ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬದಲಾವಣೆ, ಜೂ.13ಕ್ಕೆ ಸಭೆ
ಬೆಂಗಳೂರು, ಜೂನ್ 11 : ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಜೂನ್ 13ರಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸಭೆ ಕರೆದಿದ್ದು, ಈ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ಎಲ್ಲಾ ರಾಜ್ಯಗಳ ಬಿಜೆಪಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳಿಗೆ ಸಭೆಯಲ್ಲಿ ಹಾಜರಾಗುವಂತೆ ಬಿಜೆಪಿ ಸೂಚನೆ ನೀಡಿದೆ. ದೆಹಲಿಯಲ್ಲಿ ನಡೆಯಲಿರುವ ಈ ಸಭೆ ಕುತೂಹಲಕ್ಕೆ ಕಾರಣವಾಗಿದೆ.
ಯಡಿಯೂರಪ್ಪಗೆ ಹೈಕಮಾಂಡ್ನಿಂದ ಭರ್ಜರಿ ಉಡುಗೊರೆ?
76 ವರ್ಷದ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರು. ಆದ್ದರಿಂದ, ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬೇಕು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಯಡಿಯೂರಪ್ಪ ಭವಿಷ್ಯ ಚುನಾವಣೆ ಫಲಿತಾಂಶದ ಮೇಲೆ ನಿಂತಿದೆ!
ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ಅಧ್ಯಕ್ಷ ಹುದ್ದೆಗೆ ಕೇಳಿ ಬರುತ್ತಿದೆ. ಮತ್ತೊಂದು ಕಡೆ ಆರ್ಎಸ್ಎಸ್ ಸಹ ಕೆಲವು ಹೆಸರುಗಳನ್ನು ಸೂಚಿಸಿದೆ. ಇದರಿಂದಾಗಿ ಯಡಿಯೂರಪ್ಪ ಬದಲಾವಣೆ ಯಾದರೆ ಮುಂದಿನ ಅಧ್ಯಕ್ಷರು ಯಾರು? ಎಂಬುದು ಪ್ರಶ್ನೆಯಾಗಿದೆ.
ಆಗಸ್ಟ್ ತನಕ ಕರ್ನಾಟಕ ಬಿಜೆಪಿ ಅಧ್ಯಕ್ಷರ ಬದಲಾವಣೆ ಇಲ್ಲ!
ವಯಸ್ಸು, ಎರಡು ಹುದ್ದೆ
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ 76 ವರ್ಷ ವಯಸ್ಸು. ಕರ್ನಾಟಕ ವಿಧಾನಸಭೆಯಲ್ಲಿ ಅವರು ಪ್ರತಿಪಕ್ಷದ ನಾಯಕರೂ ಹೌದು. ಬಿಜೆಪಿ 75 ವರ್ಷದ ಬಳಿಕ ನಾಕಯಕರಿಗೆ ಯಾವುದೇ ಹುದ್ದೆ ನೀಡುವುದಿಲ್ಲ. ಮತ್ತೊಂದು ಕಡೆ ಒಬ್ಬರಿಗೆ ಎರಡು ಹುದ್ದೆಗಳನ್ನು ನೀಡುವುದಿಲ್ಲ. ಆದ್ದರಿಂದ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಲಿದೆ ಎಂಬುದು ಸುದ್ದಿ.
4 ರಾಜ್ಯಗಳ ಅಧ್ಯಕ್ಷರ ಬದಲಾವಣೆ
2016ರಲ್ಲಿ ಕರ್ನಾಟಕ ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳಿಗೆ ಒಟ್ಟಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ಈಗ ಪಕ್ಷ ಎಲ್ಲಾ ರಾಜ್ಯಗಳ ಅಧ್ಯಕ್ಷರನ್ನು ಬದಲಾವಣೆ ಮಾಡಲು ಹೊರಟಿದೆ. ಆಗಸ್ಟ್ ತಿಂಗಳ ಬಳಿಕ ಹೊಸ ಅಧ್ಯಕ್ಷರ ನೇಮಕವಾಗಬಹುದು ಎಂಬ ನಿರೀಕ್ಷೆ ಇದೆ.
ಸಭೆ ಕರೆದ ಅಮಿತ್ ಶಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಎಲ್ಲಾ ರಾಜ್ಯಗಳ ಬಿಜೆಪಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳ ಸಭೆಯನ್ನು ಜೂನ್ 13ಕ್ಕೆ ದೆಹಲಿಯಲ್ಲಿ ಕರೆದಿದ್ದಾರೆ. ಈ ಸಭೆಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ.
ಮುಂದಿನ ಅಧ್ಯಕ್ಷರು ಯಾರು?
ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ರಾಜ್ಯಾಧ್ಯಕ್ಷ ಹುದ್ದೆಗೆ ಪ್ರಬಲವಾಗಿ ಕೇಳಿಬರುತ್ತಿದೆ. ಇವರನ್ನು ಹೊರತುಪಡಿಸಿ ಸಿ.ಟಿ.ರವಿ, ಆರ್.ಅಶೋಕ, ಸುನೀಲ್ ಕುಮಾರ್, ನಳೀನ್ ಕುಮಾರ್ ಕಟೀಲ್ ಅವರ ಹೆಸರುಗಳು ಸಹ ಪ್ರಸ್ತಾಪವಾಗಿದೆ.