ಶುಕ್ರವಾರ 12.30ಕ್ಕೆ ಬಜೆಟ್ ಮಂಡಿಸಲಿದ್ದಾರೆ ಬೊಮ್ಮಾಯಿ
ಬೆಂಗಳೂರು, ಮಾರ್ಚ್ 03; ಮುಖ್ಯಮಂತ್ರಿಯಾಗಿ ಆರು ತಿಂಗಳ ಅವಧಿ ಪೂರ್ಣಗೊಳಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲು ಸಿದ್ಧವಾಗಿದ್ದಾರೆ. ಶುಕ್ರವಾರ ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ. ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಇರುವುದರಿಂದ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇದೆ.
ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ನಲ್ಲಿ 5 ಕ್ಷೇತ್ರಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಇದೆ. ಕೃಷಿ, ರೈತರ ಕಲ್ಯಾಣ ಮತ್ತು ನಡೆಯುತ್ತಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಹೆಚ್ಚಿನ ಗಮನಹರಿಸುವ ಸಾಧ್ಯತೆ ಇದೆ.

ಸಂಪನ್ಮೂಲ ಕ್ರೋಢಿಕರಣ, ಹೊಸ ಯೋಜನೆಗಳ ಘೋಷಣೆ ಬಸವರಾಜ ಬೊಮ್ಮಾಯಿ ಮುಂದಿರುವ ಸವಾಲುಗಳು. ಕೋವಿಡ್ ಪರಿಸ್ಥಿತಿ, ಲಾಕ್ ಡೌನ್ ಕಾರಣದಿಂದಾಗಿ ರಾಜ್ಯದ ಆರ್ಥಿಕತೆ ಈಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಬಜೆಟ್ ಮಂಡಿಸಬೇಕಿದೆ.
ಜನರ ಮೇಲೆ ತೆರಿಗೆ ಭಾರವನ್ನು ಹಾಕದೇ, ಬಸ್ ಸೇರಿದಂತೆ ಯಾವುದೇ ಸಾರಿಗೆಗಳ ದರ ಏರಿಕೆ ಮಾಡದೇ, ವಿದ್ಯುತ್ ಸೇರಿದಂತೆ ಇತರ ದರಗಳನ್ನು ಏರಿಕೆ ಮಾಡದೇ ಸಂಪನ್ಮೂಲ ಕ್ರೋಢಿಕರಣಕ್ಕೆ ಬಜೆಟ್ನಲ್ಲಿ ಹಣಕಾಸು ಸಚಿವರು ಆದ್ಯತೆ ನೀಡಬೇಕಿದೆ.
5 ಕ್ಷೇತ್ರಗಳಿಗೆ ಆದ್ಯತೆ; ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ನಲ್ಲಿ ನೀರಾವರಿ, ಕೃಷಿ, ಲೋಕೋಪಯೋಗಿ, ಸಮಾಜ ಕಲ್ಯಾಣ, ಗ್ರಾಮೀಣಾಭೀವೃದ್ಧಿ ಕ್ಷೇತ್ರಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಇದೆ. ಅದರಲ್ಲೂ ರಾಜ್ಯದ ನೀರಾವರಿ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಹೋರಾಟ ಮಾಡುತ್ತಿವೆ. ಆದ್ದರಿಂದ ಈ ವಲಯಕ್ಕೆ ಆದ್ಯತೆ ನೀಡುವ ಅನಿವಾರ್ಯತೆ ಎದುರಾಗಿದೆ.
ಬಸವರಾಜ ಬೊಮ್ಮಾಯಿ ಉತ್ತರ ಕರ್ನಾಟಕ ಭಾಗಕ್ಕೆ ಸೇರಿದ ನಾಯಕರು. ಆದ್ದರಿಂದ ಬಜೆಟ್ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹಲವು ಕೊಡುಗೆಗಳನ್ನು ನಿರೀಕ್ಷೆ ಮಾಡಲಾಗಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಗಮನಹರಿಸುವ ಸಾಧ್ಯತೆ ಇದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಹಲವು ಯೋಜನೆಗಳು ನಡೆಯುತ್ತಿವೆ. ಈ ಯೋಜನೆಗಳಿಗೆ ಬಜೆಟ್ನಲ್ಲಿ ಅನುದಾನ ಮೀಸಲಿಡಬೇಕಿದೆ. ಇದರ ಜೊತೆಗೆ ರಾಜ್ಯದಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡಬೇಕಿದೆ.
ಕರ್ನಾಟಕ ಬಜೆಟ್ನ ಗಾತ್ರ 2.50 ಲಕ್ಷ ಕೋಟಿ ದಾಟಲಿದೆ ಎಂದು ಅಂದಾಜಿಸಲಾಗಿದೆ. ಬಜೆಟ್ನಲ್ಲಿ ಯಾವ ಹೊಸ ಯೋಜನೆ ಘೋಷಣೆಯಾಗಲಿದೆ? ಎಂಬ ಕುರಿತು ಮುಖ್ಯಮಂತ್ರಿಗಳು ಸುಳಿವು ಬಿಟ್ಟುಕೊಟ್ಟಿಲ್ಲ. ಚುನಾವಣೆ ಹತ್ತಿರವಿರುವುದರಿಂದ ಬಜೆಟ್ ಮೇಲೆ ಅಪಾರವಾದ ನಿರೀಕ್ಷೆ ಇದೆ.
2018-19ರಲ್ಲಿ ರಾಜ್ಯದ ಒಟ್ಟು ಸಾಲ 2,92,220 ಕೋಟಿ ರೂ. ಇತ್ತು. 2020-21ನೇ ವರ್ಷದಲ್ಲಿ ಅದು 3,68,692 ಕೋಟಿಗೆ ಏರಿಕೆಯಾಗಿತ್ತು. 2021-22ನೇ ಸಾಲಿಗೆ ಇದು 4,57,899 ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿಗಳು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಹೌದು. ನಗರದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸನಿಹದಲ್ಲಿದೆ.
ಮತ್ತೊಂದು ಕಡೆ ಕರ್ನಾಟಕ ಸರ್ಕಾರ ಬಿಬಿಎಂಪಿ ವಾರ್ಡ್ಗಳ ಸಂಖ್ಯೆಯನ್ನು 198 ರಿಂದ 243ಕ್ಕೆ ಏರಿಕೆ ಮಾಡುತ್ತಿದೆ. ಈ ಕುರಿತ ಪ್ರಕ್ರಿಯೆಗಳು ಈಗಾಗಲೇ ಜಾರಿಯಲ್ಲಿವೆ. ಇದರಿಂದಾಗಿ ಬಿಬಿಎಂಪಿ ದೇಶದಲ್ಲೇ ಅತಿ ಹೆಚ್ಚು ವಾರ್ಡ್ ಹೊಂದಿರುವ ಪಾಲಿಕೆಯಾಗಲಿದೆ.
ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರುವ ಹಳ್ಳಿಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ನೀಡುವುದು ಅನಿವಾರ್ಯವಾಗಲಿದೆ. ಮೇ ಅಥವ ಜೂನ್ನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದೆ. ಚುನಾವಣೆ ನಡೆದ ಬಳಿಕ ಮೇಯರ್ ಅವಧಿ 1 ವರ್ಷದಿಂದ 30 ತಿಂಗಳಿಗೆ ವಿಸ್ತರಣೆಯಾಗಲಿದೆ.












Click it and Unblock the Notifications