ಬಿಜೆಪಿ ನಾಯಕರ ರಾಜ್ಯ ಪ್ರವಾಸ, ಯಾವ ಜಿಲ್ಲೆಗೆ ಯಾವ ತಂಡ?
ಬೆಂಗಳೂರು, ಆಗಸ್ಟ್ 08 : 2019ರ ಲೋಕಸಭೆ ಚುನಾವಣೆಯಲ್ಲಿ 20+ ಸ್ಥಾನಗಳನ್ನು ಗಳಿಸುವ ಗುರಿಯೊಂದಿಗೆ ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರ ಆರಂಭಿಸಲಿದೆ. ಆಗಸ್ಟ್ 9 ರಿಂದ ರಾಜ್ಯ ನಾಯಕರ ಮೂರು ತಂಡಗಳು ವಿವಿಧ ಜಿಲ್ಲೆಗಳಲ್ಲಿ ಸಂಚಾರ ನಡೆಸಲಿವೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು, ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ದುರಾಡಳಿತ, ವರ್ಗಾವಣೆ ದಂಧೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದೆ.
2018ರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ಕೈಗೊಂಡಿದ್ದ 'ಪರಿವರ್ತನಾ ಯಾತ್ರೆ'ಗೆ ಭಾರೀ ಜನ ಬೆಂಬಲ ಸಿಕ್ಕಿತ್ತು. ಇದೇ ಮಾದರಿಯಲ್ಲಿ ಈಗ ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡಿ ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡಲಾಗುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನೇತೃತ್ವದ ತಂಡ ಆ.9ರ ಗುರುವಾರದಿಂದ ರಾಜ್ಯ ಪ್ರವಾಸವನ್ನು ಆರಂಭಿಸಲಿದೆ.

ತಂಡ - 1
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮೊದಲ ತಂಡವನ್ನು ರಚನೆ ಮಾಡಲಾಗಿದೆ. ಯಡಿಯೂರಪ್ಪ, ಗೋವಿಂದ ಕಾರಜೋಳ ಮತ್ತು ಶೋಭಾ ಕರಂದ್ಲಾಜೆ ಅವರು ತಂಡದಲ್ಲಿದ್ದಾರೆ.
ಈ ತಂಡ ಬೀದರ್, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದೆ.

ತಂಡ - 2
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದಲ್ಲಿ 2ನೇ ತಂಡ ರಚನೆ ಮಾಡಲಾಗಿದೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ತಂಡದಲ್ಲಿದ್ದಾರೆ.
ಈ ತಂಡ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದೆ.

3 ನೇ ತಂಡ
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಸಿ.ಟಿ.ರವಿ ನೇತೃತ್ವದಲ್ಲಿ 3ನೇ ತಂಡ ರಚನೆ ಮಾಡಲಾಗಿದೆ.
ಈ ತಂಡ ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು

ಕಾರ್ಯಕರ್ತರ ಜೊತೆ ಸಂವಾದ
ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಸಂಸದರು, ಶಾಸಕರು ಸೇರಿ ಜಿಲ್ಲಾ ಕೋರ್ ಕಮಿಟಿ ಸಭೆಯನ್ನು ನಡೆಸಲಿದ್ದಾರೆ. ಜಿಲ್ಲಾ ಕೇಂದ್ರದಲ್ಲಿ ಪ್ರಮುಖರ ಸಭೆ ನಡೆಸಲಿದ್ದಾರೆ. ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಪ್ರತಿ ಜಿಲ್ಲೆಯಲ್ಲಿ 800 ರಿಂದ 1000 ಕಾರ್ಯಕರ್ತರ ಜೊತೆ ನಾಯಕರು ಪಕ್ಷ ಸಂಘಟನೆ ಬಗ್ಗೆ ಮಾತಿಕತೆ ನಡೆಸಲಿದ್ದಾರೆ.












Click it and Unblock the Notifications