Karnataka Budget 2023: ಮೈಸೂರಿನಲ್ಲೇ ಚಿತ್ರನಗರಿ ಸ್ಥಾಪನೆ ಎಂದ ಸಿದ್ದರಾಮಯ್ಯ
ಬೆಂಗಳೂರು, ಜುಲೈ 7: ನಮ್ಮ ಸರ್ಕಾರವು ಹಿಂದೆ ಘೋಷಿಸಿದಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿಯನ್ನು ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರ್ಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ ಇಲ್ಲಿಯವರೆಗೂ ಅನುಷ್ಠಾನಗೊಳಿಸಿರುವುದಿಲ್ಲ. ನಮ್ಮ ಸರ್ಕಾರವು ಹಿಂದೆ ಘೋಷಿಸಿದಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿರುವ ಡಾ. ರಾಜ್ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗುವುದು. ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿತ್ತು. ಈ ಬಾರಿ, ಆಯ್ಕೆ ಸಮಿತಿಗಳನ್ನು ರಚಿಸಿ, ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದ್ದಾರೆ.
ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುವ ಮಾಸಾಶನ ಮೊತ್ತವನ್ನು 10 ಸಾವಿರ ರೂ. ಗಳಿಂದ 12 ಸಾವಿರ ರೂ. ಗಳಿಗೆ ಹೆಚ್ಚಿಸಲಾಗುವುದು. ಮಾಸಾಶನ ಪಡೆಯುವ ಪತ್ರಕರ್ತರು ಮೃತಪಟ್ಟಾಗ ನೀಡಲಾಗುವ ಕುಟುಂಬ ಮಾಸಾಶನ ಮೊತ್ತವನ್ನು ಮೂರು ಸಾವಿರ ರೂ. ಗಳಿಂದ ಆರು ಸಾವಿರ ರೂ. ಗಳಿಗೆ ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸರ್ಕಾರದ ವಿವಿಧ ಕಾರ್ಯಕ್ರಮ/ಯೋಜನೆಗಳ ಅನುಷ್ಠಾನಕ್ಕಾಗಿ ಇಲಾಖೆಗಳ ಮಧ್ಯೆ ಸಮನ್ವಯತೆ ಸಾಧಿಸಿ ಜಂಟಿ ನಿರ್ಧಾರ ಕೈಗೊಂಡು ಅನುಮೋದನೆ ನೀಡಲು ಅನುವಾಗುವಂತೆ ಜಿಐಎಸ್ (GIS) ಆಧಾರಿತ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು. ರಾಜ್ಯ ವಿಧಾನ ಮಂಡಲದ ಕಲಾಪಗಳನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಹಾಗೂ ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಕಲಾಪದ ಮಾಹಿತಿ ಸುಲಭವಾಗಿ ಲಭ್ಯವಾಗಿಸುವ ನಿಟ್ಟಿನಲ್ಲಿ ವಿಧಾನ ಮಂಡಲದ ಚಟುವಟಿಕೆಗಳ ಡಿಜಿಟಲೀಕರಣದ ಯೋಜನೆಯನ್ನು ಹೊಸದಾಗಿ ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಕೆ-ಜಿ.ಐ.ಎಸ್. (KGIS) ತಂತ್ರಜ್ಞಾನವನ್ನು ಆಧರಿಸಿ ವೈಜ್ಞಾನಿಕ ಮತ್ತು ತರ್ಕಬದ್ದ ಮಾರ್ಗಸೂಚಿ ದರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು. ಪ್ರಾಯೋಗಿಕವಾಗಿ ಈ ಯೋಜನೆಯನ್ನು ಒಂದು ಜಿಲ್ಲೆಯಲ್ಲಿ ಪ್ರಾರಂಭಿಸಲಾಗುವುದು ಮತ್ತು ಹಂತ ಹಂತವಾಗಿ ರಾಜ್ಯದೆಲ್ಲೆಡೆ ಜಾರಿಗೊಳಿಸಲಾಗುವುದು.
ಪ್ರಮುಖ ಸೇವಾಸಿಂಧು ಸೇವೆಗಳನ್ನು ಸಕಾಲ ವಿನ್ಯಾಸಕ್ಕೆ ಅನುಗುಣವಾಗಿ ಪರಿವರ್ತಿಸಲು Business Process Re-engineering ಕೋಶವನ್ನು ಸ್ಥಾಪಿಸಲಾಗುವುದು. ಇದರಲ್ಲಿ ಪ್ರಮುಖವಾಗಿ ಆದಾಯ ಪ್ರಮಾಣ ಪತ್ರಕ್ಕಾಗಿ ಕುಟುಂಬ ಆದಾಯವನ್ನು ವಸ್ತುನಿಷ್ಠ ನಿರ್ಣಯ ರೂಪದಲ್ಲಿ ಪರಿವರ್ತಿಸಲಾಗುವುದು. ಈ ಯೋಜನೆಗಾಗಿ ಮೂರು ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಸಕಾಲದಡಿ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳು ಸಂಪರ್ಕಿತ ಡೇಟಾಬೇಸ್ (Connected database) ವಿಧಾನ ಬಳಸಿ ಕಡಿಮೆ ಅವಧಿಯಲ್ಲಿ ಸೇವೆಗಳನ್ನು ನೀಡಲು ಬ್ಯಾಕ್ ಎಂಡ್ ಪ್ರಕ್ರಿಯೆಗಳಲ್ಲಿ (backend processes) ಪಾರದರ್ಶಕತೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.












Click it and Unblock the Notifications