Get Updates
Get notified of breaking news, exclusive insights, and must-see stories!

Karnataka Budget 2023: ಅಲ್ಪಸಂಖ್ಯಾತರ ಶಿಕ್ಷಣ, ಸ್ವಾವಲಂಬನೆಗೆ ಸಿದ್ದರಾಮಯ್ಯ ಆದ್ಯತೆ; ಭರಪೂರ ಕೊಡುಗೆ

ಬೆಂಗಳೂರು, ಜುಲೈ 07: ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯ ಬಜೆಟ್‌ ನಲ್ಲಿ ಅಲ್ಪ ಸಂಖ್ಯಾತರ ಶಿಕ್ಷಣ ಹಾಗೂ ಸ್ವಾವಲಂಬನೆಗೆ ಆದ್ಯತೆ ನೀಡಿದ್ದು, ಈ ನಿಟ್ಟಿನಲ್ಲಿ ಸಾಕಷ್ಟು ಅನುದಾನವನ್ನು ಮೀಸಲಿಟ್ಟಿದ್ದಾರೆ. ಅಲ್ಪ ಸಂಖ್ಯಾತರ ವಿದ್ಯಾರ್ಥಿ ವೇತನ, ಶಾಲೆಗಳ ಅಭಿವೃದ್ಧಿ, ಬ್ಯಾಂಕ್‌ ಸಾಲಕ್ಕೆ ಅಗತ್ಯ ಅನುದಾನವನ್ನ ಬಜೆಟ್‌ ನಲ್ಲಿ ಮೀಸಲಿದ್ದಾರೆ.

ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಈ ಸಮುದಾಯಗಳ ಜನರಿಗೆ ಶಿಕ್ಷಣ ಹಾಗೂ ಉದ್ಯೋಗದ ಅವಕಾಶಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕಲ್ಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Karnataka Budget 2023: Karnataka Budget 2023: Key Highlights for Minority in Kannada

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳು ಇಲ್ಲಿವೆ!

ರಾಜ್ಯದ 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು 6ನೇ ತರಗತಿಯಿಂದ 12ನೇ ತರಗತಿಯವರೆಗೆ Integrated ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದರಿಂದ 13,000 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಈ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 30 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಇದಲ್ಲದೇ, 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿಯನ್ನು ದ್ವಿಗುಣಗೊಳಿಸುವ ಮೂಲಕ ಹೆಚ್ಚುವರಿಯಾಗಿ 12,500 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು 23 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 10 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.

ರಾಜ್ಯದಲ್ಲಿ 200 ಮೌಲಾನಾ ಆಜಾದ್ ಶಾಲೆಗಳಿದ್ದು, ಈ ಶಾಲೆಗಳಲ್ಲಿ ಶೇ.75 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪೈಕಿ 22 ಶಾಲೆಗಳಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿರುತ್ತದೆ. ಮೌಲಾನಾ ಆಜಾದ್ ಶಾಲೆಗಳ ಉತ್ತಮ ಕಾರ್ಯನಿರ್ವಹಣೆಯನ್ನು ಗುರುತಿಸಿ, ಇವುಗಳ ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ಸ್ವಂತ ಕಟ್ಟಡ ಇಲ್ಲದೇ ಇರುವ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಅರಿವು ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ ಸಿ.ಇ.ಟಿ ಮೂಲಕ ಪ್ರವೇಶ ಪಡೆದ ಇಂಜಿನಿಯರಿಂಗ್‌, ವೈದ್ಯಕೀಯ ಮುಂತಾದ 28 ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಲು ಶೇ.2 ರ ಬಡ್ಡಿ ದರದಲ್ಲಿ ವಾರ್ಷಿಕ ಒಂದು ಲಕ್ಷ ರೂ.ಗಳವರೆಗೆ ಸಾಲ ಮಂಜೂರು ಮಾಡಲಾಗುವುದು. ಪ್ರಸಕ್ತ ಸಾಲಿನಲ್ಲಿ 75 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಕನ್ನಡ ಮತ್ತು ಆಂಗ್ಲ ಭಾಷಾ ಜ್ಞಾನವನ್ನು ಉತ್ತಮಪಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯಗಳನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿಯನ್ನು ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ NEET, JEE, CET ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ ಎರಡು ವರ್ಷಗಳ ತರಬೇತಿಯನ್ನು ನೀಡಲು ಎಂಟು ಕೋಟಿ ರೂ.ಗಳ ಅನುದಾನ ನೀಡಲಾಗುವುದು.

ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ಼್ ಭವನದಲ್ಲಿ ಅಲ್ಪಸಂಖ್ಯಾತರ ಯುವ ಜನರಿಗೆ 10 ತಿಂಗಳ ವಸತಿಸಹಿತ IAS/KAS ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಪ್ರಾರಂಭಿಸಲಾಗುವುದು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವದಲ್ಲಿ 250 ರೊಳಗೆ University Ranking ಹೊಂದಿರುವ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಪ್ರತಿ ವಿದ್ಯಾರ್ಥಿಗೆ 20 ಲಕ್ಷ ರೂ. ಸಾಲ ಸೌಲಭ್ಯ ಒದಗಿಸಲಾಗುವುದು.

ಅಲ್ಪ ಸಂಖ್ಯಾತ ನಿರುದ್ಯೋಗಿಗಳಿಗೆ ನೆರವು

ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ 10,000 ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಅವಕಾಶವನ್ನು ಕಲ್ಪಿಸುವ ಸಲುವಾಗಿ ಇವರುಗಳಿಗೆ ಬ್ಯಾಂಕ್‌ಗಳಿಂದ ಪಡೆಯುವ ಸಾಲ ಮೊತ್ತದ ಶೇ. 20 ರಷ್ಟು ಅಥವಾ ಗರಿಷ್ಠ ಒಂದು ಲಕ್ಷ ರೂ.ವರೆಗೆ ಸಹಾಯಧನವನ್ನು ನೀಡಲಾಗುವುದು.

ʻಸ್ವಾವಲಂಬಿ ಸಾರಥಿʼ ಯೋಜನೆಯಡಿ, ಅಲ್ಪಸಂಖ್ಯಾತ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಠ 3 ಲಕ್ಷ ರೂ.ಗಳ ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸಲಾಗುವುದು.

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ರಾಜ್ಯಾದ್ಯಂತ ನೂರಾರು ಶಾದಿ ಮಹಲ್‌ ಮತ್ತು ಸಮುದಾಯ ಭವನಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿತ್ತು. ಆದರೆ, ನಂತರದ ದಿನಗಳಲ್ಲಿಈ ಭವನಗಳನ್ನು ಪೂರ್ಣಗೊಳಿಸಿರುವುದಿಲ್ಲ. ಅಂತಹ 126 ಶಾದಿ ಮಹಲ್‌ ಮತ್ತು ಸಮುದಾಯ ಭವನಗಳ ನಿರ್ಮಾಣ ಕಾರ್ಯಗಳನ್ನು 54 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು.

ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಕರ್ನಾಟಕ ಇನಾಮ್‌ ರದ್ದಿಯಾತಿ ಅಧಿನಿಯಮದನ್ವಯ ನೀಡಲಾಗುತ್ತಿರುವ ತಸ್ತಿಕ್‌ ಮೊತ್ತವನ್ನು 48,000 ರೂ.ಗಳಿಂದ 60,000 ರೂ.ಗಳಿಗೆ ಹೆಚ್ಚಿಸಲಾಗುವುದು. ಇದರಿಂದ ತಸ್ತಿಕ್‌ ಪಡೆಯುತ್ತಿರುವ 868 ಸಂಸ್ಥೆಗಳಿಗೆ ಅನುಕೂಲವಾಗಲಿದೆ. ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಮತ್ತು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪ್ರಸಕ್ತ ಸಾಲಿನಲ್ಲಿ 36೦ ಕೋಟಿ ರೂ.ಗಳನ್ನು ಮೀಸಲಿಡಲಾಗುವುದು.

ಜೈನರ ಪ್ರಮುಖ ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು. ನಾಡಿನ ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಕ್ರಿಶ್ಚಿಯನ್‌ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ ನೀಡಲಾಗುವುದು. ರಾಜ್ಯದಲ್ಲಿ40,000 ಕ್ಕಿಂತಲೂ ಅಧಿಕ ವಕ್ಛ್‌ ಆಸ್ತಿಗಳಿದ್ದು, ಇವುಗಳ ಸಂರಕ್ಷಣೆ ಮತ್ತು ಅಭಿವೃದ್ದಿಗಾಗಿ 2023-24ನೇ ಸಾಲಿನಲ್ಲಿ 50 ಕೋಟಿ ರೂ. ಒದಗಿಸಲಾಗುವುದು.

ಹಲಸೂರಿನಲ್ಲಿರುವ ಗುರುದ್ವಾರದ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ ನೀಡಲಾಗಿದೆ. ಅದೇ ಮಾದರಿಯಲ್ಲಿ ಮೈಸೂರು, ಕಲಬುರಗಿ ಮತ್ತು ಹುಬ್ಬಳ್ಳಿಯಲ್ಲಿರುವ ಗುರುದ್ವಾರಗಳ ಅಭಿವೃದ್ಧಿಗೆ ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+