ಕರ್ನಾಟಕ ಬಜೆಟ್; ಉತ್ತರ ಕರ್ನಾಟಕಕ್ಕೆ ಯಡಿಯೂರಪ್ಪ ಕೊಡುಗೆ
ಬೆಂಗಳೂರು, ಮಾರ್ಚ್ 05 : ಉತ್ತರ ಕರ್ನಾಟಕ ಭಾಗದ ಮಹತ್ವದ ಯೋಜನೆಯಾದ ಮಹದಾಯಿಗೆ ರಾಜ್ಯ ಸರ್ಕಾರ 500 ಕೋಟಿ ರೂ.ಗಳನ್ನು ಘೋಷಣೆ ಮಾಡಿದೆ. ಈಗಾಗಲೇ ಕೇಂದ್ರ ಸರ್ಕಾರ ಯೋಜನೆಗೆ ಅಧಿಸೂಚನೆಯನ್ನು ಪ್ರಕಟಿಸಿದೆ.
ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಗುರುವಾರ 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಕರ್ನಾಟಕ ರಾಜ್ಯದ ಈ ಬಾರಿಯ ಬಜೆಟ್ ಗಾತ್ರ 2 ಲಕ್ಷದ 37 ಸಾವಿರ ಕೋಟಿ ರೂ. ಆಗಿದೆ.
ಬಜೆಟ್ನಲ್ಲಿ ಯಡಿಯೂರಪ್ಪ ಮಹದಾಯಿ ಯೋಜನೆಗೆ 500 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದರು. ಯೋಜನೆಗೆ ಈಗಾಗಲೇ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಆದರೆ, ಕಾಮಗಾರಿ ಆರಂಭಿಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಮಹದಾಯಿ ಯೋಜನೆ ವಿಚಾರದಲ್ಲಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರಗಳ ನಡುವೆ ವಿವಾದವಿದೆ. ವಿವಾದದ ಕುರಿತು ವಿಚಾರಣೆ ನಡೆಸಿದ್ದ ಮಹದಾಯಿ ನ್ಯಾಯಾಧೀಕರಣ 2018ರಲ್ಲಿ ತನ್ನ ಅಂತಿಮ ತೀರ್ಪನ್ನು ನೀಡಿತ್ತು.
ಕರ್ನಾಟಕಕ್ಕೆ ನ್ಯಾಯಾಧೀಕರಣ 13.42 ಟಿಎಂಸಿ ಅಡಿ ನೀರನ್ನು ಹಂಚಿಕೆ ಮಾಡಿತ್ತು. ಗೋವಾಕ್ಕೆ 24 ಟಿಎಂಸಿ ಅಡಿ, ಮಹರಾಷ್ಟ್ರಕ್ಕೆ 1.30 ಟಿಎಂಸಿ ಅಡಿ ನೀರನ್ನು ಹಂಚಿಕೆ ಮಾಡಲಾಗಿತ್ತು.
ಮಹದಾಯಿ ಯೋಜನೆ ಅಡಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತದೆ. ಈ ಯೋಜನೆಗೆ ಗೋವಾ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.












Click it and Unblock the Notifications