ಅರಮನೆ ಮೈದಾನದಲ್ಲಿ ಯಡಿಯೂರಪ್ಪ ಹೇಳಿದ್ದೇನು?
ಬೆಂಗಳೂರು, ಏಪ್ರಿಲ್ 15 : ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 'ವಾರದಲ್ಲಿ ಮೂರು ದಿನ ರಾಜ್ಯ ಪ್ರವಾಸ ಮಾಡುತ್ತೇನೆ. ಉಳಿದ ದಿನ ಬೆಂಗಳೂರಿನ ಕಚೇರಿಯಲ್ಲಿ ಕುಳಿತು ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸುತ್ತೇನೆ' ಎಂದು ಘೋಷಿಸಿದರು.
ಗುರುವಾರ ಸಂಜೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಸಮಾವೇಶದಲ್ಲಿ ಯಡಿಯೂರಪ್ಪ ಅವರಿಗೆ ಜೈ, ಬಿಜೆಪಿಗೆ ಜೈ ಎಂಬ ಘೋಷಣೆಗಳು ಮೊಳಗಿದವು. ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯಡಿಯೂರಪ್ಪ ಅವರು ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. [ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಯಡಿಯೂರಪ್ಪ]
ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, 'ರಾಜ್ಯದಲ್ಲಿ ರೈಲ್ವೆ ಯೋಜನೆಗಳ ಪ್ರಗತಿ ಕುಂಠಿತವಾಗಿದೆ. ಯೋಜನೆಗಳನ್ನು ವೆಚ್ಚ ಹಂಚಿಕೆ ಆಧಾರದ ಮೇಲೆ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಸಕ್ತಿ ತೋರುತ್ತಿಲ್ಲ' ಎಂದು ದೂರಿದರು. [ಬಿಜೆಪಿ ಸಮಾವೇಶದ ಚಿತ್ರಗಳು]
'ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಸಾಂತ್ವನ ಹೇಳುವ ಸೌಜನ್ಯವನ್ನು ಮುಖ್ಯಮಂತ್ರಿಗಳು ತೋರುತ್ತಿಲ್ಲ. ಬಿಜೆಪಿ ಕಾರ್ಯಕರ್ತರು ರೈತರ ಮನೆ ಬಾಗಿಲಿಗೆ ಹೋಗಿ, ಅವರ ಕುಟುಂಬ ವರ್ಗದವರಿಗೆ ಕೈಲಾದಷ್ಟು ಸಹಾಯ ಮಾಡಬೇಕು ಎಂದು ಕರೆ ನೀಡಿದರು'. ಸಮಾವೇಶದಲ್ಲಿ ಯಡಿಯೂರಪ್ಪ ಹೇಳಿದ್ದೇನು? ಚಿತ್ರಗಳಲ್ಲಿ ನೋಡಿ..... [ಯಡಿಯೂರಪ್ಪ ಮುಂದಿರುವ 6 ಪ್ರಮುಖ ಸವಾಲುಗಳು]
ಬಿಜೆಪಿ ಸೇರುವವರಿಗೆ ಮುಕ್ತ ಅವಕಾಶ
'ಬಿಜೆಪಿ ಪಕ್ಷಕ್ಕೆ ಸೇರಲು ಎಲ್ಲರಿಗೂ ಮುಕ್ತ ಅವಕಾಶವಿದೆ. ಆದರೆ, ಬೇರೆ ಪಕ್ಷಗಳ ಮುಖಂಡರ ವಿಷಯವನ್ನು ಮಾತ್ರ ನಾಯಕರ ಮಟ್ಟದಲ್ಲಿ ತೀರ್ಮಾನ ಮಾಡಲಾಗುತ್ತದೆ' ಎಂದು ಯಡಿಯೂರಪ್ಪ ಹೇಳಿದರು.
ಒಗ್ಗಟ್ಟಿನ ಮಂತ್ರ ಪಠಣ
'ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿರಬೇಕು. ಗೊಂದಲ ಸೃಷ್ಟಿಸುವ ಯತ್ನವನ್ನು ಪಕ್ಷ ಸಹಿಸುವುದಿಲ್ಲ. ಹುದ್ದೆಗಳ ಹಂಚಿಕೆ ವಿಚಾರದಲ್ಲಿ ಗೊಂದಲಕ್ಕೆ ಅವಕಾಶವಿಲ್ಲ. ಎಲ್ಲಾ ನಾಯಕರು ಒಟ್ಟಾಗಿ ಕುಳಿತು, ರಾಜ್ಯ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ' ಎಂದು ಯಡಿಯೂರಪ್ಪ ತಿಳಿಸಿದರು.
ಮೂರು ದಿನ ರಾಜ್ಯ ಪ್ರವಾಸ
'ವಾರದಲ್ಲಿ ಮೂರು ದಿನ ರಾಜ್ಯ ಪ್ರವಾಸ ಮಾಡಲಾಗುತ್ತದೆ. ಉಳಿದ ದಿನ ಬೆಂಗಳೂರಿನ ಕಚೇರಿಯಲ್ಲಿ ಕುಳಿತು ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲಾಗುತ್ತದೆ. ಪ್ರವಾಸದ ಸಂದರ್ಭದಲ್ಲಿ ದಲಿತರ ಕಾಲೋನಿಗಳಿಗೆ ಭೇಟಿ ನೀಡಿ ಅಹವಾಲು ಸ್ವೀಕಾರ ಮಾಡಲಾಗುತ್ತದೆ' ಯಡಿಯೂರಪ್ಪ ಹೇಳಿದರು.
ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಭೆ
'ರಾಜ್ಯದಲ್ಲಿ ಸಮಾವೇಶಗಳನ್ನು ನಡೆಸಲಾಗುತ್ತದೆ. ಮೊದಲು ಜಿಲ್ಲಾ ಹಂತದಲ್ಲಿ 10 ಸಾವಿರ ಜನರನ್ನು ಸೇರಿಸಿ, ತಾಲೂಕು ಮಟ್ಟದಲ್ಲಿ 5 ಸಾವಿರ ಜನರನ್ನು ಸೇರಿಸಿ ಸಮಾವೇಶಗಳನ್ನು ಮಾಡಲಾಗುತ್ತದೆ'.
ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಪಡೆ ರಚನೆ
'ಪ್ರತಿ ಜಿಲ್ಲಾ, ತಾಲ್ಲೂಕು ಮಟ್ಟದ ಪಕ್ಷದ ಕಾರ್ಯಕ್ರಮಗಳಲ್ಲಿ ದಲಿತ ಮುಖಂಡರು ಸೇರಿದಂತೆ ಎಲ್ಲ ವರ್ಗದವರಿಗೆ ಅವಕಾಶ. ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಪಡೆ ರಚನೆ ಮಾಡಿ ಪಕ್ಷ ಸಂಘಟನೆ ಮಾಡಲಾಗುತ್ತದೆ'.
ಮತ್ತಷ್ಟು ಹಗರಣ ಬಯಲಿಗೆ
'ಒಂದು ತಿಂಗಳವೊಳಗೆ ಸಿದ್ದರಾಮಯ್ಯ ಅವರ ಸರ್ಕಾರದ ಮತ್ತಷ್ಟು ಹಗರಣಗಳು ಬಯಲಿಗೆ ಬರುತ್ತವೆ. ಅವರು ಅಧಿಕಾರದಲ್ಲಿ ಮುಂದುವರೆಯಲು ಸಾಧ್ಯವಾಗದಂತಹ ವಾತಾವರಣ ನಿರ್ಮಾಣವಾಗುತ್ತದೆ' ಎಂದು ಯಡಿಯೂರಪ್ಪ ಭವಿಷ್ಯ ನುಡಿದರು.
150 ಸ್ಥಾನದಲ್ಲಿ ಗೆಲುವು
'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರರು ಇರುವಷ್ಟೇ ಸತ್ಯ. ಸಿದ್ದರಾಮಯ್ಯ ಸರ್ಕಾರ ತೊಲಗಿಸಿ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವ ತನಕ ಯಾರನ್ನೂ ಆಲಸ್ಯದಿಂದ ಕೂರಲು ಬಿಡುವುದಿಲ್ಲ' ಎಂದು ಯಡಿಯೂರಪ್ಪ ಹೇಳಿದರು.