Karnataka Budget 2023: ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೊಡುಗೆಗಳೇನು?
ರಾಮನಗರದ ರಾಮದೇವರ ಬೆಟ್ಟದಲ್ಲಿ ಒಂದು ಭವ್ಯವಾದ ರಾಮಮಂದಿರವನ್ನು ನಿರ್ಮಿಸಲಾಗುವುದು.
ಬೆಂಗಳೂರು,ಫೆಬ್ರವರಿ17: ಕರ್ನಾಟಕದಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನ ಸಾಕಷ್ಟು ಅಭಿವೃದ್ದಿ ಪಡಿಸಬೇಕು ಎಂಬ ಕುರಿತು ಸಾಕಷ್ಟು ಬೇಡಿಕೆಗಳು ಸರ್ಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಬೊಮ್ಮಾಯಿ ಬಜೆಟ್ ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೊಡುಗೆಗಳೇನು?
1. ಶ್ರೀ ಆಂಜನೇಯ ಜನ್ಮಸ್ಥಳವೆಂದು ಪ್ರಸಿದ್ಧವಾದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಪ್ರವಾಸಿಗಳಿಗೆ ಮೂಲಸೌಕರ್ಯ ಒದಗಿಸಲು 100 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಒಳಗೊಂಡ ವಿಸ್ತೃತವಾದ ಯೋಜನೆಯನ್ನು ತಯಾರಿಸಿ, ಟೆಂಡರ್ ಕರೆಯಲಾಗಿದೆ.
2. ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾದ C.R.Z ಮಾನದಂಡಗಳನ್ನು ಸಡಿಲಗೊಳಿಸುವುದಕ್ಕೆ ಕೇಂದ್ರ ಸರ್ಕಾರವು ಒಪ್ಪಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ವಲಯ ನಿರ್ವಹಣೆ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಧಾರ್ಮಿಕ, ಸಾಹಸ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೂಪುರೇಷೆಗಳನ್ನು ತಯಾರಿಸಲಾಗುವುದು.

3. ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದ ʻಪ್ರಸಾದ್ʼ ಯೋಜನೆಯಡಿ ಮೈಸೂರು ನಗರದ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಹಾಗೂ ಸ್ವದೇಶ್ ದರ್ಶನ್ 2.0 ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಮತ್ತು ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಶಾಶ್ವತ ಸೌಲಭ್ಯಗಳ ಅಭಿವೃದ್ಧಿ ಯೋಜನೆಗಳನ್ನು ಮಂಜೂರು ಮಾಡಲಾಗಿದೆ.
4. ರಾಮನಗರದ ರಾಮದೇವರ ಬೆಟ್ಟದಲ್ಲಿ ಒಂದು ಭವ್ಯವಾದ ರಾಮಮಂದಿರವನ್ನು ನಿರ್ಮಿಸಲಾಗುವುದು.
5. ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕುರುಹುಗಳಿರುವ ತಾಣಗಳ ಪ್ರವಾಸಿ ಸರ್ಕಿಟ್ ಒಂದನ್ನು ಈ ವರ್ಷದಲ್ಲಿ ಪ್ರಾರಂಭಿಸಲಾಗುವುದು.

6. ಸಂತ ಸೇವಾ ಲಾಲ್ ರವರ ಜನ್ಮಸ್ಥಳವಾದ ದಾವಣಗೆರೆ ಜಿಲ್ಲೆಯ ಸೂರಗೊಂಡನಕೊಪ್ಪವನ್ನು ಅಭಿವೃದ್ಧಿಪಡಿಸಿ ಪ್ರವಾಸಿ ಸೌಲಭ್ಯವನ್ನು 5 ಕೋಟಿ ರೂ. ಗಳ ವೆಚ್ಚದಲ್ಲಿ ಕಲ್ಪಿಸಲಾಗುವುದು.
7. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯಲ್ಲಿರುವ ಷಹಾಜಿ ಮಹಾರಾಜ್ ಸಮಾಧಿ ಸ್ಥಳವನ್ನು 5 ಕೋಟಿ ರೂ. ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿ, ಮೂಲಸೌಲಭ್ಯ ಕಲ್ಪಿಸಲಾಗುವುದು.
8. ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ 12ನೇ ಶತಮಾನದಲ್ಲಿ ನಿರ್ಮಿಸಲಾದ ಐತಿಹಾಸಿಕ 101 ಕಂಬಗಳ ನಗರೇಶ್ವರ ದೇವಸ್ಥಾನದ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು.
9. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ರೋಪ್-ವೇ ನಿರ್ಮಾಣ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.
10. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 398 ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳಿಗೆ ಆಯವ್ಯಯದಲ್ಲಿ ಘೋಷಿಸಿದಂತೆ ನೀಡಲಾಗುತ್ತಿರುವ 2,000 ರೂ. ಪ್ರೋತ್ಸಾಹಧನವನ್ನು 5,000 ರೂ. ಗಳಿಗೆ ಹೆಚ್ಚಿಸಿ ಒಟ್ಟು 1.10 ಕೋಟಿ ರೂ. ನೀಡಲಾಗಿದೆ.
11. ಕರ್ನಾಟಕದ ಇತಿಹಾಸ ಮತ್ತು ಕಲೆಯ ಶ್ರೀಮಂತಿಕೆಯನ್ನು ಬಿಂಬಿಸುವ ಹಂಪಿಯ ವಿಜಯವಿಠಲ ದೇವಾಲಯ ಮತ್ತು ಪುರಂದರ ಮಂಟಪ, ವಿಜಯಪುರದ ಗೋಲ್ ಗುಂಬಜ್, ಚಿಕ್ಕಬಳ್ಳಾಪುರ ಜಿಲ್ಲೆಯ ಭೋಗನಂದೀಶ್ವರ ದೇವಾಲಯ, ಬಾದಾಮಿ ಗುಹೆಗಳು, ಕಿತ್ತೂರು ಹಾಗೂ ಬೀದರ್ ಕೋಟೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಈ ಸ್ಥಳಗಳಲ್ಲಿ ಅತ್ಯಾಧುನಿಕ ಬೆಳಕಿನ ವ್ಯವಸ್ಥೆ, 3D projection mapping, ಧ್ವನಿ ಮತ್ತು ಬೆಳಕು ಪ್ರದರ್ಶನಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ 2023-24 ರಲ್ಲಿ 60 ಕೋಟಿ ರೂ. ಗಳನ್ನು ಒದಗಿಸಲಾಗುವುದು.
12. ರಾಜ್ಯದಲ್ಲಿನ ವಿವಿಧ ಸ್ಮಾರಕಗಳನ್ನು 3ಡಿ ಮ್ಯಾಪಿಂಗ್ ಮತ್ತು ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲೀಕರಿಸುವ ಕಾರ್ಯವನ್ನು ಪೂರ್ಣಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ್ದಾಗಿದೆ. Adopt a Monument ಯೋಜನೆಯಡಿ ಕೊಪ್ಪಳ ಜಿಲ್ಲೆಯ ಆನೆಗುಂದಿಯ ಗಗನ್ ಮಹಲ್ ಮತ್ತು ವಿಜಯಪುರ ನಗರದ ತಾಜ್ ಬಾವಡಿ ಸ್ಮಾರಕಗಳ ಸಂರಕ್ಷಣೆಗೆ ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗುತ್ತಿದೆ.
13. ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ ಕ್ರಮ ಕೈಗೊಳ್ಳಲಾಗುವುದು.
14. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿ ಎರಡೂವರೆ ಎಕರೆ ಜಾಗದಲ್ಲಿ ಅಂತರಾಷ್ಟ್ರೀಯ ಮಟ್ಟದ ರಾಜ್ಯ ವಸ್ತುಸಂಗ್ರಹಾಲಯ ಮತ್ತು ಕಲಾ ಗ್ಯಾಲರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
15. ಕಿತ್ತೂರು ಚೆನ್ನಮ್ಮ, ಉಳ್ಳಾಲದ ರಾಣಿ ಅಬ್ಬಕ್ಕ ಹಾಗೂ ಬೆಳವಡಿ ಮಲ್ಲಮ್ಮರ ಸಾಲಿಗೆ ಸೇರುವ ಮತ್ತೊಬ್ಬ ಧೀರ ವನಿತೆ ರಾಣಿ ಚೆನ್ನಭೈರಾದೇವಿ ಅವರ ಹೆಸರನ್ನು ಶಾಶ್ವತಗೊಳಿಸಲು ಹೊನ್ನಾವರದಲ್ಲಿ ʻಚೆನ್ನಭೈರಾದೇವಿ ಸ್ಮಾರಕ ಉದ್ಯಾನʼ ನಿರ್ಮಾಣ ಮಾಡಲಾಗುವುದು.
16. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮೂಲಕ ʻರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್ʼನಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೈಗೊಳ್ಳಲು ಮತ್ತು ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
17. ರಾಮನಗರ ಜಿಲ್ಲೆಯ ಮಂಚನಬೆಲೆ ಜಲಾಶಯದ ಹಿನ್ನೀರಿನಲ್ಲಿ 10 ಎಕರೆ ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ ಲಿ. ಮೂಲಕ ಒಂದು ರೆಸಾರ್ಟ್ ನಿರ್ಮಿಸಲಾಗುವುದು.
18. ಕರ್ನಾಟಕದ ಇತಿಹಾಸದ ಪ್ರಮುಖ ಘಟನಾವಳಿಗಳಲ್ಲಿ ತಾಳಿಕೋಟೆ ಯುದ್ಧವೂ ಸೇರಿದೆ. ಈ ಹಿನ್ನೆಲೆಯಲ್ಲಿ ರಕ್ಕಸಗಿ, ತಂಗಡಗಿ ಮತ್ತು ತಾಳಿಕೋಟೆ ಸುತ್ತಲಿನ ಐತಿಹಾಸಿಕ ಪ್ರಸಿದ್ಧ ತಾಣಗಳನ್ನು ಯುವಜನರಿಗೆ ಪರಿಚಯಿಸುವ ಉದ್ದೇಶದಿಂದ ಅಭಿವೃದ್ಧಿಪಡಿಸಲಾಗುವುದು.












Click it and Unblock the Notifications