ಕನ್ನಡ ನಾಮಫಲಕ ಕಡ್ಡಾಯದ ಬಗ್ಗೆ ಆರ್. ಅಶೋಕ್ ಹೇಳಿದ್ದೇನು?
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಲಾಗಿದೆ. ಹೀಗೆ ಬಿಬಿಎಂಪಿ ಡೆಡ್ಲೈನ್ ನೀಡಿ ಅದು ಮುಗಿದು ಹೋದರೂ, ರಾಜಧಾನಿ ಬೆಂಗಳೂರು ಪ್ರದೇಶದಲ್ಲಿ ಬಹುತೇಕ ಅಂಗಡಿಗಳ ಮಾಲೀಕರು ಕನ್ನಡ ಕಡ್ಡಾಯ ನಿಯಮ ಪಾಲಿಸಿಲ್ಲ. ಬೆಂಗಳೂರು ಸೇರಿ ಕರ್ನಾಟಕದಲ್ಲಿ ಅಂಗಡಿ ಮಳಿಗೆಗಳ ನಾಮಫಲಕಗಳಲ್ಲಿ, ಶೇಕಡಾ 60ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲಾಗಿದೆ. ಹೀಗಾಗಿ ನಾಳೆಯಿಂದಲೇ ಕ್ರಮ ಕೈಗೊಳ್ಳಲು ಈಗ ಬಿಬಿಎಂಪಿ ಸಿದ್ಧವಾಗಿರುವಾಗ ಆರ್. ಅಶೋಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಕರ್ನಾಟಕದಲ್ಲಿ ಕನ್ನಡ ಭಾಷೆ ಮಾಯವಾಗುತ್ತಿದೆ, ಕನ್ನಡಿಗರ ಸಂಖ್ಯೆ ಕೂಡ ಕುಸಿಯುತ್ತಿದೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಕೂಡ ಶುರುವಾಗಿತ್ತು. ಇದೇ ಕಾರಣಕ್ಕೆ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿನ ಅಂಗಡಿಗಳ ಮಾಲೀಕರಿಗೆ ತಮ್ಮ ತಮ್ಮ ಬೋರ್ಡ್ಗಳಲ್ಲಿ ಕನ್ನಡ ಕಡ್ಡಾಯ ಮಾಡಲಾಗಿದೆ. ಆದರೂ ಈ ಬಗ್ಗೆ ಅಂಗಡಿ ಮಾಲೀಕರು ಕ್ರಮ ಕೈಗೊಂಡಿಲ್ಲ. ಹೀಗಿದ್ದಾಗ ವಿರೋಧ ಪಕ್ಷ ನಾಯಕ & ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಹೇಳಿದ್ದೇನು ಗೊತ್ತೆ? ಆ ಕುರಿತು ತಿಳಿಯೋಣ ಬನ್ನಿ.

ಸರ್ಕಾರದ ಆದೇಶಕ್ಕೆ ಬೆಲೆ ಇಲ್ವಾ?
ಈ ಬಗ್ಗೆ ಆರ್. ಅಶೋಕ್ ಟ್ವೀಟ್ ಮಾಡಿ 'ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು, ಉದ್ದಿಮೆ ಮತ್ತು ಕೈಗಾರಿಕೆ ನಾಮಫಲಕಗಳಲ್ಲಿ ಶೇಕಡ 60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಇರಬೇಕೆಂಬ ನಿಯಮ ಜಾರಿಗೊಳಿಸಲು ನೀಡಲಾಗಿದ್ದ ಗಡುವು ನಾಳೆಗೆ ಮುಕ್ತಾಯವಾಗಲಿದ್ದು ಇನ್ನೂ ಅನೇಕ ಕಡೆಗಳಲ್ಲಿ ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವಂತೆ ಅನ್ಯಭಾಷೆಯ ನಾಮಫಲಕಗಳು ರಾರಾಜಿಸುತ್ತಿವೆ.' ಎಂದು ಆರೋಪಿಸಿದ್ದಾರೆ.
ಕನ್ನಡಪರ ಹೋರಾಟಗಾರರ ಬಗ್ಗೆ
ಹಾಗೇ ಅಶೋಕ್ ಅವರು ಆಕ್ರೋಶವನ್ನ ಹೊರಹಾಕುತ್ತಾ, 'ಅನ್ಯ ಭಾಷೆಯ ಫಲಕಗಳನ್ನು ತೆರವುಗೊಳಿಸಲು ಹೋರಾಟ ಮಾಡುತ್ತಿದ್ದ ಕನ್ನಡ ಪರ ಹೋರಾಟಗಾರರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಅವರ ಮೇಲೆ ಲಾಠಿ ಪ್ರಹಾರ ಮಾಡಿ, ಕೇಸು ಹಾಕಿ ಅವರನ್ನು ಬಂಧಿಸಿದ್ದ ಸಿಎಂ @siddaramaiah ಸರ್ಕಾರ ಈಗ ಕಾನೂನು ಜಾರಿಗೆ ತರಲು ಸಂಪೂರ್ಣ ನಿರಾಸಕ್ತಿ ತೋರುತ್ತಿದೆ.' ಎಂದಿದ್ದಾರೆ.
ಕನ್ನಡಕ್ಕೆ ದ್ರೋಹ ಬಗೆದರೆ...
ಅಂತಿಮವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, 'ಕನ್ನಡ ಕಡ್ಡಾಯ ಮಾಡುವ ನಿಯಮ ಕೇವಲ ಕಡತಕ್ಕೆ ಸೀಮಿತವಾಗದೆ, ಪ್ರಚಾರದ ವಸ್ತುವಾಗಿದೆ ಅದನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವ ಜವಾಬ್ದಾರಿ ಕಾಂಗ್ರೆಸ್ ಸರ್ಕಾರದ ಮೇಲಿದ್ದು ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಕನ್ನಡಕ್ಕೆ ದ್ರೋಹ ಬಗೆದರೆ, ಕನ್ನಡದ ಬಗ್ಗೆ ಅಸಡ್ಡೆ ತೋರಿದರೆ ಸರ್ಕಾರದ ವಿರುದ್ಧ @BJP4Karnataka ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ.' ಎಂದು ಎಚ್ಚರಿಕೆಯನ್ನ ನೀಡಿದ್ದಾರೆ.
ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು ಮತ್ತು ಕೈಗಾರಿಕೆಗಳ ನಾಮಫಲಕಗಳಲ್ಲಿ ಶೇಕಡ 60%ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಇರಬೇಕೆಂಬ ನಿಯಮ ಜಾರಿಗೊಳಿಸಲು ನೀಡಲಾಗಿದ್ದ ಗಡುವು ನಾಳೆಗೆ ಮುಕ್ತಾಯವಾಗಲಿದ್ದು, ಇನ್ನೂ ಅನೇಕ ಕಡೆಗಳಲ್ಲಿ ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವಂತೆ ಅನ್ಯಭಾಷೆಯ ನಾಮಫಲಕಗಳು… pic.twitter.com/b1hVIu3IXy
— R. Ashoka (ಆರ್. ಅಶೋಕ) (@RAshokaBJP) February 28, 2024
ಹೀಗೆ ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರುತ್ತಿರುವ ಸಮಯದಲ್ಲೇ ಈ ವಿಚಾರವು ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅದರಲ್ಲೂ ಕರ್ನಾಟಕದಲ್ಲಿ ಕನ್ನಡ ಕಡ್ಡಾಯವನ್ನು ವಿರೋಧ ಪಕ್ಷಗಳು ಬೆಂಬಲಿಸಿದ್ದರೂ, ಸರ್ಕಾರ ಇದನ್ನ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ಈ ಆರೋಪಕ್ಕೆ ಇದೀಗ ಯಾವ ರೀತಿ ಉತ್ತರ ನೀಡುತ್ತಾರೆ ಅಂತಾ ಕಾದು ನೋಡಬೇಕಿದೆ.












Click it and Unblock the Notifications