು ಸ್ವತಃ ಈಶ್ವರಪ್ಪ ನೀಡಿದ್ದಾರೆ. ಹಾವೇರಿಯಲ್ಲಿ ಈ ವಿಚಾರವನ್ನು ಅವರು ಬಹಿರಂಗಪಡಿಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪುತ್ರ ಕಾಂತೇಶ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ತಮ್ಮ ಪುತ್ರ ಕಾಂತೇಶ್ ಅಭ್ಯರ್ಥಿಯಾಗುವ ಬಗ್ಗೆ ಕೇಂದ್ರ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದೂ ಅವರು ಹೇಳಿದ್ದಾರೆ. ಈ ಮೂಲಕ ತಮ್ಮ ಪುತ್ರನ ಉಮೇದುವಾರಿಕೆಗಾಗಿ ಈಶ್ವರಪ್ಪ ಲಾಬಿ ನಡೆಸುವುದು ನಿಶ್ಚಿತವಾಗಿದೆ.
ಕಾಂತೇಶ್ ಅವರು ಹಾವೇರಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವ ಸುಳಿವನ್ನು ಈಶ್ವರಪ್ಪ ನೀಡಿದ್ದಾರೆ. ಹಾಲಿ ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಅವರು ಮೇ 2024 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.
'ನಾನು ನಮ್ಮ ಸಂಸದರೊಂದಿಗೆ ಮಾತನಾಡಿದ್ದೇನೆ. ಅವರು ವೈಯಕ್ತಿಕ ಸಮಸ್ಯೆಗಳಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಕಾಂತೇಶ್ ಹೊರತುಪಡಿಸಿ ಹಲವರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಕೇಂದ್ರ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸಂಸದರು ಈಗಾಗಲೇ ಮುಖಂಡರಿಗೆ ತಿಳಿಸಿದ್ದಾರೆ. ಟಿಕೆಟ್ಗಾಗಿ ಹಲವರು ಆಕಾಂಕ್ಷಿಗಳಾಗಿದ್ದು, ಇದರಲ್ಲಿ ಯಾವುದೇ ತಪ್ಪಿಲ್ಲ' ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗ, ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವಂತೆ ಬಿಜೆಪಿ ಹೈಕಮಾಂಡ್ ಈಶ್ವರಪ್ಪ ಅವರಿಗೆ ತಿಳಿಸಿತ್ತು. ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದ ನಂತರ, ಪಿಎಂ ಮೋದಿ ಅವರು ಕರೆ ಮಾಡಿ ಪಕ್ಷದ ಆದೇಶವನ್ನು ಪಾಲಿಸಿದ್ದಕ್ಕಾಗಿ ಈಶ್ವರಪ್ಪ ಅವರಿಗೆ ಧನ್ಯವಾದ ತಿಳಿಸಿದ್ದರು.
ಕಾಂತೇಶ್ ಅವರಿಗೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ನಿರಾಕರಿಸಲಾಗಿತ್ತು. ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಲಾಯಿತು.
ಇದೀಗ ಶಿವಮೊಗ್ಗ ಪಕ್ಕದ ಹಾವೇರಿ ಜಿಲ್ಲೆಯ ಲೋಕಸಭೆ ಟಿಕೆಟ್ಗಾಗಿ ಈಶ್ವರಪ್ಪ ಲಾಬಿ ಮಾಡಲು ಮುಂದಾಗಿದ್ದಾರೆ. ಕಾಂತೇಶ್ ಅವರಲ್ಲದೆ, ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜು ಕಲ್ಕೋಟಿ, ವಿಧಾನಸಭಾ ಚುನಾವಣೆಯಲ್ಲಿ ಹಿರೇಕೆರೂರು ಕ್ಷೇತ್ರದಿಂದ ಸೋತಿರುವ ಮಾಜಿ ಸಚಿವ ಬಿ.ಸಿ.ಪಾಟೀಲ್ ಕೂಡ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ.












Click it and Unblock the Notifications