ಉಚಿತ ಬಸ್ ಪಾಸ್: ಬಿ.ಎಸ್.ವೈ ಬಜೆಟ್ ನಲ್ಲಿ ಹೆಣ್ಮಕ್ಕಳಿಗೆ ಸಿಹಿ ಸಿಕ್ತು ಗುರು!
ಬೆಂಗಳೂರು, ಮಾರ್ಚ್ 05: ಪ್ರಸಕ್ತ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ್ದಾರೆ. ಹಣಕಾಸು ಸಚಿವರು ಕೂಡ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ.
ಕರ್ನಾಟಕ ರಾಜ್ಯದ ಈ ಬಾರಿಯ ಬಜೆಟ್ ಗಾತ್ರ 2 ಲಕ್ಷದ 37 ಸಾವಿರ ಕೋಟಿ ರೂಪಾಯಿ ಆಗಿದೆ. ಅದರಲ್ಲಿ ಮಹಿಳೆಯರ ಕಲ್ಯಾಣಕ್ಕಾಗಿ 37,783 ಕೋಟಿ ರೂಪಾಯಿಗಳ 953 ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೀಸಲಿಟ್ಟಿದ್ದಾರೆ. ಇದು ಒಟ್ಟಾರೆ ಆಯವ್ಯಯ ಗಾತ್ರದ ಶೇ.15.88 ರಷ್ಟು ಆಗಿರುತ್ತದೆ.
ಮಹಿಳೆಯರ ಒಳಿತಿಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಲವು ಕಾರ್ಯಕ್ರಮಗಳನ್ನು ನಿಗದಿ ಮಾಡಿದ್ದಾರೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ, ಓದಿರಿ...

ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್
* ಅಂಧ ತಾಯಂದಿರಿಗೆ ನೀಡುವ ಮಾಸಿಕ 2000 ರೂಪಾಯಿ ಶಿಶುಪಾಲನಾ ಭತ್ಯೆ ಯೋಜನೆ ಮಗುವಿನ ಮೊದಲ ಎರಡು ವರ್ಷಗಳಿಂದ ಐದು ವರ್ಷದ ವರೆಗೆ ವಿಸ್ತರಣೆ.
* 'ವನಿತಾ ಸಂಗಾತಿ' ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂಪಾಯಿ ಅನುದಾನ.
* 'ಮಹಿಳಾ ಮೀನುಗಾರರ ಸಬಲೀಕರಣ' ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂಪಾಯಿ ಅನುದಾನ.

ಮಹಿಳೆಯರ ಸುರಕ್ಷತೆಗೆ ಆಪ್
* ಬೆಂಗಳೂರು ಮಹಿಳೆಯರ ಸುರಕ್ಷತೆಗಾಗಿ ಅಭಿವೃದ್ಧಿ ಪಡಿಸಿರುವ ‘ಸುರಕ್ಷಾ ಆಪ್' ರಾಜ್ಯಾದ್ಯಂತ ವಿಸ್ತರಣೆ. ತುರ್ತು ಸ್ಪಂದನಾ ವಾಹನಗಳ ಮೂಲಕ ಮಹಿಳೆಯರ ರಕ್ಷಣೆಗೆ ಕ್ರಮ.
* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿಯಲ್ಲಿ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಸುಧಾರಣಾ ಸಂಸ್ಥೆಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್. ಇದಕ್ಕಾಗಿ ಐದು ಕೋಟಿ ರೂಪಾಯಿ ಅನುದಾನ.
* ಸ್ತ್ರೀಶಕ್ತಿ ಸ್ವ-ಸಹಾಯ ಸಂಘದ ಉತ್ಪನ್ನಗಳನ್ನು ಸರ್ಕಾರದ ಇಲಾಖೆಗಳಲ್ಲಿ ಅವಶ್ಯಕತೆಗನುಸಾರ ಖರೀದಿಸಲು ಕ್ರಮ.

ಬಡ್ಡಿ ರಹಿತ ಕಿರು ಸಾಲ ಸೌಲಭ್ಯ
* ನೆರೆಹಾವಳಿಯಿಂದ ಹಾನಿಯಾದ 842 ಅಂಗನವಾಡಿ ಕೇಂದ್ರಗಳ ಪುನರ್ ನಿರ್ಮಾಣಕ್ಕೆ 138 ಕೋಟಿ ರೂಪಾಯಿ.
* ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಮಹಿಳಾ ಪೂರಕ ಪೌಷ್ಟಿಕ ಉತ್ಪಾದನಾ ಕೇಂದ್ರಗಳ ಆಧುನೀಕರಣಕ್ಕೆ ಮಹಿಳಾ ಅಭಿವೃದ್ಧಿ ನಿಗಮದಿಂದ 20 ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಕಿರು ಸಾಲ ಸೌಲಭ್ಯ. 20 ಕೋಟಿ ರೂಪಾಯಿ ಅನುದಾನ.
* ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಟ್ರಾನ್ಸ್ ಜೆಂಡರ್ ರವರ ಮೂಲಹಂತದ (Base line) ಸಮೀಕ್ಷೆ ಕೈಗೊಳ್ಳಲು 70 ಲಕ್ಷ ರೂಪಾಯಿ ಅನುದಾನ.

ಮಹಿಳಾ ಸುರಕ್ಷತಾ ಪೋರ್ಟಲ್
* ಬಾಲಮಂದಿರದಿಂದ 21 ವರ್ಷ ತುಂಬಿದ ನಂತರ ಬಿಡುಗಡೆ ಹೊಂದುವವರಿಗೆ ಜೀವನೋಪಾಯ ರೂಪಿಸಿಕೊಳ್ಳಲು 'ಉಪಕಾರ' ಯೋಜನೆಯಡಿ ಮೂರು ವರ್ಷ ಅವಧಿಗೆ ಮಾಸಿಕ 5000 ರೂಪಾಯಿ ಆರ್ಥಿಕ ನೆರವು. ಕೌಶಲ್ಯಾಭಿವೃದ್ಧಿ ತರಬೇತಿಗೆ ಕ್ರಮ. ಒಂದು ಕೋಟಿ ರೂಪಾಯಿ ಅನುದಾನ.
* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಕಾರ್ಯಕ್ರಮಗಳನ್ನು ಪಾರದರ್ಶಕವಾಗಿ ಮಹಿಳೆಯರಿಗೆ ತಲುಪಿಸಲು ಮಹಿಳಾ ಸುರಕ್ಷತಾ ಪೋರ್ಟಲ್ ಪ್ರಾರಂಭ.
* ಬೆಂಗಳೂರಿನಲ್ಲಿರುವ ಆಯ್ದ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸ್ನೇಹಿ ವಾತಾವರಣವನ್ನು ನಿರ್ಮಿಸಲು ಮಕ್ಕಳ ಪಾಲನಾ ಕೇಂದ್ರಗಳು, ಸ್ಯಾನಿಟರಿ ನ್ಯಾಪ್ ಕಿನ್ ಡಿಸ್ಪೆನ್ಸರ್ ಮತ್ತು ಇತರೆ ಸೌಲಭ್ಯಗಳನ್ನು ಹೊಂದಿರುವ ಮಹಿಳಾ ವಿಶ್ರಾಂತಿ ಕೋಣೆಗಳನ್ನು 'ಬೆಂಗಳೂರು ಸ್ಮಾರ್ಟ್ ಸಿಟಿ' ಯೋಜನೆಯಡಿ ತರಲಾಗುವುದು.
* ಪೊಲೀಸ್ ತರಬೇತಿ ಶಾಲೆಗಳಲ್ಲಿ ಹಾಗೂ ಸಿ.ಎ.ಆರ್.ಡಿ.ಎ.ಆರ್. ಕೇಂದ್ರ ಸ್ಥಾನಗಳಲ್ಲಿ ರಿಯಾಯಿತಿ ದರದಲ್ಲಿ ಮಹಿಳೆಯರಿಗೆ ಸ್ವಯಂ ರಕ್ಷಣೆ ತರಬೇತಿ












Click it and Unblock the Notifications