KPSC: ಕೆಪಿಎಸ್ಸಿ ವಿದ್ಯಾರ್ಥಿಗಳ ಪ್ರತಿಭಟನಾ ಹೋರಾಟಕ್ಕೆ ಬಿಜೆಪಿ ಬೆಂಬಲ
ಬೆಂಗಳೂರು, ಜನವರಿ 17: ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ. ರಾಜ್ಯ ಸರಕಾರಕ್ಕೆ ಬುದ್ಧಿ ಹೇಳುವ ದೃಷ್ಟಿಯಿಂದ ಹೋರಾಟಕ್ಕೆ ಬೆಂಬಲ ನೀಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಈ ಕುರಿತು ಗುರುವಾರ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಬಿ ವೈ ವಿಜಯೇಂದ್ರ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ,ರಾಜ್ಯ ವಿದ್ಯಾರ್ಥಿಗಳ ಒಕ್ಕೂಟದಿಂದ ಕೆಪಿಎಸ್ಸಿಯಿಂದ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಖಂಡಿಸಿ ಹೋರಾಟ ನಿರತರಾಗಿದ್ದಾರೆ.

ಪದೇಪದೇ ಪರೀಕ್ಷೆ ಮುಂದೂಡುವುದು, ಪ್ರಶ್ನೆಪತ್ರಿಕೆಗಳ ಸೋರಿಕೆ, ಪ್ರಶ್ನೆಪತ್ರಿಕೆಗಳನ್ನು ಇಂಗ್ಲಿಷ್ನಿಂದ ಕನ್ನಡಕ್ಕೆ ಅನುವಾದ ಮಾಡುವಾಗ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಸಮಸ್ರಾರು ವಿದ್ಯಾರ್ಥಿಗಳು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರಕಾರದ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದರು.
ನಾನು, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ ಮೊದಲಾದ ಮುಖಂಡರು ಇಲ್ಲಿಗೆ ಬಂದಿದ್ದು, ಹೋರಾಟಕ್ಕೆ ಬೆಂಬಲ ನೀಡಿದ್ದೇವೆ ಎಂದು ತಿಳಿಸಿದರು. ಈ ಬೆಂಬಲ ಸಾಂಕೇತಿಕವಲ್ಲ. ರಾಜ್ಯ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಬಿ ವೈ ವಿಜಯೇಂದ್ರ ಅವರು ಆಗ್ರಹಿಸಿದರು.
ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಅವರಿಗೆ ನ್ಯಾಯ ಕೊಡಿಸಬೇಕಾಗಿದೆ ಎಂದು ತಿಳಿಸಿದರು. ಕನ್ನಡ ಭಾಷೆಯನ್ನೇ ಕೊಲೆ ಮಾಡುವ ಸರಕಾರ ಇದು ಎಂದು ಟೀಕಿಸಿದರು. ಒಂದು ಸಾರಿ ಆದ ತಪ್ಪು ಮತ್ತೆ ಮರುಕಳಿಸದಂತೆ ತಿದ್ದಿಕೊಳ್ಳುವ ಯೋಗ್ಯತೆಯನ್ನೇ ಕಳೆದುಕೊಂಡಿದೆ. ಮುಖ್ಯಮಂತ್ರಿಗಳು ಯಾಕೆ ಇದರ ಕಡೆ ಗಮನ ಕೊಡುತ್ತಿಲ್ಲ ಎಂದು ಪ್ರಶ್ನಿಸಿದರು.
ಇನ್ನೂ ಈ ಕುರಿತು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದು, 2023-24ನೇ ಸಾಲಿನ ಕೆಪಿಎಸ್ ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಗೆ ಡಿಸೆಂಬರ್ 29 ರಂದು ನಡೆದ ಮರುಪರೀಕ್ಷೆಯಲ್ಲಿ ಮತ್ತೊಮ್ಮೆ ಲೋಪದೋಷಗಳು ಕಂಡು ಬಂದಿದ್ದರಿಂದ ವಿಚಲಿತರಾಗಿರುವ ಅಭ್ಯರ್ಥಿಗಳು ಇಂದಿನಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.
ಮರುಪರೀಕ್ಷೆಯಲ್ಲಿ ಕಂಡು ಬಂದ ಲೋಪದೋಷಗಳ ಬಗ್ಗೆ ಅಭ್ಯರ್ಥಿಗಳು ಪದೇ ಪದೇ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೂ ಸಹ ಇದನ್ನ ವರದಿ ಮಾಡಿವೆ. ಆದರೆ ಮರುಪರೀಕ್ಷೆ ನಡೆದು ಹದಿನೈದು ದಿನ ಕಳೆದರೂ ಈವರೆಗೂ ಸರ್ಕಾರವಾಗಲಿ, ಆಯೋಗವಾಗಲಿ ಅಭ್ಯರ್ಥಿಗಳ ಆಕ್ಷೇಪಣೆಗಳಿಗೆ ಉತ್ತರ ನೀಡಿಲ್ಲ. ಲಕ್ಷಾಂತರ ಯುವ ಅಭ್ಯರ್ಥಿಗಳ ಭವಿಷ್ಯವೇ ಡೋಲಾಯಮಾನವಾಗಿದ್ದಾರೂ ಸರ್ಕಾರ ಸ್ಪಂದಿಸುತ್ತಿಲ್ಲ.
ಕೆಪಿಎಸ್ಸಿ ಪರೀಕ್ಷೆಯಲ್ಲಿ ಆಗಿರುವ ಎಡವಟ್ಟುಗಳು, ಅದರಲ್ಲೂ ಮುಖ್ಯವಾಗಿ ಭಾಷಾಂತರದಲ್ಲಿ ಆಗಿರುವ ಲೋಪದೋಷಗಳ ದುಷ್ಪರಿಣಾಮ ಎದುರಿಸುತ್ತಿರುವುದು ಗ್ರಾಮೀಣ ಭಾಗದ ಯುವಕ ಯುವತಿಯರು. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಕನ್ನಡ ಮಾಧ್ಯಮದಲ್ಲಿ ಶಾಲಾ, ಕಾಲೇಜು ವಿದ್ಯಾಭ್ಯಾಸ ಮಾಡಿರುವ ಸಾವಿರಾರು ಗ್ರಾಮೀಣ ಅಭ್ಯರ್ಥಿಗಳ ಕನಸು ಇವತ್ತು ನುಚ್ಚು ನೂರಾಗಿದೆ. ಸರ್ಕಾರಿ ಅಧಿಕಾರಿಗಳಾಗಿ ಗ್ರಾಮೀಣ ಭಾಗದ ಜನರ ಸೇವೆ ಮಾಡಬೇಕು ಎಂಬ ಕನಸು ಕಟ್ಟಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವರ್ಷಗಟ್ಟಲೆ ಹಗಲಿರುಳು ಶ್ರಮ ಪಟ್ಟು ಪರೀಕ್ಷೆಗೆ ತಯಾರಿ ನಡೆಸಿದ ಅಭ್ಯರ್ಥಿಗಳ ಭವಿಷ್ಯ ಇವತ್ತು ಕಾಂಗ್ರೆಸ್ ಸರ್ಕಾರದ ಎಡವಟ್ಟಿನಿಂದ ಕತ್ತಲೆಯಾಗಿದೆ.
ಇಂತಹ ಪರಿಸ್ಥಿತಿಯಲ್ಲಿ ಅಭ್ಯರ್ಥಿಗಳು ಬೇರೆ ದಾರಿ ಇಲ್ಲದೆ ಹೋರಾಟದ ಹಾದಿ ಹಿಡಿದಿದ್ದಾರೆ. ಸರ್ಕಾರ ಮತ್ತೊಮ್ಮೆ ದೋಷರಹಿತವಾಗಿ ಮರುಪರೀಕ್ಷೆ ನಡೆಸಬೇಕು ಅಥವಾ ಮುಖ್ಯಪರೀಕ್ಷೆಗೆ ಹಾಲಿ ಇರುವ 1:15 ಅನುಪಾತದ ಬದಲು 1:50 ಅನುಪಾತದಲ್ಲಿ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಸರ್ಕಾರ ಅಭ್ಯರ್ಥಿಗಳನ್ನು ಕರೆಸಿ ಮಾತನಾಡಬೇಕಿತ್ತು. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕಿತ್ತು. ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡುತ್ತೇವೆ, ಪ್ರಾಮಾಣಿಕ ಅಭ್ಯರ್ಥಿಗಳನ್ನು ಕೈಬಿಡುವುದಿಲ್ಲ ಎಂದು ಆಶ್ವಾಸನೆ ಕೊಟ್ಟು ಮನವೊಲಿಸಬೇಕಾಗಿತ್ತು. ಆದರೆ ಸರ್ಕಾರ ಇವ್ಯಾವುದೂ ಮಾಡಿಲ್ಲ. ಎರಡೆರಡು ಬಾರಿ ಎಡವಟ್ಟು ಮಾಡಿದ್ದರೂ ತಪ್ಪೇ ನಡೆದಿಲ್ಲ ಎನ್ನುವಂತಿದೆ ಈ ಕಾಂಗ್ರೆಸ್ ಸರ್ಕಾರದ ಧೋರಣೆ ಎಂದು ಹೇಳಿದರು.












Click it and Unblock the Notifications