ಸಿದ್ದರಾಮಯ್ಯ ಬಜೆಟ್ : ಯಾರು, ಏನು ಹೇಳಿದರು?
ಬೆಂಗಳೂರು, ಮಾ. 14 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 10ನೇ ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಸಿಎಂ ಆಗಿ ಮೂರು ಬಾರಿ ಮತ್ತು ಹಣಕಾಸು ಸಚಿವರಾಗಿ ಏಳು ಬಾರಿ ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯ ಸಮಬಾಳು ಸಮಪಾಲು ಎಂಬ ಮಂತ್ರ ಜಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು 2015-16ನೇ ಸಾಲಿನಲ್ಲಿ 1,42, 534 ಕೋಟಿ ರೂ. ಬಜೆಟ್ ಮಂಡನೆ ಮಾಡಿದ್ದಾರೆ. ಪ್ರತಿಪಕ್ಷಗಳು ಬಜೆಟ್ ಜನಸಾಮಾನ್ಯರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ದೂರಿದ್ದರೆ, ಸಚಿವರು ಇದೊಂದು ಉತ್ತಮವಾದ ಬಜೆಟ್ ಎಂದು ಶ್ಲಾಘಿಸಿದ್ದಾರೆ. [ಕರ್ನಾಟಕ ಬಜೆಟ್ ಮುಖ್ಯಾಂಶಗಳು]
ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ದೂರದೃಷ್ಟಿ ಹೊಂದಿದೆ. ಎಲ್ಲಾ ಕ್ಷೇತ್ರಗಳಿಗೆ ಸಮಗ್ರವಾಗಿ ಅನುದಾನ ನೀಡಲಾಗಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಹೇಳಿದ್ದಾರೆ.[ಬಜೆಟ್ : ಕನ್ನಡ ದಿನಪತ್ರಿಕೆಗಳ ಶೀರ್ಷಿಕೆ ಹೀಗಿದೆ]
ಮುಖ್ಯಮಂತ್ರಿಯಾಗಿ ಮೂರನೇ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ನಿರಾಸೆ ಉಂಟುಮಾಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ 2015-16ನೇ ಸಾಲಿನ ಬಜೆಟ್ ಬಗ್ಗೆ ಮಾತನಾಡಿದ್ದು, ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಯಾವುದೇ ರೀತಿಯ ಸಹಕಾರ ನೀಡಿಲ್ಲ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಬಜೆಟ್ಗೆ ಎರಡು ಅಂಕ ಕೊಡುತ್ತೇನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ ಬಜೆಟ್ಗೆ 10 ಅಂಕಗಳಿಗೆ ಎರಡು ಅಂಕಗಳನ್ನು ನೀಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರು ನಗರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬಹುದಿತ್ತು, ಮಹಿಳಾ ಸುರಕ್ಷತೆ ಮತ್ತು ನೀರಾವರಿಗೆ ನೀಡಿದ ಆದ್ಯತೆ ಕಡಿಮೆಯಾಗಿದೆ ಎಂದು ಜಗದೀಶ್ ಶೆಟ್ಟರ್ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಜನರ ಮೇಲೆ ಕೋಟಿ-ಕೋಟಿ ಸಾಲ ಹೇರಿದ್ದಾರೆ
ಹತ್ತು ಬಾರಿ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಮೇಲೆ ಕೋಟಿ-ಕೋಟಿ ಸಾಲದ ಹೊರೆ ಹಾಕಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಾರಿಯ ಬಜೆಟ್ ನೋಡಿದರೆ ಸಿದ್ದರಾಮಯ್ಯ ಹತ್ತು ಬಾರಿ ಬಜೆಟ್ ಮಂಡನೆ ಮಾಡಿದ್ದಾರೆಯೇ? ಎಂಬ ಅನುಮಾನ ಕಾಡುತ್ತಿದೆ ಎಂದು ಎಚ್ಡಿಕೆ ಹೇಳಿದ್ದಾರೆ.

ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದಾರೆ
ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಬಜೆಟ್ನಲ್ಲಿ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬಜೆಟ್ನಲ್ಲಿ ಎಲ್ಲಾ ಕ್ಷೇತ್ರಗಳಿಗೆ ಅನುದಾನ ನೀಡಲಾಗಿದೆ. ಬಜೆಟ್ನಲ್ಲಿ ಪಕ್ಷ ಜನರಿಗೆ ನೀಡಿದ್ದ ಆಶ್ವಾಸನೆಯನ್ನು ಈಡೇರಿಸುವ ಪ್ರಯತ್ನವನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಅವರದ್ದು 50-50 ಬಜೆಟ್
ಸಿದ್ದರಾಮಯ್ಯ ಅವರು ಮಂಡನೆ ಮಾಡಿದ್ದು 50-50 ಬಜೆಟ್ ಎಂದು ಶಾಸಕ ಮತ್ತು ರೈತ ಸಂಘದ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದ ಜಲ್ವಂತ ಸಮಸ್ಯೆಗಳನ್ನು ನಿವಾರಣೆ ಮಾಡುವುದಕ್ಕೆ ಸರ್ಕಾರ ಗಮನಹರಿಸಿಲ್ಲ. ಆದರೆ, ಸಾಮಾಜಿಕ ನ್ಯಾಯವನ್ನು ಅವರು ಕಾಡಿದ್ದಾರೆ ಎಂದು ಪುಟ್ಟಣ್ಣಯ್ಯ ತಿಳಿಸಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಪೂರಕವಾಗದ ಬಜೆಟ್
ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ ಬಜೆಟ್ ರಾಜ್ಯದ ಅಭಿವೃದ್ಧಿಗೆ ನೆರವಾಗುವುದಿಲ್ಲ. ಕಳೆದ ಸಾಲಿನಲ್ಲೂ ಇದೇ ರೀತಿಯ ಅನೇಕ ಕಾರ್ಯಕ್ರಮಗಳನ್ನು ಘೋಷಿಸಿದ್ದ ಅವರು ಅದರ ಅನುಷ್ಠಾನದಲ್ಲಿ ವಿಫಲವಾಗಿದ್ದಾರೆ. ಜನರ ದಿನನಿತ್ಯದ ಅವಶ್ಯಕವಾದ ಸೇವೆಗಳ ನೀಡುವಿಕೆಯಲ್ಲಿ ಆಡಳಿತ ಸುಧಾರಣೆ ಅತಿ ಅಗತ್ಯವಾಗಿದ್ದು, ಈ ಬಗ್ಗೆ ಯಾವುದೇ ರೀತಿಯ ಯೋಜನೆಗಳಾಗಲಿ ಅಥವಾ ಮುಂದಾಲೋಚನೆಯಾಗಲಿ ಈ ಬಜೆಟ್ನಲ್ಲಿ ಕಾಣಿಸುತ್ತಿಲ್ಲ ಎಂದು ಲೋಕಸತ್ತಾ ಪಕ್ಷದ ಕರ್ನಾಟಕ ಘಟಕದ ಕಾರ್ಯದರ್ಶಿ ದೀಪಕ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಸಿಎಂ ರಾಜ್ಯದ ಜನರಿಗೆ ನಿರಾಸೆ ಮಾಡಿದ್ದಾರೆ
ಸಿಎಂ ಆಗಿ ಮೂರನೇಬಾರಿ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ನಿರಾಸೆ ಉಂಟುಮಾಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ರಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಮಾಡುವುದು ಹಾಗಿರಲಿ, ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸಹಾಯವನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ. [ಯಡಿಯೂರಪ್ಪ ಹೇಳಿದ್ದೇನು]












Click it and Unblock the Notifications