Karnataka Budget 2023: ಐದು ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ಅನುದಾನ!
ಬಹುನಿರೀಕ್ಷಿತ ರಾಜ್ಯದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸಲು ಬಜೆಟ್ನಲ್ಲಿ 52,000 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕರ್ನಾಟಕದ ಜನತೆಗೆ ಪಂಚ ಗ್ಯಾರಂಟಿಗಳ ಭರವಸೆಯನ್ನು ನೀಡಿತ್ತು. ಅಧಿಕಾರಕ್ಕೆ ಬಂದ ಕೂಡಲೇ ಸರ್ಕಾರ ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೆ ತಾತ್ವಿಕ ಅನುಮೋದನೆ ನೀಡಿತು. ಈಗಾಗಲೇ ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಮೂಲಕ ತಮ್ಮ ಮೇಲಿರುವ ಜನರ ನಂಬಿಕೆಯನ್ನು ಹೆಚ್ಚಿಸಿದೆ.

ಇದೇ ವೇಳೆ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಶೀಘ್ರವೇ ಪ್ರಾರಂಭಿಸಲಾಗುವುದು. ಗೃಹಜ್ಯೋತಿ ಯೋಜನೆಯನ್ನು ಜುಲೈ ತಿಂಗಳಿನಿಂದ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ ತಿಂಗಳಿನಲ್ಲಿ ಜಾರಿಗೆ ತರುತ್ತೇವೆ. ಯುವನಿಧಿ ಯೋಜನೆಯು 2023ರಲ್ಲಿ ಪದವಿ ಪಡೆದ ಯುವಜನರಿಗಾಗಿ ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅನ್ನಭಾಗ್ಯದಡಿ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರದಿಂದ ಒದಗಿಸುತ್ತಿರುವ ಐದು ಕೆ.ಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರದಿಂದ ಒದಗಿಸುವ ಹೆಚ್ಚುವರಿ ಐದು ಕೆ.ಜಿ. ಸೇರಿದಂತೆ ಒಟ್ಟಾರೆ ೧೦ ಕೆ.ಜಿ ಆಹಾರ ಧಾನ್ಯವನ್ನು ಪ್ರತಿ ತಿಂಗಳು ವಿತರಿಸಲು ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳು ಕೇಂದ್ರ ಸರ್ಕಾರದ ವೈಫಲ್ಯದಿಂದ ಅನಿಯಂತ್ರಿತ ಬೆಲೆ ಏರಿಕೆಯಿಂದ ತತ್ತರಿಸುವ ಕುಟುಂಬಗಳಿಗೆ ತುಸು ನಿರಾಳತೆ ತಂದುಕೊಡುತ್ತವೆ. ಮಹಿಳೆಯರ ಓಡಾಟಕ್ಕೆ ಬೆಂಬಲ ನೀಡುವ ಶಕ್ತಿ ಯೋಜನೆಯು ಅವರಿಗೆ ಹಣ ಉಳಿತಾಯ ಮಾಡುವುದರೊಂದಿಗೆ ಮನೆಯಿಂದ ದೂರದ ಸ್ಥಳಗಳಲ್ಲಿಯೂ ಉದ್ಯೋಗ ಕಂಡುಕೊಳ್ಳಲು ನೆರವಾಗುತ್ತದೆ. ಅನ್ನಭಾಗ್ಯವು ಯಾರೂ ಹಸಿದುಕೊಂಡಿರಬಾರದೆಂಬುದನ್ನು ಖಾತರಿ ಪಡಿಸಿದರೆ, ಯುವನಿಧಿ, ಉದ್ಯೋಗಾಕಾಂಕ್ಷಿ ಯುವ ಜನರಿಗೆ ಮಾನಸಿಕ ಸ್ಥೈರ್ಯ ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಒಂದು ವರ್ಷದಲ್ಲಿ ಸುಮಾರು 52,000 ಕೋಟಿ ರೂ.ಗಳನ್ನು ಅಂದಾಜು 1.30 ಕೋಟಿ ಕುಟುಂಬಗಳಿಗೆ ತಲುಪಿಸುವುದರಿಂದ ಪ್ರತೀ ಕುಟುಂಬಕ್ಕೆ ಮಾಸಿಕ 4,000 ರಿಂದ 5,000 ರೂ.ಗಳಷ್ಟು, ಅಂದರೆ, ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಿದಂತಾಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ (Universal basic income) ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ ಎಂದರು.












Click it and Unblock the Notifications