ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನದ ಚರ್ಚೆ ಸದ್ಯಕ್ಕೆ ಬೇಡ!
ಬೆಂಗಳೂರು, ಏಪ್ರಿಲ್ 06 : ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನದ ಚರ್ಚೆ ಸದ್ಯಕ್ಕೆ ಬೇಡ ಎಂದು ಹೈಕಮಾಂಡ್ ಹೇಳಿದೆ. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ಅಧಿಕಾರಾವಧಿ ಮಾರ್ಚ್ ತಿಂಗಳಿನಲ್ಲಿಯೇ ಪೂರ್ಣಗೊಂಡಿದೆ. ರಾಜ್ಯ ಬಿಜೆಪಿ ವಲಯದಲ್ಲಿ ಮುಂದಿನ ಅಧ್ಯಕ್ಷರು ಯಾರು? ಎಂಬ ಚರ್ಚೆ ನಡೆಯುತ್ತಿದೆ.
ಅಧ್ಯಕ್ಷ ಸ್ಥಾನಕ್ಕೆ ಹಲವು ಆಕಾಂಕ್ಷಿಗಳಿದ್ದಾರೆ. ಹಲವು ನಾಯಕರು ದೆಹಲಿಗೆ ಭೇಟಿ ನೀಡಿ ಈ ಕುರಿತು ಮಾತುಕತೆಯನ್ನು ನಡೆಸಿದ್ದಾರೆ. ಆದರೆ, ಹೈಕಮಾಂಡ್ ಕೆಲವು ದಿನಗಳ ಕಾಲ ಕಾಯಿರಿ ಎಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಗೆ ಸೂಚನೆ ನೀಡಿದೆ. [ಕರ್ನಾಟಕ ಬಿಜೆಪಿಗೆ ನೂತನ ಸಾರಥಿ ಯಾರು?]
ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಪಂಚ ರಾಜ್ಯಗಳ ಚುನಾವಣೆ ಅಡ್ಡಿಯಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿ, ಅಸ್ಸಾಂ ಮತ್ತು ಕೇರಳ ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಚುನಾವಣೆಗಳು ಆರಂಭವಾಗಿವೆ. ಪಕ್ಷದ ಗಮನ ಚುನಾವಣೆ ಮೇಲಿದೆ. [ನಳೀನ್ ಕುಮಾರ್ ಕಟೀಲ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ?]
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಆರ್.ಅಶೋಕ್, ಸಿ.ಟಿ.ರವಿ ಹೆಸರುಗಳು ಅಧ್ಯಕ್ಷ ಸ್ಥಾನಕ್ಕೆ ಕೇಳಿಬರುತ್ತಿವೆ. ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಅವರ ಹೆಸರೂ ಸಹ ಅಧ್ಯಕ್ಷ ಹುದ್ದೆಯ ರೇಸ್ನಲ್ಲಿದೆ. ಹೈಕಮಾಂಡ್ ಸೂಚನೆ ಏನು? ಚಿತ್ರಗಳಲ್ಲಿ ನೋಡಿ....[ಸುದ್ದಿ ದನಿ : ಬಿಜೆಪಿ ಅಧ್ಯಕ್ಷ ಸ್ಥಾನ ಯಾರಿಗೆ?]
ಅಧ್ಯಕ್ಷರ ಅವಧಿ ಮುಗಿದಿದೆ
ಕರ್ನಾಟಕ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ಅಧಿಕಾರಾವಧಿ ಮಾರ್ಚ್ 23ಕ್ಕೆ ಕೊನೆಗೊಂಡಿದೆ. ಆದ್ದರಿಂದ, ರಾಜ್ಯ ಬಿಜೆಪಿ ವಲಯದಲ್ಲಿ ನೂತನ ಸಾರಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಹೈಕಮಾಂಡ್ ನಾಯಕರು ಅಧ್ಯಕ್ಷ ಸ್ಥಾನದ ಚರ್ಚೆ ಸದ್ಯಕ್ಕೆ ಬೇಡ ಎಂದು ಸೂಚನೆ ಕೊಟ್ಟಿದ್ದಾರೆ.
ಅಧ್ಯಕ್ಷರ ಆಯ್ಕೆಗೆ ಚುನಾವಣೆ ಅಡ್ಡಿ
ಕೇಂದ್ರ ಚುನಾವಣಾ ಆಯೋಗ 5 ರಾಜ್ಯಗಳ ಚುನಾವಣೆ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಿದೆ. ಏಪ್ರಿಲ್ 4ರಿಂದ ಚುನಾವಣೆಗಳು ಆರಂಭವಾಗಿದ್ದು, ಮೇ 16ರ ತನಕ ಚುನಾವಣೆ ನಡೆಯಲಿದೆ. ಮೇ 19ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ನೂತನ ಅಧ್ಯಕ್ಷರ ನೇಮಕದ ಬಗ್ಗೆ ಹೈಕಮಾಂಡ್ ಗಮನಹರಿಸಲಿದೆ.
ಆಕಾಂಕ್ಷಿಗಳದ್ದೂ ದೊಡ್ಡ ಸಮಸ್ಯೆ
ಬಿ.ಎಸ್.ಯಡಿಯೂರಪ್ಪ, ನಳೀನ್ ಕುಮಾರ್ ಕಟೀಲ್, ಆರ್.ಅಶೋಕ್, ಸಿ.ಟಿ.ರವಿ ಮುಂತಾದ ನಾಯಕರ ಹೆಸರುಗಳು ಅಧ್ಯಕ್ಷ ಹುದ್ದೆಗೆ ಕೇಳಿಬರುತ್ತಿವೆ. ಅಧ್ಯಕ್ಷರನ್ನು ಆಯ್ಕೆ ಮಾಡಲು ಸಮಯಾವಕಾಶ ಬೇಕಾದ ಹಿನ್ನೆಲೆಯಲ್ಲಿ ಹೈಕಮಾಂಡ್ ಚುನಾವಣೆ ಮುಗಿಯಲಿ ಎಂದು ಹೇಳಿದೆ.
ಯಡಿಯೂರಪ್ಪ ಬೇಕು, ಬೇಡ ಎಂಬ ಚರ್ಚೆ
ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ರೇಸ್ನಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವುದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು. ಆದರೆ, ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಚರ್ಚೆಯೂ ಪಕ್ಷದ ವಲಯದಲ್ಲಿ ನಡೆಯುತ್ತಿದೆ.
ಯಡಿಯೂರಪ್ಪ ಅಮಿತ್ ಶಾ ಭೇಟಿ
ಬಿ.ಎಸ್.ಯಡಿಯೂರಪ್ಪ ಅವರು ಕೆಲವು ದಿನಗಳ ಹಿಂದೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆಗ ಅಮಿತ್ ಶಾ ಅವರು, ಚುನಾವಣೆಗಳು ಮುಗಿದ ಬಳಿಕ ಈ ಬಗ್ಗೆ ಚರ್ಚೆ ನಡೆಸೋಣ ಎಂದು ಹೇಳಿದ್ದಾರೆ.
ಹಲವು ರಾಜ್ಯಗಳಿಗೆ ಅಧ್ಯಕ್ಷರ ನೇಮಕ
ಕರ್ನಾಟಕ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಿಗೆ ಅಧ್ಯಕ್ಷರ ಆಯ್ಕೆಯಾಗಬೇಕಾಗಿದೆ. ಆದ್ದರಿಂದ, ಚುನಾವಣೆ ಮುಗಿದ ಮೇಲೆ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಪಕ್ಷದ ನಾಯಕರು ನಿರ್ಧರಿಸಿದ್ದಾರೆ.