Karnataka Budget 2023: "ಕರಾವಳಿ" ಮೀನುಗಾರರಿಗೆ ಕೊಡುಗೆ ಏನು?, ಇಲ್ಲಿದೆ ವಿವರ ಗಮನಿಸಿ
ಬಸವರಾಜ ಬೊಮ್ಮಾಯಿ ಅವರು ಬಜೆಟ್ನಲ್ಲಿ ಕರಾವಳಿ ಭಾಗದ ಮೀನುಗಾರರಿಗೆ ಏನೆಲ್ಲ ಘೋಷಣೆ ಮಾಡಿದ್ದಾರೆ ಅನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬೆಂಗಳೂರು, ಫೆಬ್ರವರಿ 17: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ (ಫೆಬ್ರವರಿ 17) ರಾಜ್ಯ ಬಜೆಟ್ ಮಂಡಿಸಿದ್ದು, ಇದರಲ್ಲಿ ಕರಾವಳಿ ಮೀನುಗಾರರಿಗೆ ಏನು ಕೊಡುಗೆ ನೀಡಿದ್ದಾರೆ ಅನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ.
ರಾಜ್ಯದ 8 ಮೀನುಗಾರಿಕೆ ಬಂದರುಗಳ ನ್ಯಾವಿಗೇಷನ್ ಚಾನೆಲ್ಗಳಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಈಗಾಗಲೇ ಟೆಂಡರ್ಗಳನ್ನು ಕರೆಯಲಾಗಿದೆ. ಇದರಿಂದ ಮೀನಿಗಾರಿಕೆ ದೋಣಿಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ.
1. ಕರಾವಳಿಯ ಮೀನುಗಾರರ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು ನೀಡಲಾಗಿದೆ. ಕರಾವಳಿಯಲ್ಲಿ ಮೀನುಗಾರರ ದೋಣಿಗಳಿಗೆ ಜಿಪಿಎಸ್ ಅಳವಡಿಕೆ ಮಾಡಲಾಗುವುದು.
2. ಮುಂದಿನ ಆರ್ಥಿಕ ವರ್ಷದಲ್ಲಿ 10 ಸಾವಿರ ಮೀನುಗಾರರಿಗೆ ಸೂರು ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ.
3. ಮೀನುಗಾರರ ದೋಣಿಗಳಿಗೆ ನೀಡಲಾಗುವ ಸಬ್ಸಿಡಿ ಆಧಾರಿತ ಡೀಸೆಲ್ ಅನ್ನು 15 ಲಕ್ಷದಿಂದ 17 ಲಕ್ಷ ಲೀಟರ್ಗಳವರೆಗೆ ಏರಿಸಲು ತೀರ್ಮಾನ ಮಾಡಲಾಗಿದೆ. ಇದಕ್ಕೆ ಸರ್ಕಾರದಿಂದ 250 ಕೋಟಿ ರೂ.ಗಳ ನೆರವು ಸಿಗಲಿದೆ.
4. ಕರಾವಳಿ ಮೀನುಗಾರಿಕೆಗೆ ಬಯಲು ಸೀಮೆಯಲ್ಲೂ ಉತ್ತಮ ಮಾರುಕಟ್ಟೆ ಕಲ್ಪಿಸುವ ಸಲುವಾಗಿ ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿಯಲ್ಲಿ ಸೀಗಡಿ ಕ್ಲಸ್ಟರ್ ನಿರ್ಮಿಸಲು ಯೋಜನೆ ರೂಪಿಸಿದ್ದೇವೆ.
5. ಮೀನುಗಾರರಿಗೆ ನೆರವಾಗಲು 62 ಎಫ್ಎಫ್ಪಿಓಗಳ ಸ್ಥಾಪನೆ ಮಾಡಲಾಗುವುದು. ಹಾಹೆಯೇ 12,175 ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಮತ್ಸ್ಯಸಿರಿ ಯೋಜನೆ ರೂಪಿಸಲಾಗುವುದು
ಸಾಂಪ್ರದಾಯಿಕ ಮೀನುಗಾರರ ಜೀವನೋಪಾಯವನ್ನು ಉತ್ತಮಪಡಿಸಲು ಕರಾವಳಿ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಮತ್ಸ್ಯಸಿರಿ ಯೋಜನೆ ಯನ್ನು ರೂಪಿಸಲಾಗಿದೆ.

ಜಿಪಿಎಸ್ ಯೋಜನೆಗೆ ಖರ್ಚಾಗುವ ವೆಚ್ಚ
ಮೀನುಗಾರರು ಮತ್ತು ಅವರ ದೋಣಿಗಳ ಸುರಕ್ಷತೆಗಾಗಿ 17 ಕೋಟಿ ರೂ. ಅನುದಾನದಲ್ಲಿ ಇಸ್ರೋ ಅಭಿವೃದ್ಧಿಪಡಿಸಿರುವ ಜಿಪಿಎಸ್ ಸಂವಹನ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಇದನ್ನು ಎಲ್ಲಾ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಲ್ಲಿ ಅಳವಡಿಸಲಾಗುವುದು. ಇದು ಆಳ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದಾಗ ದೋಣಿಗಳನ್ನು ಪತ್ತೆ ಹಚ್ಚಲು ಸಹಕಾರಿಯಾಗಲಿದೆ.

ಮೀನುಗಾರರಿಗೆ ಸೂರು ಕಲ್ಪಿಸಲಾಗುತ್ತದೆ
ಮೀನುಗಾರರಿಗೆ ವಸತಿ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಿರುವ ಸರ್ಕಾರ ಕಳೆದ ವರ್ಷ ವಸತಿ ರಹಿತ ಮೀನುಗಾರರಿಗೆ 5,000 ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು ವಿಸ್ತರಿಸಲಾಗುವುದು. 10,000 ವಸತಿರಹಿತ ಮೀನುಗಾರರಿಗೆ ಸೂರು ಕಲ್ಪಿಸಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದರು.

40 ಕೋಟಿ ರೂಪಾಯಿ ಮೀಸಲು
ಸೀಮೆಎಣ್ಣೆ ಬಳಕೆಯಿಂದ ಉಂಟಾಗುವ ಪರಿಸರ ಮಾಲಿನ್ಯ ಮತ್ತು ಅದರ ಬೆಲೆಯ ಏರಿಳಿತದಿಂದ ದೋಣಿ ಚಾಲನೆ ಮಾಡುವವರಿಗೆ ಉಂಟಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. 2 ವರ್ಷಗಳಲ್ಲಿ ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ, ಪೆಟ್ರೋಲ್, ಡೀಸೆಲ್ ಆಧಾರಿತ ಮೋಟಾರ್ ಇಂಜಿನ್ ಅನ್ನು ಅಳವಡಿಸಲಾಗುವುದು. ಇದಕ್ಕೆ ತಲಾ 50 ಸಾವಿರ ರೂಪಾಯಿಯಂತೆ ಸಹಾಯಧನ ನೀಡಲಾಗುವುದು. ಇದಕ್ಕೆ ಪ್ರಸಕ್ತ ವರ್ಷದಲ್ಲಿ 40 ಕೋಟಿ ರೂಪಾಯಿ ಮೀಸಲಿಡಲಾಗುತ್ತದೆ. ಈ ಪ್ರಕ್ರಿಯೆಯು ಪೂರ್ಣಗೊಳ್ಳುವವರೆಗೆ ಮುಂದಿನ 2 ವರ್ಷಗಳ ಅವಧಿಗೆ ಸೀಮೆಎಣ್ಣೆ ಸಹಾಯಧನ ಮುಂದುವರೆಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.












Click it and Unblock the Notifications