Karnataka Budget 2023: ಬೆಂಗಳೂರಿಗೆ 45000 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ 7: ಡಿಕೆ ಶಿವಕುಮಾರ್ ನೇತೃತ್ವದ ಬ್ರಾಂಡ್ ಬೆಂಗಳೂರು ಉಪಕ್ರಮಕ್ಕೆ 45000 ಕೋಟಿ ಅನುದಾನ ಘೋಷಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಬಂಪರ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಅನೇಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಈ ಮೊತ್ತದ ಅನುದಾನ ಘೋಷಣೆ ಮಾಡಲಾಗಿದೆ. ಇದರೊಂದಿಗೆ ನಮ್ಮ ಮೆಟ್ರೋ ವೇಗ ಹೆಚ್ಚಿಸಲು ಸಹ ಅವರು ಕ್ರಮ ಕೈಗೊಂಡಿರುವ ಬಗ್ಗೆ ತಿಳಿಸಿದರು.

Karnataka Budget 2023: CM Siddaramaiah announced a grant of 45000 crores for Bengaluru

ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬೆಂಗಳೂರು ವೈಟ್‌ ಟಾಪಿಂಗ್, ರಸ್ತೆ ಅಭಿವೃದ್ಧಿ, ರಾಜಕಾಲುವೆ ತೆರವು ಹಾಗೂ ದುರಸ್ತಿಗೆ ಅನುದಾನ, ನಗರೋತ್ಥಾನ, ತಾಜ್ಯ ನಿರ್ವಹಣೆ ಹೀಗೆ ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ 45000 ಕೋಟಿ ಅನುದಾನವನ್ನು ನೀಡಲಾಗಿದೆ.

ಬೆಂಗಳೂರಿನಲ್ಲಿ 4-6 ಪಥದ 123 ಕಿ ಮೀ ಉದ್ದದ ಹೈಬ್ರಿಡ್ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಇದರೊಂದಿಗೆ ಮೆಟ್ರೋ ಮಾರ್ಗ ವಿಸ್ತರಣೆಗೆ ಯೋಜನೆ ಮಾಡಲಾಗಿದೆ. ನಮ್ಮ ಮೆಟ್ರೋ ಯೋಜನೆಗೆ ರೂ.30,000 ಕೋಟಿ ಬೆಂಗಳೂರು ನಮ್ಮ ಮೆಟ್ರೋ ಯೋಜನೆಗೆ 30 ಸಾವಿರ ಕೋಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ.

ಸಮಾಜ ಕಲ್ಯಾಣ ಇಲಾಖೆಗೆ ಸರ್ಕಾರ 11,179 ಘೋಷಿಸಿದೆ. ಕಲಬುರಗಿ ಮತ್ತು ಮೈಸೂರು ಜಿಲ್ಲೆಯಲ್ಲಿ ಟ್ರಾಮಾ ಸೆಂಟರ್‌ಗೆ ನಿರ್ಮಾಣಕ್ಕೆ 30 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಜೆಟ್ ನಲ್ಲಿ ರಾಜಧಾನಿ ಬೆಂಗಳೂರಿಗೆ ಬೊಂಪರ್ ಕೊಡಗೆ..

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಗರಾಭಿವೃದ್ಧಿಗೆ ವಿಶೇಷ ಆದ್ಯತೆಯನ್ನು ನೀಡಿ ಪ್ರಾರಂಭಿಸಿದ ನಗರೋತ್ಥಾನ, ಇಂದಿರಾ ಕ್ಯಾಂಟೀನ್‌ ನಂತಹ ಹಲವಾರು ಜನಪರ ಯೋಜನೆಗಳನ್ನು ನಿರ್ಲಕ್ಷಿಸುವ ಮೂಲಕ ಹಿಂದಿನ ಸರ್ಕಾರದ ಅವಧಿಯಲ್ಲಿ ನಗರಗಳ ಅಭಿವೃದ್ಧಿಯು ಕುಂಠಿತಗೊಂಡಿರುತ್ತದೆ.

ಅಲ್ಲದೇ, 2022-23ನೇ ಸಾಲಿಗೆ 45,000 ಕೋಟಿ ರೂ.ಗಳ ಅಪೂರ್ಣ ಕಾಮಗಾರಿಗಳ ಮತ್ತು ಬಾಕಿ ಮೊತ್ತದ ಹೊರೆಯನ್ನು ಹಿಂದಿನ ಸರ್ಕಾರ ನಮ್ಮ ಸರ್ಕಾರದ ಮೇಲೆ ಹೊರೆಸಿರುತ್ತದೆ. ಪ್ರಸ್ತುತ ಇರುವ ಆಯವ್ಯಯದ ಮಿತಿಯಲ್ಲಿ ಬಾಕಿ ಹೊರೆಯನ್ನು ತೀರಿಸಲು ಕನಿಷ್ಠ 6-8 ವರ್ಷಗಳ ಕಾಲಾವಕಾಶದ ಅಗತ್ಯತೆ ಇರುತ್ತದೆ. ಇದು ಅವರ ಅಶಿಸ್ತು ಮತ್ತು ಅವಿವೇಚನೆಗೆ ಹಿಡಿದ ಕನ್ನಡಿಯಾಗಿರುತ್ತದೆ. ಆದಾಗ್ಯೂ, ನಮ್ಮ ಸರ್ಕಾರ ನಗರಗಳ ಅಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಅಮೃತ ನಗರೋತ್ಥಾನ, ಹೈಡೆನ್ಸಿಟಿ ಕಾರಿಡಾರ್, ವೈಟ್‌ ಟಾಪಿಂಗ್‌ ರಸ್ತೆ, ತ್ಯಾಜ್ಯ ನಿರ್ವಹಣೆ, ರಾಜಕಾಲುವೆಗಳ ತೆರವು ಮತ್ತು ದುರಸ್ತಿ, ರಸ್ತೆ ಗುಂಡಿ ಮುಚ್ಚುವುದು ಮತ್ತಿತರ ಹಲವಾರು ಪ್ರಗತಿಯಲ್ಲಿರುವ ಯೋಜನೆಗಳಿಗೆ ಪ್ರಸ್ತುತ 12,000 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ವ್ಯಯಿಸಲಾಗುತ್ತಿದೆ.

ಇದಲ್ಲದೆ ಸಂಚಾರ ದಟ್ಟಣೆ ನಿವಾರಣೆಗಾಗಿ 30,000 ಕೋಟಿ ರೂ.ಗಳಿಗೂ ಹೆಚ್ಚಿನ ಅಂದಾಜು ವೆಚ್ಚದಲ್ಲಿ ನಮ್ಮ ಮೆಟ್ರೋ ಹಾಗೂ ಬೆಂಗಳೂರು ಉಪನಗರ ರೈಲು ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಗಳು ಪೂರ್ಣಗೊಳ್ಳಲು ಐದು ವರ್ಷಗಳ ಕಾಲಾವಕಾಶದ ಅಗತ್ಯವಿದೆ. ಇಷ್ಟು ಬೃಹತ್ ಮೊತ್ತದ ಕಾಮಗಾರಿಗಳು ಅನುಷ್ಠಾನಗೊಳ್ಳುತ್ತಿದ್ದರೂ ಹಿಂದಿನ ಸರ್ಕಾರದ ಮಿತಿ ಮೀರಿದ ಭ್ರಷ್ಟಾಚಾರ ಹಾಗೂ ಅಸಮರ್ಪಕ ನಿರ್ವಹಣೆಯ ಕಾರಣದಿಂದ ನಗರದ ಮೂಲ ಸೌಕರ್ಯಗಳಲ್ಲಿ ಗಮನಾರ್ಹ ಬದಲಾವಣೆ ಕಂಡು ಬಂದಿರುವುದಿಲ್ಲ ಎಂದು ಹೇಲಿದರು.

'ಬ್ರಾಂಡ್‌ ಬೆಂಗಳೂರುʼ ಪರಿಕಲ್ಪನೆ

'ಬ್ರಾಂಡ್‌ ಬೆಂಗಳೂರುʼ ಪರಿಕಲ್ಪನೆಯು ಬೆಂಗಳೂರು ನಗರದ ನಿವಾಸಿಗಳ ಸುರಕ್ಷತೆ ಹಾಗೂ ಅನುಕೂಲವನ್ನು ಕೇಂದ್ರಬಿಂದುವಾಗಿಸಿದೆ. ಈ ಪರಿಕಲ್ಪನೆಯು ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಸಾರ್ವಜನಿಕರ ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆ - ಈ ಒಂಬತ್ತು ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಮೂಲಕ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ನಮ್ಮ ಗುರಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಮೇಲ್ದರ್ಜೆಗೇರಿಸಲು 1,411 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸ್ವಂತ ಸಂಪನ್ಮೂಲದಿಂದ ಅನುಷ್ಠಾನಗೊಳಿಸಲು ಅನುಮೋದನೆ ನೀಡಿದ್ದು, ಮಾರ್ಚ್‌ 2026 ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಈ ಯೋಜನೆಗಳ ಮೂಲಕ ಬೆಂಗಳೂರಿನಲ್ಲಿ ಸುಸ್ಥಿರ ಜಲ ಮತ್ತು ಪರಿಸರ ಸಂರಕ್ಷಣೆಯಾಗಲಿದೆ ಎಂದರು.

ಮೆಟ್ರೋ ಮತ್ತು ರಸ್ತೆಗಳ ಸಂಪರ್ಕ

ನೈಋತ್ಯ ರೈಲ್ವೇ ಇಲಾಖೆಯವರು ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ನಿರ್ಮಿಸಿರುವ ಸರ್‌ ಎಂ.‌ ವಿಶ್ವೇಶ್ವರಯ್ಯ ಟರ್ಮಿನಲ್ ಅನ್ನು ತಲುಪಲು ಸರಿಯಾದ ಮೆಟ್ರೋ ಮತ್ತು ರಸ್ತೆಗಳ ಸಂಪರ್ಕ ಇಲ್ಲದೇ ಇರುವುದರಿಂದ ಲಕ್ಷಾಂತರ ಪ್ರಯಾಣಿಕರಿಗೆ ಅನಾನುಕೂಲ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗಿದೆ. ಈ ಸಮಸ್ಯೆಯ ನಿವಾರಣೆಗಾಗಿ ೨೬೩ ಕೋಟಿ ರೂ.ಗಳ ವೆಚ್ಚದಲ್ಲಿ ಒಂದು ಹೊಸ ಮೇಲ್ಸೇತುವೆಯನ್ನು ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಪದೇ ಪದೇ ದುರಸ್ತಿಗೆ ಮರುಕಳಿಸುವ ವೆಚ್ಚವನ್ನು ತಪ್ಪಿಸಲು ನಗರದ ರಸ್ತೆಗಳನ್ನು ವೈಟ್‌ ಟಾಪಿಂಗ್‌ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ನಮ್ಮ ಸರ್ಕಾರದಿಂದ 2016-17 ಮತ್ತು 2017-18ರಲ್ಲಿ ವೈಟ್‌ ಟಾಪಿಂಗ್‌ ರಸ್ತೆಗಳಾಗಿ ಅಭಿವೃದ್ಧಿಪಡಿಸಲಾದ 190 ಕಿ.ಮೀ. ರಸ್ತೆಗಳು ಇಂದಿಗೂ ಅತ್ಯುತ್ತಮ ಸ್ಥಿತಿಯಲ್ಲಿವೆ. ತದನಂತರ, ಹಿಂದಿನ ಸರ್ಕಾರ ಯಾವುದೇ ವೈಟ್‌ ಟಾಪಿಂಗ್‌ ಯೋಜನೆಯನ್ನು ಕೈಗೊಂಡಿರುವುದಿಲ್ಲ. ಈ ಯೋಜನೆಯನ್ನು ಪುನರಾರಂಭಿಸಿ 2023-24ನೇ ಸಾಲಿನಲ್ಲಿ 800 ಕೋಟಿ ರೂ. ವೆಚ್ಚದಲ್ಲಿ 100 ಕಿ.ಮೀ. ಉದ್ದದ ಮುಖ್ಯ ರಸ್ತೆಗಳನ್ನು ವೈಟ್‌ ಟಾಪ್ ರಸ್ತೆಗಳಾಗಿ‌ ಅಭಿವೃದ್ಧಿಪಡಿಸಲಾಗುವುದು ಎಂದರು.

ಬೆಂಗಳೂರು ನಗರದಲ್ಲಿರುವ ಹೆಚ್ಚಿನ ಸಂಚಾರ ದಟ್ಟಣೆಯನ್ನು ಹೊಂದಿರುವ 192 ಕಿ.ಮೀ. ಉದ್ದದ ವಿವಿಧ 12 ಪ್ರಮುಖ ರಸ್ತೆಗಳನ್ನು ಹೈ ಡೆನ್ಸಿಟಿ ಕಾರಿಡಾರ್‌ಗಳೆಂದು (High Density Corridor) 2016ರಲ್ಲಿ ಗುರುತಿಸಲಾಗಿರುತ್ತದೆ. ಈ ಪೈಕಿ 92 ಕಿ.ಮೀ. ಉದ್ದದ ರಸ್ತೆಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. 2023-24ನೇ ಸಾಲಿನಲ್ಲಿ 83 ಕಿ.ಮೀ. ಉದ್ದದ ರಸ್ತೆಗಳನ್ನು 273 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಬೆಂಗಳೂರು ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿವಾರಣೆಗಾಗಿ ರೂಪಿಸಿರುವ ಬೆಂಗಳೂರು ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ ಪ್ರಕ್ರಿಯೆಯು ಕಳೆದ 15 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಈ ಯೋಜನೆಗೆ ಎದುರಾದ ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಸರ್ವೋಚ್ಛ ನ್ಯಾಯಾಲಯದಿಂದ ದಿನಾಂಕ: 25.11.2021 ರಂದು ಅನುಮತಿ ದೊರಕಿದೆ. ಇದೀಗ ನಮ್ಮ ಸರ್ಕಾರವು ಎಲ್ಲಾ ಕಾನೂನಾತ್ಮಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತ್ವರಿತವಾಗಿ ಯೋಜನೆಯನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು

ಬೆಂಗಳೂರಿನಲ್ಲಿ ಮಳೆನೀರು ಸರಾಗವಾಗಿ ಹರಿಯದಿರಲು ರಾಜಕಾಲುವೆಗಳ ಒತ್ತುವರಿ ಪ್ರಮುಖ ಕಾರಣವಾಗಿದ್ದು, ಇದರಿಂದಾಗಿ ಪ್ರವಾಹ ಉಂಟಾಗುವುದಲ್ಲದೆ, ಮಳೆ ಬಂದಾಗ ರಸ್ತೆಗಳಲ್ಲಿ ನೀರು ನಿಂತು, ಮನೆಗಳಿಗೆ ನೀರು ನುಗ್ಗಿ ಅನಾಹುತಗಳು ಸಂಭವಿಸುತ್ತಿವೆ. ಈ ಸಮಸ್ಯೆಯನ್ನು ನಿವಾರಿಸಲು ಕಂದಾಯ ಇಲಾಖೆ ಗುರುತಿಸಿರುವ ಒತ್ತುವರಿಗಳನ್ನು ಆದ್ಯತೆ ಮೇಲೆ ತೆರವುಗೊಳಿಸಲಾಗುವುದು.

ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಸರ್ಕಾರ ಆದ್ಯತೆ

ಬೆಂಗಳೂರು ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ. ಬೆಂಗಳೂರು ನಗರದ 97 ಲಕ್ಷ ಟನ್‌ನಷ್ಟು ಹಳೆ ತ್ಯಾಜ್ಯವನ್ನು (legacy waste) ಜೈವಿಕ ಗಣಿಗಾರಿಕೆ ಮತ್ತು ಜೈವಿಕ ಪರಿಹಾರದ ಮೂಲಕ ಸಂಸ್ಕರಿಸಲಾಗುವುದು ಮತ್ತು ಮುಂದಿನ ಐದು ವರ್ಷಗಳ ಅವಧಿಯಲ್ಲಿ ಇಂತಹ 256 ಎಕರೆ ಭೂಮಿಯನ್ನು ಉದ್ಯಾನವನಗಳಾಗಿ ಪರಿವರ್ತಿಸಲಾಗುವುದು.

ಸುಮಾರು 5.7 ಲಕ್ಷ ಪ್ರಯಾಣಿಕರು ದಿನಂಪ್ರತಿ ಸಂಚರಿಸುವ 70 ಕಿ.ಮೀ. ಉದ್ದದ ಸಂಪರ್ಕ ಜಾಲವನ್ನು ಹೊಂದಿರುವ ನಮ್ಮ ಮೆಟ್ರೋ ರಾಷ್ಟ್ರದಲ್ಲಿಯೇ ಎರಡನೇ ಅತೀ ದೊಡ್ಡ ಮೆಟ್ರೋ ಸೇವೆಯಾಗಿರುತ್ತದೆ. 2024ರ ಅಂತ್ಯದ ವೇಳೆಗೆ ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರದವರೆಗೆ, ಕೆಂಗೇರಿಯಿಂದ ಚಲ್ಲಘಟ್ಟದವರೆಗೆ, ನಾಗಸಂದ್ರದಿಂದ ಮಾದಾವರದವರೆಗೆ, ಆರ್‌.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಒಟ್ಟು 27 ಕಿ.ಮೀ.ಗಳ ನೂತನ ಮಾರ್ಗಗಳನ್ನು ಪ್ರಾರಂಭಿಸಲಾಗುವುದು.

ಮುಂದಿನ ಮೂರು ವರ್ಷಗಳಲ್ಲಿ ಈಗಿರುವ ೭೦ ಕಿ.ಮೀ.ನ ಸಂಪರ್ಕಜಾಲವನ್ನು 176 ಕಿ.ಮೀ.ಗೆ ವಿಸ್ತರಿಸುವ ಮೂಲಕ ಮೆಟ್ರೊ ಕಾರ್ಯಾಚರಣೆಯ ಸಂಪರ್ಕ ಜಾಲವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗುವುದು. ಪ್ರಗತಿಯಲ್ಲಿರುವ ಏರ್‌ಪೋರ್ಟ್‌ ಲೈನ್‌ ಕಾಮಗಾರಿಯನ್ನು ಪೂರ್ಣಗೊಳಿಸಿ 2026 ರಲ್ಲಿ ಕಾರ್ಯಾರಂಭ ಮಾಡಲಾಗುವುದು.

ಇದಲ್ಲದೇ, ಮೆಟ್ರೋ 3ನೇ ಹಂತದಡಿ ಅಂದಾಜು 16,328 ಕೋಟಿ ರೂ. ವೆಚ್ಚದಲ್ಲಿ ಕೆಂಪಾಪುರದಿಂದ ಜೆ.ಪಿ. ನಗರ 4ನೇ ಹಂತದವರೆಗಿನ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಪಶ್ಚಿಮ ಓ.ಆರ್‌.ಆರ್‌. ಮಾರ್ಗವನ್ನು ಒಳಗೊಳ್ಳುವಂತಹ 45 ಕಿ.ಮೀ. ಉದ್ದದ ಮಾರ್ಗದ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ, 15,000 ಕೋಟಿ ರೂ. ಅಂದಾಜು ವೆಚ್ಚದ, ಹೆಬ್ಬಾಳದಿಂದ ಸರ್ಜಾಪುರದವರೆಗಿನ 37 ಕಿ.ಮೀ. ಉದ್ದದ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗುವುದು ಎಂದು ಮುಖ್ಯಮಮಥ್ರಿ ಸಿದ್ದರಾಮಯ್ಯ ಹೇಳಿದರು.

ಡಬಲ್‌ ಇಂಜಿನ್‌ ಸರ್ಕಾರವನ್ನು ಕುಟುಕಿದ ಸಿಎಂ

ಬೆಂಗಳೂರು ನಗರದ ಸುಗಮ ಸಂಚಾರಕ್ಕೆ ಪೂರಕವಾಗಿ ರೂಪಿಸಲಾಗಿರುವ ಬೆಂಗಳೂರು ಉಪ ನಗರ ರೈಲು ಯೋಜನೆಯನ್ನು ಜಾರಿಗೊಳಿಸಲು ಡಬಲ್‌ ಇಂಜಿನ್‌ ಎಂದು ಹೇಳಿಕೊಳ್ಳುವ ಹಿಂದಿನ ಸರ್ಕಾರವು ವಿಫಲವಾಗಿದೆ. ಈ ಯೋಜನೆಯ ಒಟ್ಟು ಮೊತ್ತ 15,767 ಕೋಟಿ ರೂ.ಗಳಾಗಿದ್ದು, ಕೇಂದ್ರ ಸರ್ಕಾರದ ಪಾಲು 3,242 ಕೋಟಿ ರೂ.ಗಳು, ರಾಜ್ಯ ಸರ್ಕಾರದ ಪಾಲು 5,087 ಕೋಟಿ ರೂ.ಗಳು ಮತ್ತು ಸಾಲದ (ಬಾಹ್ಯ ಮೂಲಗಳಿಂದ) ಮೊತ್ತ 7,438 ಕೋಟಿ ರೂ.ಗಳಾಗಿರುತ್ತದೆ.

ಸದರಿ ಯೋಜನೆಗೆ ಈವರೆಗೂ ಕೇಂದ್ರ ಸರ್ಕಾರವು 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರದಿಂದ 660 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿರುತ್ತದೆ. ಪ್ರಸ್ತುತ ಸಾಲಿನಲ್ಲಿ ಈ ಯೋಜನೆಗೆ ರಾಜ್ಯ ಸರ್ಕಾರವು 1,000 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ಪಾರಂಪರಿಕ ಮತ್ತು ದ್ರವ ತ್ಯಾಜ್ಯದ ಸಮರ್ಪಕ ನಿರ್ವಹಣೆ ಹಾಗೂ ಒಳಚರಂಡಿ ನೀರು ಸಂಸ್ಕರಿಸುವ ಆಧುನಿಕ ಪದ್ಧತಿಗಳನ್ನು ಅಳವಡಿಸುವ ಮೂಲಕ ನದಿಗಳು ಮತ್ತು ಕೆರೆಗಳಿಗೆ ಹರಿಯುವ ಮಾಲಿನ್ಯ ನಿಯಂತ್ರಿಸಲು 1,250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ಮತ್ತು ಇತರೇ ಪಟ್ಟಣಗಳಲ್ಲಿ 2,150 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 3,400 ಕೋಟಿ ರೂ.ಗಳ ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ 2.0 ಯೋಜನೆಯನ್ನು ವೆಚ್ಚ ಹಂಚಿಕೆ ಆಧಾರದಲ್ಲಿ ಜಾರಿಗೊಳಿಸಿದ್ದು, ಬಿ.ಬಿ.ಎಂ.ಪಿ. ಸೇರಿದಂತೆ ರಾಜ್ಯದ 314 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 4,500 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು 1,900 ಕೋಟಿ ರೂ. ಮತ್ತು ರಾಜ್ಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪಾಲು 2,600 ಕೋಟಿ ರೂ. ಗಳಾಗಿವೆ. ಈ ಯೋಜನೆಯಡಿಯಲ್ಲಿ ಸುಸ್ಥಿರ ಘನತ್ಯಾಜ್ಯ ನಿರ್ವಹಣೆ ಮತ್ತು ಬಳಸಿದ ನೀರಿನ ನಿರ್ವಹಣೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ನೀರು ಸರಬರಾಜು ಮತ್ತು ಜಲಮೂಲಗಳ ಸಂರಕ್ಷಣೆ

ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ರಾಜ್ಯದ ಒಂದು ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ 287 ಪಟ್ಟಣಗಳಲ್ಲಿ ನೀರು ಸರಬರಾಜು ಮತ್ತು ಜಲಮೂಲಗಳ ಸಂರಕ್ಷಣೆ ಕಾಮಗಾರಿ ಕೈಗೊಳ್ಳಲು 9,230 ಕೋಟಿ ರೂ. ಗಳ ಮೊತ್ತದಲ್ಲಿ ಯೋಜಿಸಲಾಗಿದೆ. ಈ ಅನುದಾನದಲ್ಲಿ ಕೇಂದ್ರ ಸರ್ಕಾರದ ಪಾಲು 4,615 ಕೋಟಿ ರೂ. ಗಳು, ರಾಜ್ಯ ಸರ್ಕಾರದ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪಾಲು 4,612 ಕೋಟಿ ರೂ. ಗಳಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ ಒಟ್ಟು 80೦ ಕೋಟಿ ರೂ. ಗಳನ್ನು ಒದಗಿಸಲಾಗಿದೆ.

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾರಿಗೆ ತಂದ ಇಂದಿರಾ ಕ್ಯಾಂಟೀನ್‌ ಯೋಜನೆಯು ನಗರ ಪ್ರದೇಶಗಳಲ್ಲಿ ಬಡವರು ಹಾಗೂ ಶ್ರಮಿಕರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ, ಉಪಾಹಾರ ಒದಗಿಸುವ ಮೂಲಕ ಅವರ ನೆಮ್ಮದಿಗೆ ಕಾರಣವಾಗಿತ್ತು. ಆದರೆ ಹಿಂದಿನ ಸರ್ಕಾರ ವಿವಿಧ ನೆಪಗಳೊಡ್ಡಿ, ಈ ಯೋಜನೆಯನ್ನು ಸ್ಥಗಿತಗೊಳಿಸಿ, ಬಡವರ ವಿರೋಧಿ ಕ್ರಮವನ್ನು ಅನುಸರಿಸಿತು.

ಇದೀಗ ಮೊದಲನೇ ಹಂತದಲ್ಲಿ (Phase-1) ಹೊಸ ಮೆನುವಿನೊಂದಿಗೆ, ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಬಿಬಿಎಂಪಿ ಹಾಗೂ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪುನರಾರಂಭ ಮಾಡಲಾಗುವುದು. ಎರಡನೇ ಹಂತದಲ್ಲಿ (Phase-2) ಎಲ್ಲಾ ಹೊಸ ಪಟ್ಟಣಗಳಲ್ಲಿ ಮತ್ತು ಬಿಬಿಎಂಪಿಯ ಹೊಸ ವಾರ್ಡ್‌ಗಳಲ್ಲಿ ಈ ಯೋಜನೆಯನ್ನು ವಿಸ್ತರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್‌ಗಳ ದುರಸ್ತಿ, ನವೀಕರಣ ಹಾಗೂ ನಿರ್ವಹಣೆಗೆ ರಾಜ್ಯ ಸರ್ಕಾರವು
100 ಕೋಟಿ ರೂ. ಒದಗಿಸಲಿದೆ.

ತ್ಯಾಜ್ಯ ಸಂಗ್ರಹಣೆ ಮತ್ತು ಸಂಸ್ಕರಣೆಯನ್ನು ಹೆಚ್ಚು ವೈಜ್ಞಾನಿಕವಾಗಿ ಮತ್ತು ಸುಸ್ಥಿರ ರೀತಿಯಲ್ಲಿ ವಿಲೇವಾರಿ ಮಾಡಲು ಬೆಂಗಳೂರು ಘನತಾಜ್ಯ ನಿರ್ವಹಣಾ ಸಂಸ್ಥೆಯ (BSWMCL) ಪರಿಣಾಮಕಾರಿ ಕಾರ್ಯಾಚರಣೆಗಾಗಿ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+