ರಾಜ್ಯ ಬಜೆಟ್: ಕರ್ನಾಟಕದ 7 ಜಿಲ್ಲೆಗಳಲ್ಲಿ ಹೊಸ ಮಾದರಿ ವಿಶ್ವವಿದ್ಯಾಲಯ ಸ್ಥಾಪನೆ
ಬೆಂಗಳೂರು, ಮಾರ್ಚ್ 4: ಕರ್ನಾಟಕದ 2022-23ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ಏಳು ಜಿಲ್ಲೆಗಳಲ್ಲಿ ಹೊಸ ಮಾದರಿಯ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಶುಕ್ರವಾರ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ ಅವರು, ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹೊಸ ವಿಶ್ವವಿದ್ಯಾಲಯಗಳು ಆರಂಭವಾಗಲಿವೆ ಎಂದು ಹೇಳಿದರು. ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಮಾದರಿಯಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಕೆಐಟಿ) ಅನ್ನು ಸರ್ಕಾರ ನಿರ್ಮಿಸಲಿದೆ ಎಂದು ಬೊಮ್ಮಾಯಿ ಘೋಷಿಸಿದರು.
ಕರ್ನಾಟಕ ಬಜೆಟ್ - 2022: ಬೆಂಗಳೂರಿಗೆ ಸಿಕ್ಕಿದ್ದೇನು? ಹೈಲೆಟ್ಸ್
ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಕೃಷಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು. ಅಲ್ಲದೆ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ರೈತರ ಕಲ್ಯಾಣ ಪೀಠ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಮಧ್ಯಾಹ್ನದ ಅಡುಗೆ ತಯಾರಕರ ಮಾಸಿಕ ವೇತನ ಹೆಚ್ಚಳ:
ರಾಜ್ಯವು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮಾಜಗಳ "ಉದ್ಯೋಗ, ಶಿಕ್ಷಣ ಮತ್ತು ಸಬಲೀಕರಣ"ದ ಕಡೆಗೆ ಸರ್ಕಾರ ಹೆಚ್ಚು ಗಮನ ಹರಿಸುತ್ತಿದೆ. ಈ ನಿಟ್ಟಿನಲ್ಲಿ ಮಾಸಿಕ 3,000 ರೂಪಾಯಿ ವೇತನ ಪಡೆಯುವ ಮಧ್ಯಾಹ್ನದ ಊಟದ ಅಡುಗೆಯವರ ಗೌರವಧನವನ್ನು 1,000 ರೂಪಾಯಿ ಹೆಚ್ಚಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ ಯೋಜನೆಯಡಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್), ಜಂಟಿ ಪ್ರವೇಶ ರೀಕ್ಷೆ (ಜೆಇಇ) ಮುಖ್ಯ, ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಮತ್ತು ಅಂತಹುದೇ ಪರೀಕ್ಷೆಗಳಿಗೆ ಸ್ಪರ್ಧಿಸುವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ತರಬೇತಿ ನೀಡುತ್ತದೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯಗಳಿಗೆ ಸರ್ಕಾರ 750 ಕೋಟಿ ರೂಪಾಯಿ ಮತ್ತು ಕನಕದಾಸ ಹಾಸ್ಟೆಲ್ಗಳಿಗೆ 165 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಹಾಗೂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಬೆಂಚು, ಡೆಸ್ಕ್, ಇತರೆ ಪೀಠೋಪಕರಣಗಳ ಖರೀದಿಗೆ 100 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ಬಸವರಾಜರ ಬೊಮ್ಮಾಯಿ ತಿಳಿಸಿದ್ದಾರೆ.